ಚಾಮರಾಜನಗರ: ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇದರ ವಿರುದ್ದ ಹೋರಾಡಲು ಹೆಣ್ಣು ಮಕ್ಕಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು. ಶಿಕ್ಷಣದ ಜೊತೆಗೆ ಕಾನೂನಿನ ಅರಿವು ಪಡೆದುಕೊಳ್ಳಬೇಕು. ಸಮಾಜದಲ್ಲಿ ನಡೆಯುವ ಮಕ್ಕಳ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆ ಜಾಗೃತರಾಗಬೇಕು. ಶಿಕ್ಷಣದಿಂದ ಉನ್ನತ ಜ್ಞಾನ ಬೆಳೆಸಿಕೊಂಡು ಜೀವನದಲ್ಲಿ ಮುಂದೆ ಬರಬೇಕು ಎಂದರು.

ಮಹಿಳೆಯರು ಮುಕ್ತವಾಗಿ ದೌರ್ಜನ್ಯಗಳ ವಿರುದ್ಧ ಹೋರಾಡಬೇಕು. ಮಹಿಳೆಯರು ಕಾನೂನು ಕಾಯ್ದೆಗಳನ್ನು ತಿಳಿದುಕೊಂಡು ಇತರರಿಗೂ ತಿಳಿವಳಿಕೆ ನೀಡಬೇಕು ಎಂದು ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಮಾತನಾಡಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾ ರಂಗ ಸಮಾಜದಲ್ಲಿ ನಡೆಯುವ ಹಲವಾರು ಅನ್ಯಾಯಗಳ ವಿರುದ್ಧ ಧ್ವನಿ ಎತ್ತುತ್ತಿದೆ. ಕಾನೂನು ಬಗ್ಗೆಯೂ ಹೆಚ್ಚು ತಿಳಿದುಕೊಳ್ಳುವುದು ಉಪಯುಕ್ತವಾಗಲಿದೆ. ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಮಾತನಾಡಿ ಪ್ರಸ್ತುತ ಸಮಾಜದಲ್ಲಿ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅಗತ್ಯ. ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಸರ್ವ ಜನರ ಹಿತ ಅಡಗಿದೆ. ಮೂಲಭೂತ ಹಕ್ಕುಗಳು, ಕರ್ತವ್ಯಗಳು, ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಜ್ಞಾನ ಪಡೆಯಬೇಕು ಎಂದರು.
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಂ. ಆರ್. ಸುಮತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇದೇ ವೇಳೆ ವಿಜಯ ಕರ್ನಾಟಕ ದಿನಪತ್ರಿಕೆ ವರದಿಗಾರರಾದ ಹರವೆ ಮಹೇಶ್, ಈ ಟಿ.ವಿ ಹಾಗೂ ಜಿ ಕನ್ನಡ ವಾಹಿನಿ ವರದಿಗಾರರಾದ ಸುರೇಂದ್ರ, ಮೈಸೂರಿನ ಆಂದೋಲನಾ ದಿನಪತ್ರಿಕೆಯ ವರದಿಗಾರರಾದ ಕೆ.ಬಿ. ರಮೇಶ್ನಾಯಕ್ ಅವರಿಗೆ ಗಡಿ ಕನ್ನಡಿಗ ಮಾಧ್ಯಮ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ವಿಜೇತ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.
ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ. ವಿರೂಪಾಕ್ಷಸ್ವಾಮಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಜಿ. ಬಂಗಾರು, ಸಮಾಜ ಸೇವಕರಾದ ಮಹಮ್ಮದ್ ಅಸ್ಗರ್ ಮುನ್ನಾ, ರಾಜ್ಯಶಾಸ್ತ್ರ ವಿಭಾಗದ ಶೈಲೇಶ್ ಕುಮಾರ್, ಅರ್ಥಶಾಸ್ತ್ರ ವಿಭಾಗದ ಡಾ. ಪ್ರಭಾವತಿ ಎಂ.ಡಿ, ಕನ್ನಡ ವಿಭಾಗದ ಡಾ. ರುಕ್ಮಿಣಿ ಹೆಚ್.ಎಸ್, ಭೂಗೋಳಶಾಸ್ತ್ರ ವಿಭಾಗದ ಡಾ. ಮಂಜುನಾಥ್. ಸಿ, ಕ್ರೀಡಾ ವಿಭಾಗದ ಡಾ. ಶಾಂತರಾಜು ಇತರರು ಉಪಸ್ಥಿತರಿದ್ದರು.