ಅಂಗನವಾಡಿಗಳಿಗೆ ನ್ಯಾಯಾಧೀಶರ ದಿಢೀರ್ ಭೇಟಿ : ಪರಿಶೀಲನೆ

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ತಾಲ್ಲೂಕಿನ ಬ್ಯಾಡಮೂಡ್ಲು ಗ್ರಾಮದಲ್ಲಿರುವ ಮೂರು ಅಂಗನವಾಡಿಗಳಿಗೆ ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ವೇಳೆ ಅಂಗನವಾಡಿ ಕೇಂದ್ರಗಳ ವಿದ್ಯುತ್ ಬಿಲ್ ಪಾವತಿಸದ ಕಾರಣ ಅಂಗನವಾಡಿ ಕೇಂದ್ರಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದು ಕಂಡು ಬಂದಿತು. ಅಂಗನವಾಡಿ ಕೇಂದ್ರಗಳಲಿ ನಾಮಫಲಕ ಇಲ್ಲದೇ ಇರುವುದು, ಮಕ್ಕಳಿಗೆ ವಿತರಿಸಲಾಗುವ ಮೊಟ್ಟೆಗಳಿಗೆ ಬಿಲ್ ಮಾಡದಿರುವುದು ಬೆಳಕಿಗೆ ಬಂದಿತು.

ಶೌಚಾಲಯದ ಮೇಲ್ಛಾವಣಿ ಸರಿಯಿಲ್ಲದಿರುವುದು, ಕೆಲವೆಡೆ ಶಿಥಿಲಾವಸ್ಥೆಯಿಂದ ಕೂಡಿರುವುದು ಕಂಡು ಬಂದಿತು. ಈ ಸಂಬಂಧ ಸಂಬಂಧಪಟ್ಟ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ನ್ಯಾಯಾಧೀಶರು ಕರೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಅಂಗನವಾಡಿಗಳಲ್ಲಿ ಕಂಡು ಬಂದಿರುವ ಲೋಪ ದೋಷಗಳನ್ನು ಸರಿಪಡಿಸಿ ಅಗತ್ಯ ಸೌಲಭ್ಯಕ್ಕೆ ಕ್ರಮ ತೆಗೆದುಕೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ನ್ಯಾಯಾಧೀಶರು ನಿರ್ದೇಶನ ನೀಡಿದ್ದಾರೆ.

ಇದೇ ವೇಳೆ ಗ್ರಾಮದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಗ್ರಾಮದಲ್ಲಿ ಅರಿವು ಮೂಡಿಸಿ, ಮಕ್ಕಳ ಪಾಲನೆ ಪೋಷಣೆಯಲ್ಲಿ ಎಚ್ಚರಿಕೆ ವಹಿಸುವಂತೆ ತಿಳಿಸಿದರು.

ಮಕ್ಕಳ ಮೇಲಿನ ದೌರ್ಜನ್ಯ ಅಥವಾ ಇನ್ನಿತರೆ ರೀತಿಯ ತೊಂದರೆಗಳು ಕಂಡು ಬಂದಲ್ಲಿ ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಯ ಗಮನಕ್ಕೆ ತರುವಂತೆ ಗ್ರಾಮಸ್ಥರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ತಿಳಿಸಿದ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಕಾನೂನು ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಸೂಚಿಸಿದರು.

Leave a Reply

Your email address will not be published. Required fields are marked *