ಚಾಮರಾಜನಗರ: ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಜಿಲ್ಲೆಯಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಕಾರಣರಾದ ಏಳು ಮಂದಿ ದೈಹಿಕ ಶಿಕ್ಷಣ ಶಿಕ್ಷಕರನ್ನು ಜಿಲ್ಲಾಧಿಕಾರಿಯವರಾದ ಸಿ.ಟಿ. ಶಿಲ್ಪಾನಾಗ್ ಅವರು ಇಂದು ಗೌರವಿಸಿ ಸನ್ಮಾನಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶ್ರಮಿಸಿರುವ ಏಳು ಮಂದಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಶಾಲು ಹೊದಿಸಿ, ಹಾರ, ಫಲ ತಾಂಬೂಲ ನೀಡಿ ಗೌರವಿಸಿದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಗುಂಡ್ಲುಪೇಟೆ ತಾಲೂಕು ಕೆಲಸೂರಿನ ಸರ್ಕಾರಿ ಪ್ರೌಢಶಾಲೆಯ ಸಿ. ಚಂದ್ರಕುಮಾರ್, ಹನೂರು ತಾಲೂಕು ಚೆನ್ನಲಿಂಗನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೆ. ಜೋಸೆಫ್, ಕೊಳ್ಳೇಗಾಲದ ಸರ್ಕಾರಿ ಆದರ್ಶ ವಿದ್ಯಾಲಯದ ಪಿ. ಸುನೀಲ್ ಕುಮಾರ್, ಚಾಮರಾಜನಗರ ತಾಲೂಕು ಬಾಗಳಿಯ ಸರ್ಕಾರಿ ಪ್ರೌಢಶಾಲೆಯ ಸುದೀಪ್ .ಟಿ, ಸಿದ್ದಯ್ಯನಪುರದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ನಾರಾಯಣ, ಬಾಲಕರ ಪದವಿ ಪೂರ್ವ ಕಾಲೇಜಿನ ಲಕ್ಷ್ಮಣ್ ಕುಮಾರ್, ಜೆಎಸ್ಎಸ್ ಪದವಿ ಪೂರ್ವ ಕಾಲೇಜಿನ ಜೆ. ರವಿಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಸನ್ಮಾನಿಸಿದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಜಿಲ್ಲೆಯ ಶಾಲಾ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಅಪೂರ್ವ ಸಾಧನೆ ಮಾಡಲು ತರಬೇತಿ ಹಾಗೂ ಉತ್ತೇಜನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸಲಾಗಿದೆ. ಸನ್ಮಾನಿತಗೊಂಡ ದೈಹಿಕ ಶಿಕ್ಷಣ ಶಿಕ್ಷಕರು ವೈಯಕ್ತಿಕವಾಗಿಯೂ ಹಲವಾರು ಕ್ರೀಡೆಗಳಲ್ಲಿ ಪಾಲ್ಗೊಂಡು ಉತ್ತಮ ಸಾಧನೆ ಮಾಡಿರುವುದು ಪ್ರಶಂಸನೀಯ. ಸನ್ಮಾನಿತರೆಲ್ಲರಿಗೂ ಅಭಿನಂದಿಸುವುದಾಗಿ ಜಿಲ್ಲಾಧಿಕಾರಿಯವರು ನುಡಿದರು.
ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಪೂರಕವಾಗಿರುವ ದೂರದೃಷ್ಠಿ ಯೋಜನೆಯೊಂದನ್ನು ತಯಾರಿಸಬೇಕಿದೆ. ಕ್ರೀಡಾ ಚಟುವಟಿಕೆಗಳತ್ತ ಆಸಕ್ತಿ ಮೂಡಿಸಿ ಪ್ರೋತ್ಸಾಹಿಸಲು ನೀಲಿ ನಕಾಶೆ ಸಹ ಸಿದ್ದಪಡಿಸಬೇಕಿದೆ. ಈ ಉದ್ದೇಶಕ್ಕಾಗಿ ಇನ್ನೂ ೧೫ ದಿನಗಳೊಳಗೆ ಸಭೆ ಕರೆದು ವಿವರವಾಗಿ ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಕ್ರೀಡಾ ಕ್ಷೇತ್ರದ ಸಾಧಕರಿಂದ ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಸಲಹೆ, ಪ್ರೋತ್ಸಾಹ ನೀಡಲು ಸಂವಾದ ಏರ್ಪಾಡು ಮಾಡಬೇಕು. ವೇಟ್ಲಿಫ್ಟಿಂಗ್, ಮ್ಯಾರಾಥಾನ್ ಸೇರಿದಂತೆ ಇನ್ನಿತರ ವಿಶಿಷ್ಟ ಕ್ರೀಡೆಗಳತ್ತ ಮಕ್ಕಳು ಒಲವು ತೋರಲು ಹಾಗೂ ಹೆಚ್ಚಿನ ಸಾಧನೆ ಮಾಡಲು ಪೂರಕವಾಗಿರುವ ಕ್ರೀಡಾಕೂಟಗಳಿಗೆ ಕರೆದೊಯ್ಯಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ ಅವರು ಮಾತನಾಡಿ ಭಾರತದ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ಜನ್ಮ ದಿನವಾದ ಇಂದು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಇಂತಹ ಸುಸಂದರ್ಭದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ, ವೈಯಕ್ತಿಕವಾಗಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಲು ಶ್ರಮಿಸಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಗುರುತಿಸಿ ಗೌರವಿಸಿರುವುದು ಅರ್ಥಪೂರ್ಣವಾಗಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಾಮಚಂದ್ರರಾಜೇಅರಸ್ ಅವರು ಮಾತನಾಡಿ ಸನ್ಮಾನಿತಗೊಂಡಿರುವ ದೈಹಿಕ ಶಿಕ್ಷಣ ಶಿಕ್ಷಕರು ವೈಯಕ್ತಿಕವಾಗಿಯೂ ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದವರಾಗಿದ್ದಾರೆ. ಶಾಲೆ ಕಾಲೇಜಿಗೂ ಹೆಚ್ಚಿನ ಕೀರ್ತಿ ತಂದಿದ್ದಾರೆ. ಈ ಎಲ್ಲರೂ ಮತ್ತಷ್ಟು ಸಾಧನೆ ಹಿರಿಮೆಗೆ ನಿರಂತರವಾಗಿ ತೊಡಗಿಕೊಳ್ಳಲೆಂದು ಆಶಯ ವ್ಯಕ್ತಪಡಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಆರ್. ಶಂಕರ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
