ಚಾಮರಾಜನಗರ, ಅ.9- ಕರ್ನಾಟಕ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರು ನಿಲ್ಲಿಸುವಂತೆ ಕರ್ನಾಟಕ ಸೇನಾಪಡೆ ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು, ಇಂದು ಕೂಡ ಪೊರಕೆ ಚಳುವಳಿ ನಡೆಸಿದರು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಪೊರಕೆ ಹಿಡಿದು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಅಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆನಡೆಸಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ, ತಮಿಳುನಾಡು ಸರ್ಕಾರದ ವಿರದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕಳೆದ 1 ತಿಂಗಳಿನಿಂದಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಪೊರಕೆ ಚಳವಳಿ ನಡೆಸಲಾಗಿದೆ. ರಾಜ್ಯ ಸರ್ಕಾರ ಕೂಡಲೇ ನೀರನ್ನುನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಕಾವೇರಿ ನೀರನ್ನು ತಮಿಳುನಾಡಿನ 3 ಬೆಳೆಗೆ ಹರಿಸಲಾಗುತ್ತಿದೆ. ಆದರೆ, ನಮ್ಮಲ್ಲಿ ಕುಡಿಯಲು ನೀರಿಲ್ಲ, ತರಕಾರಿ ಬೆಳೆಗಳು ಒಣಗುತ್ತಿವೆ, ಇಂತಹ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು, ನೀರು ಹರಿಸಿ ಮತ್ತೇ ಮತ್ತೇ ರೈತರನ್ನು ಸಂಕಷ್ಟಕ್ಕೆ ದೂಡಬಾರದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಿರುದ್ಧ ಗಾಯದ ಮೇಲೆ ಬರೆ ಎಳೆಯುತ್ತಿದ್ದು ವಾಸ್ತವ ಸ್ಥಿತಿ ಅರಿತು ಸಂಕಷ್ಟ ಸೂತ್ರ ಕೊಡಲಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಗು.ಪುರುಷೋತ್ತಮ್, ಲಿಂಗರಾಜು, ನಂಜುಂಡಸ್ವಾಮಿ, ಕೃಷ್ಣಯ್ಯ, ರವಿಚಂದ್ರಪ್ರಸಾದ್ ಕಹಳೆ, ಆಟೋ ನಾಗೇಶ್, ಸೋಮವಾರಪೇಟೆ ಮಂಜು, ಇತರರು ಭಾಗವಹಿದ್ದರು.