ನಗರದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ : ಅಕರ್ಷಕ ಪಥಸಂಚಲನ

ಚಾಮರಾಜನಗರ: ಕರ್ನಾಟಕ ಸಂಭ್ರಮ-50ರ ಅಂಗವಾಗಿ ನಗರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಶಿಷ್ಟ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಶಾಲಾ ಮಕ್ಕಳಿಂದ ಅಕರ್ಷಕ ಪಥಸಂಚಲನ ನಡೆಯಿತು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ಸಂಭ್ರಮ-50ರ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಮೀಸಲು ಪಡೆ, ಸಿವಿಲ್ ಪೊಲೀಸ್ ಪಡೆ, ಅರಣ್ಯ ರಕ್ಷಕ ಪಡೆ, ಗೃಹ ರಕ್ಷಕ ದಳ, ಪೊಲೀಸ್ ಬ್ಯಾಂಡ್, ಸೇರಿದಂತೆ ವಿವಿಧ ಶಾಲಾ ಮಕ್ಕಳ ತಂಡಗಳು ಅರಕ್ಷಕ ನಿರೀಕ್ಷಕ ರಂಗಸ್ವಾಮಿಯವರ ನೇತೃತ್ವದಲ್ಲಿ ನಡೆಸಿದ ಅಕರ್ಷಕ ಪಥಸಂಚಲನ ಎಲ್ಲರ ಗಮನ ಸೆಳೆಯಿತು.

ಕರ್ನಾಟಕ ರಾಜ್ಯೋತ್ಸವದ ಶುಭ ಸಂದೇಶ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಮಾತನಾಡಿ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಕನ್ನಡನಾಡಿಗೆ ಕಲೆ, ಸಾಹಿತ್ಯ, ಸಂಸ್ಕøತಿಯಲ್ಲಿ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ಭಾಷಾ ವಿಷಯದಲ್ಲಿ ಚಾಮರಾಜನಗರ ಭಾಷೆಯ ತೊಟ್ಟಿಲು ಆಗಿದೆ. ಪಶ್ಚಿಮದ ಮೂಲೆಹೊಳೆಯಿಂದ ಪೂರ್ವದ ಹೊಗೇನಕಲ್‍ವರೆಗಿನ ಪ್ರದೇಶಗಳಲ್ಲಿ ಗಟ್ಟಿಯಾಗಿ ಕನ್ನಡ ಭಾಷೆ ಮಾತನಾಡುವ ಜನಸಮೂಹವಿದೆ. ನೆರೆರಾಜ್ಯಗಳ ಆಳ್ವಿಕೆಯ ಒತ್ತಡಗಳಿಗೆ ಸಿಲುಕಿದರೂ ಸಹ ಗಡಿಜಿಲ್ಲೆಯ ಯಾವುದೇ ಭಾಗದ ಜನರು ಕನ್ನಡವನ್ನು ಬಿಡದೇ, ಅನ್ಯಭಾಷೆಗಳಿಂದ ಪ್ರಭಾವಿತರಾಗದಿರುವುದು ಹೆಮ್ಮಯ ಸಂಗತಿ ಎಂದು ಹೇಳಿದರು.

ಜಗತ್ತಿನ ಜಾನಪದ ಸಾಹಿತ್ಯ ಕಾವ್ಯಗಳಲ್ಲಿ ಉನ್ನತ ಸ್ಥಾನ ಗಳಿಸಿರುವ ಮಲೆ ಮಹದೇಶ್ವರ ಕಾವ್ಯ ಹಾಗೂ ಮಂಟೇಸ್ವಾಮಿ, ಬಿಳಿಗಿರಿರಂಗ, ಸಿದ್ದಪ್ಪಾಜಿ, ಕಾವ್ಯಗಳು ಕನ್ನಡನಾಡಿಗೆ ಜಿಲ್ಲೆಯ ಕೊಡುಗೆಯಾಗಿವೆ. ಕಂಸಾಳೆ, ಗೊರವರ ಕುಣಿತ, ವೀರಭದ್ರ ನೃತ್ಯ, ತಂಬೂರಿ, ನೀಲಗಾರರ ಸಾಂಸ್ಕøತಿಕ ಪರಂಪರೆ ಜಿಲ್ಲೆಗೆ ಕೀರ್ತಿ ತಂದಿವೆ. ಕಾವ್ಯ, ನಾಟಕ, ಚಲನಚಿತ್ರ ಕ್ಷೇತ್ರಗಳಲ್ಲಿ ಜಿಲ್ಲೆಯ ಅಮೂಲ್ಯ ಸಾಧನೆಗೈದಿದೆ. ಅಪಾರ ಪ್ರಾಕೃತಿಕ ಸಂಪತ್ತನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯ ಬುಡಕಟ್ಟು ಜನರ ಸಾಹಿತ್ಯ, ಸಂಗೀತ ರಾಜ್ಯದಲ್ಲಿಯೇ ಮನೆಮಾತಾಗಿದೆ ಎಂದು ಸಚಿವರಾದ ವೆಂಕಟೇಶ್ ಅವರು ತಿಳಿಸಿದರು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಇತರೆ ಗಣ್ಯರು ಕನ್ನಡ ತಾಯಿ ಭುವನೇಶ್ವರಿ ಹಾಗೂ ರಾಷ್ಟ್ರನಾಯಕರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50ರ ಅಂಗವಾಗಿ ನಾಡಿನ ಹೆಸರಾಂತ ಕವಿಗಳ 5 ಕನ್ನಡ ಗೀತೆಗಳಾದ ಹುಯಿಲಗೋಳ ನಾರಾಯಣರಾಯ ವಿರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ಕುವೆಂಪುರವರ ಎಲ್ಲಾದರೂ ಇರು ಎಂತಾದರೂ ಇರು, ದ.ರಾ. ಬೇಂದ್ರೆಯವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕರ ಹೊತ್ತಿತೋ ಹೊತ್ತಿತು ಕನ್ನಡದ ದೀಪ ಹಾಗೂ ಚೆನ್ನವೀರ ಕಣವಿಯವರ ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಗೀತೆಗಳನ್ನು ಕಲಾವಿದರಾದ ರಾಜಪ್ಪ, ಮಂಜುನಾಥ್, ಲತಾಪುಟ್ಟಸ್ವಾಮಿ, ದೊರೆಸ್ವಾಮಿ ಹಾಗೂ ವಿವಿಧ ಶಾಲಾ ಮಕ್ಕಳು ಅತ್ಯಂತ ಸುಶ್ರಾವ್ಯವಾಗಿ ಹಾಡಿದರು.

ನಗರದ ಸಂತ ಪೌಲರ ವಿದ್ಯಾಸಂಸ್ಥೆ, ಸಂತ ಪ್ರಾನ್ಸಿಸ್ ಅಂಗ್ಲ ಮಾಧ್ಯಮ ಶಾಲೆ, ಸೇವಾಭಾರತಿ ಹಾಗೂ ದೀನಬಂಧು ಶಾಲಾ ಮಕ್ಕಳು ಕನ್ನಡ ನಾಡು-ನುಡಿ ಮಹತ್ವ ಸಾರುವ ಗೀತೆಗಳಿಗೆ ಹೆಜ್ಜೆ ಹಾಕಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ನಂತರ ಪಥಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ತಂಡಗಳಿಗೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನೀಡಿದ ವಿವಿಧ ಶಾಲಾ ಮಕ್ಕಳ ತಂಡಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಬಹುಮಾನ ಹಾಗೂ ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು.

ಇದೇ ವೇಳೆ ಅಂಧತ್ವ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಶಾಕಿರಣ ಕಾರ್ಯಕ್ರಮ ಸೇರಿದಂತೆ ವಿವಿಧ ಆರೋಗ್ಯ ಯೋಜನೆಗಳನ್ನು ಪ್ರಚುರಪಡಿಸುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಚಾರಿ ಸ್ತಬ್ಧಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಅಲ್ಲದೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದ ಉದ್ಯಾನವನದಲ್ಲಿರುವ ಭುವನೇಶ್ವರಿ ದೇವಿಯ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಮಾಲಾರ್ಪಣೆ ಮಾಡಿದರು. ತದನಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೂ ಮಾಲಾರ್ಪಣೆ ಮಾಡಿ ಗೌರವ ಸಮರ್ಪಣೆ ಮಾಡಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

ಇದಕ್ಕೂ ಮೊದಲು ಇಂದು ಬೆಳಿಗ್ಗೆಯೇ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಧ್ವಜಾರೋಹಣ ನೆರವೇರಿಸಿದರು. ಗಡಿಜಿಲ್ಲೆಯಾಗಿರುವ ಚಾಮರಾಜನಗರದಲ್ಲಿ ಈ ಬಾರಿ ವಿಶೇಷವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸುಸಂದರ್ಭದಲ್ಲಿ ಪ್ರತಿಯೊಬ್ಬರು ಜಿಲ್ಲೆಯ ಅಭಿವೃದ್ಧಿಗೆ ಸೇವೆ ಸಲ್ಲಿಸಬೇಕಾಗಿದೆ ಎಂದರು.

ಬಳಿಕ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

Leave a Reply

Your email address will not be published. Required fields are marked *