ಚಾಮರಾಜನಗರ: ಜಿಲ್ಲೆಯ ವಿವಿಧ ಸರ್ಕಾರಿ ಶಾಲಾ ಕಾಲೇಜುಗಳಿಗೆ ಡಿಜಿಟಲ್ ಕಲಿಕೆ, ಕಂಪ್ಯೂಟರ್ ಶಿಕ್ಷಣ ಸೇರಿದಂತೆ ಇತರೆ ತಾಂತ್ರಿಕ ಸೌಲಭ್ಯಗಳನ್ನು ಇನ್ಫೋಸಿಸ್, ಮೈಸೂರಿನ ರೋಟರಿ ಪಂಚಶೀಲ ಸಂಸ್ಥೆ ಒದಗಿಸಲು ಮುಂದೆ ಬಂದಿದ್ದು, ಈ ಸಂಬಂಧ ಗುರುವಾರ (ಸೆ.೭) ಜಿಲ್ಲಾಧಿಕಾರಿಯವರಾದ ಸಿ.ಟಿ. ಶಿಲ್ಪಾನಾಗ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳು, ಕಾಲೇಜುಗಳ ಸಮಗ್ರ ಮಾಹಿತಿ ಹಾಗೂ ಲಭ್ಯವಿರುವ ಶೈಕ್ಷಣಿಕ ಸೌಲಭ್ಯಗಳ ಕುರಿತು ವಿವರಿಸಲಾಯಿತು.
ಇನ್ಫೋಸಿಸ್ ಸಂಸ್ಥೆಯು ಶಾಲಾ ಕಾಲೇಜು ಹಾಗೂ ತಾಂತ್ರಿಕ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸ್ಪ್ರಿಂಗ್ ಬೋರ್ಡ್ನಲ್ಲಿ ರಾಜ್ಯ ಪಠ್ಯಕ್ರಮ, ಐ.ಸಿ.ಎಸ್.ಸಿ, ಸಿ.ಬಿ.ಎಸ್.ಸಿ, ಕೆರಿಯರ್ ಗೈಡೆನ್ಸ್ ಹಾಗೂ ಇನ್ನಿತರ ಹಲವಾರು ಅಂಶಗಳ ಬಗ್ಗೆ ಕಲಿಯಲು ಅವಕಾಶವಿರುವ ಕಾರ್ಯಕ್ರಮವನ್ನು ಮಾಡಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಲಿದೆ. ಚಾಮರಾಜನಗರ ಜಿಲ್ಲೆಯಲ್ಲಿರುವ ೫೦ ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಕಂಪ್ಯೂಟರ್ ಶಿಕ್ಷಣ ನೀಡಲಾಗುವುದು. ಸೈಬರ್ ಸೆಕ್ಯುರಿಟಿ ಕೋರ್ಸ್ ಬಗ್ಗೆ ತಿಳಿಸಿಕೊಡಲಾಗುವುದು ಎಂದು ಇನ್ಫೋಸಿಸ್ ಸಂಸ್ಥೆಯ ಬಿಳಿಗಿರಿರಂಗ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಮಾತನಾಡಿ ಆಯ್ದ ಶಾಲಾ ಕಾಲೇಜುಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಇನ್ಫೋಸಿಸ್ ಸಂಸ್ಥೆಯವರೊಂದಿಗೆ ತಕ್ಷಣವೇ ಭೇಟಿ ನೀಡಿ ಶಿಕ್ಷಕರು, ಬೋಧಕರೊಂದಿಗೆ ಚರ್ಚಿಸಿ ಶಾಲಾ ವಿದ್ಯಾರ್ಥಿಗಳಿಗೆ ಕಾರ್ಯಕ್ರಮ ಅನುಷ್ಠಾನ ಸಂಬಂಧ ಕ್ರಮವಹಿಸಬೇಕು ಎಂದು ಸೂಚಿಸಿದರು.
ಪ್ರತಿ ಬ್ಲಾಕ್ ನಿಂದ ೧೦ ಶಾಲೆಗಳನ್ನು ಹಾಗೂ ಪ್ರತಿ ಶಾಲೆಯಿಂದ ಇಬ್ಬರು ಶಿಕ್ಷಕರನ್ನು ಕಂಪ್ಯೂಟರ್ ಶಿಕ್ಷಣಕ್ಕೆ ಪಟ್ಟಿ ಮಾಡಿಕೊಳ್ಳಬೇಕು. ಗ್ರಾಮೀಣ, ಬಡ ಮಕ್ಕಳು ಹೆಚ್ಚು ಸಂಖ್ಯೆಯಲ್ಲಿರುವ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಪರಿಶಿಷ್ಟ ವರ್ಗದ ವಸತಿ ಶಾಲೆಗಳು, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ತಾಂತ್ರಿಕ ಕಾಲೇಜುಗಳು, ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಬೇಕು ಎಂದರು.
ಆಫ್ಲೈನ್ ಹಾಗೂ ಕನ್ನಡ ಮಾಧ್ಯಮದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಬೇಕು. ಇಸ್ರೋ, ಪ್ಲಾನಿಟೇರಿಯಂ, ಇನ್ಫೋಸಿಸ್ ಕ್ಯಾಂಪಸ್ಗೆ ಜಿಲ್ಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯಬೇಕು. ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಅಧ್ಯಯನ ಮಾಡುವ ವಿಭಾಗಗಳಿಗೆ ಸಂಬಂಧಿಸಿದ ವಿವಿಧ ಕೋರ್ಸ್ಗಳ ತರಬೇತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ತಿಳಿಸಿದರು.
ರೋಟರಿ ಪಂಚಶೀಲ ಸಂಸ್ಥೆಯ ಕಿರಣ್ ರಾಬರ್ಟ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸರಸ್ವತಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ ಪ್ರಸನ್ನ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ಕ್ಷೇತ್ರ ಶಿಕ್ಷಾಣಧಿಕಾರಿಗಳು, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳ ಪ್ರಾಂಶುಪಾಲರು ಸಭೆಯಲ್ಲಿ ಉಪಸ್ಥಿತರಿದ್ದರು.