ದಸರಾ ಗಜಪಡೆಗೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾಗತಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಅರಮನೆಗೆ ಸ್ವಾಗತಿಸಿದರು.

ಜಿಲ್ಲಾಡಳಿತ ಮತ್ತು ಅರಮನೆ ಮಂಡಳಿ ವತಿಯಿಂದ ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01 ರಿಂದ 12.51 ಗಂಟೆಯ ಅಭಿಜಿತ್ ಲಗ್ನದಲ್ಲಿ ಅಂಬಾರಿ ಆನೆ ಅಭಿಮನ್ಯು ನೇತೃತ್ವದ ವಿಜಯ, ವರಲಕ್ಷ್ಮಿ, ಧನಂಜಯ, ಮಹೇಂದ್ರ, ಭೀಮ, ಗೋಪಿ, ಕಂಜನ್ ಒಳಗೊಂಡ ಗಜಪಡೆಗೆ ಪಾದಪೂಜೆ, ದ್ವಾರಪಾಲಕ ಪೂಜೆ, ಚಾಮರಸೇವೆ ಮಾಡಿ ಪುಷ್ಪಾರ್ಚನೆ ಅರ್ಪಿಸಲಾಯಿತು.
ಜಾನಪದ ಕಲಾತಂಡಗಳ ನೃತ್ಯ, ಪೂರ್ಣಕುಂಭ ಸ್ವಾಗತ ಮತ್ತು ಮಂಗಳ ವಾದ್ಯ, ಪೊಲೀಸ್ ಬ್ಯಾಂಡ್ ನಿನಾದದೊಂದಿಗೆ ಜಯಮಾರ್ತಾಂಡ ದ್ವಾರದಿಂದ ಅರಮೆನೆಯ ಅಂಗಳಕ್ಕೆ ಗಜಪಡೆಯನ್ನು ಬರಮಾಡಿಕೊಳ್ಳಲಾಯಿತು. ಅಭಿಮನ್ಯು ನೇತೃತ್ವದ ಗಜಪಡೆಯು ರಾಜಗಾಂಭೀರ್ಯದಿoದ ಹೆಜ್ಜೆ ಹಾಕಿದವು.

ಅರಮನೆ ಮುಂಭಾಗ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರು ಪುಷ್ಪಾರ್ಚನೆ ಮಾಡಿದರು. ನಂತರ ಗಜಪಡೆಯ ಕಾವಾಡಿಗರು ಮತ್ತು ಮಾವುತರಿಗೆ ಮೂಲಭೂತ ಸಾಮಾಗ್ರಿಗಳನ್ನು ವಿತರಿಸಿದರು. ದಸರಾವನ್ನು ಅತ್ಯುತ್ತಮವಾಗಿ ನಡೆಸಿಕೊಡುವಂತೆ ದಸರಾ ವಿಶೇಷ ಕರ್ತವ್ಯ ಅಧಿಕಾರಿಗಳಿಗೂ ಕೂಡ ಸಚಿವರು ತಾಂಬೂಲ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾಡಹಬ್ಬ ಮೈಸೂರು ದಸರಾವನ್ನು ಮೈಸೂರಿನ ಪರಂಪರೆ ಮತ್ತು ವಿಜಯನಗರದ ವೈಭವವನ್ನು ಪ್ರತಿಬಿಂಬಿಸುವoತೆ ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಈ ಹಿನ್ನೆಲೆ ಜಿಲ್ಲಾಡಳಿತ, ಅರಮನೆ ಮಂಡಳಿ ಹಾಗೂ ಜಿಲ್ಲೆಯ ಪೊಲೀಸ್ ಇಲಾಖೆಗೆ ವಿಶೇಷ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.
ಪ್ರತಿನಿತ್ಯ ಪೊಲೀಸ್ ಬಂದೋಬಸ್ತ್ನಲ್ಲಿ ಗಜಪಡೆಗೆ ತಾಲೀಮು ನಡೆಯಲಿದೆ. ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳ ಮಾವುತರು ಹಾಗೂ ಕಾವಾಡಿಗಳು ಅವರ ಕುಟುಂಬಗಳ ವಾಸ್ತವ್ಯಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಈ ಹಿನ್ನೆಲೆ ಅರಮನೆ ಅಂಗಳದಲ್ಲಿ 30 ಕ್ಕೂ ಹೆಚ್ಚು ಸುಸಜ್ಜಿತ ಶೆಡ್ ನಿರ್ಮಾಣ ಮಾಡಲಾಗಿದೆ. ಅವರಿಗೆ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿದೆ ಎಂದರು.

ಆನೆಗಳ ಜೊತೆ ಸರಿಸುಮಾರು ಎರಡು ತಿಂಗಳ ಕಾಲ ಅರಮನೆ ಆವರಣದಲ್ಲಿ ವಾಸವಿರುವ ಮಾವುತರು ಮತ್ತು ಕಾವಾಡಿಗರ ಕುಟುಂಬಕ್ಕೆ ಮೂಲ ಸೌಲಭ್ಯದ ಜೊತೆಗೆ ಅವರ ಮಕ್ಕಳಿಗೆ ತಾತ್ಕಾಲಿಕವಾಗಿ ಶಾಲೆ ಆರಂಭಿಸಲಾಗುವುದು. ಈ ಅವಧಿಯಲ್ಲಿ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲಾಗುತ್ತದೆ ಎಂದು ತಿಳಿಸಿದರು.

ದಸರಾ ಸಂಬoಧ ನಗರದಲ್ಲಿ ಕಾಮಗಾರಿ ಕೈಗೊಳ್ಳಲು ಈಗಾಗಲೇ ಮುಖ್ಯಮಂತ್ರಿಗಳು ಅಗತ್ಯ ಅನುದಾನವನ್ನು ಬಿಡುಗಡೆಗೊಳಿಸುವಂತೆ ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ. ಕಳೆದ ಬಾರಿ ನಾನು ಲೋಕೋಪಯೋಗಿ ಸಚಿವನಾಗಿದ್ದಾಗಲೇ ಮೈಸೂರಿನಲ್ಲಿ ಅನೇಕ ಗುಣಾತ್ಮಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಅದರಂತೆ ದಸರಾಗೆ ಅಗತ್ಯವಿರುವ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಬರಪೀಡಿತ ತಾಲ್ಲೂಕುಗಳನ್ನು ಮಾನದಂಡಗಳ ಮುಖೇನ ಗುರುತಿಸಿ ಸಂಬoಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಸದ್ಯದಲ್ಲಿಯೇ ಎಚ್.ಡಿ.ಕೋಟೆ ಮತ್ತು ತಿ.ನರಸೀಪುರವನ್ನು ಬರಪೀಡಿತ ತಾಲ್ಲೂಕುಗಳಾಗಿ ಘೋಷಿಸುವ ಬಗ್ಗೆ ವರದಿ ಇದೆ. ಮಳೆ ಪ್ರಮಾಣದ ಆಧಾರವನ್ನು ಗಮನದಲ್ಲಿರಿಸಿ ಸಚಿವ ಸಂಪುಟ ಸಭೆಯಲ್ಲಿ ಎಲ್ಲವನ್ನೂ ಕೂಲಂಕಷವಾಗಿ ಚರ್ಚೆಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷ ನಡೆಯುತ್ತಿರುವುದು ಗಮನದಲ್ಲಿದೆ. ಈ ಸಂಬAಧ ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗಿದೆ. ಸಂಘರ್ಷ ತಡೆಯಲು ಈಗಾಗಲೇ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಎಚ್.ಡಿ.ಕೋಟೆಯಲ್ಲಿ ಮಗುವಿನ ಮೇಲೆ ದಾಳಿ ಮಾಡಿರುವ ಹುಲಿಯನ್ನು ಹಿಡಿಯಲು ಸರ್ಕಾರ ಸೂಚನೆ ನೀಡಿದೆ. ಕಾಡಂಚಿನ ಜನರ ರಕ್ಷಣೆಗೆ ಹಾಗೂ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.
ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಶಾಸಕರಾದ ಕೆ.ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ, ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *