ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್ ೨೭ರಂದು ಉಚಿತ ಸಾಮೂಹಿಕ ವಿವಾಹವನ್ನು ನಿಗದಿಪಡಿಸಲಾಗಿದೆ.
ಮುಖ್ಯಮಂತ್ರಿಗಳು ಹಾಗೂ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದರಾಮಯ್ಯ, ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಹಾಗೂ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ. ವೆಂಕಟೇಶ್ ಅವರ ಉಪಸ್ಥಿತಿಯಲ್ಲಿ ಸೆಪ್ಟೆಂಬರ್ ೨೭ರಂದು ಬೆಳಿಗ್ಗೆ ೯.೫೦ ರಿಂದ ೧೦.೨೦ ಗಂಟೆಯೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.
ಪ್ರಾಧಿಕಾರದ ವತಿಯಿಂದ ವಧುವಿಗೆ ೪ ಗ್ರಾಂ ತೂಕದ ಚಿನ್ನದ ಮಾಂಗಲ್ಯ, ಬೆಳ್ಳಿ ಕಾಲುಂಗುರ, ಸೀರೆ, ರವಿಕೆ, ವರನಿಗೆ ಪಂಚೆ, ಷರ್ಟು, ಟವಲ್ ಉಚಿತವಾಗಿ ನೀಡಲಾಗುತ್ತದೆ. ವಧು-ವರರಿಗೆ ವಾಸ್ತವ್ಯಕ್ಕೆ ಕೊಠಡಿಗಳ ವ್ಯವಸ್ಥೆ ಮಾಡಲಾಗುತ್ತದೆ. ವಧು-ವರ ಮತ್ತು ಅವರ ಸಂಬಂಧಿಕರಿಗೆ ಊಟ, ತಿಂಡಿ ವ್ಯವಸ್ಥೆಯನ್ನು ದಾಸೋಹ ಭವನದಲ್ಲಿ ಮಾಡಲಾಗುವುದೆಂದು ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಸರಸ್ವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.