ಅರ್ಥಪೂರ್ಣವಾಗಿ ಡಿ. ದೇವರಾಜ ಅರಸು ಅವರ ಜನ್ಮದಿನ ಆಚರಣೆ : ಪೂರ್ವಭಾವಿ ಸಭೆಯಲ್ಲಿ ತೀರ್ಮಾನ

ಚಾಮರಾಜನಗರ: ಜಿಲ್ಲಾಡಳಿತ ಹಾಗೂ ಎಲ್ಲರ ಸಹಕಾರದೊಂದಿಗೆ ಮಾಜಿ ಮುಖ್ಯಮಂತ್ರಿಯವರಾದ ಡಿ. ದೇವರಾಜ ಅರಸು ಅವರ ೧೦೮ನೇ ಜನ್ಮದಿನವನ್ನು ನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿಯವರಾದ ಸಿ.ಟಿ. ಶಿಲ್ಪಾನಾಗ್ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಡಿ. ದೇವರಾಜ ಅರಸು ಅವರ ಜನ್ಮದಿನವನ್ನು ಸಕಲ ಸಿದ್ದತೆಯೊಂದಿಗೆ ಅರ್ಥಪೂರ್ಣವಾಗಿ ಆಯೋಜಿಸಲು ತೀರ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಮಾತನಾಡಿ ಮಾಜಿ ಮುಖ್ಯಮಂತ್ರಿಯವರಾದ ಡಿ. ದೇವರಾಜ ಅರಸು ಅವರ ಜನ್ಮದಿನವನ್ನು ಎಲ್ಲರ ಸಹಕಾರದೊಂದಿಗೆ ಆಚರಿಸಲಾಗುತ್ತದೆ. ಅರಸು ಅವರ ಭಾವಚಿತ್ರದ ಮೆರವಣಿಗೆ, ವೇದಿಕೆ ಕಾರ್ಯಕ್ರಮ ನಡೆಸಲಾಗುತ್ತದೆ. ಅರಸು ಅವರ ಜೀವನ ಸಾಧನೆ ಮತ್ತು ಚಿಂತನೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಏರ್ಪಡಿಸಲಾಗುತ್ತದೆ ಎಂದರು.

೨೦೨೨-೨೩ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ. ಡಿ. ದೇವರಾಜ ಅರಸು ಅವರ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆ ಏರ್ಪಡಿಸಲಾಗುತ್ತದೆ. ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಆಯೋಜನೆ ಮಾಡಲಾಗುತ್ತದೆ.

ಕಾರ್ಯಕ್ರಮ ನಡೆಸಲು ಸಂಘ ಸಂಸ್ಥೆಗಳು, ಸಮುದಾಯದ ಮುಖಂಡರು ಸಹ ಅಭಿಪ್ರಾಯ ಸಲಹೆಗಳನ್ನು ನೀಡಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು. ಡಿ. ದೇವರಾಜ ಅರಸು ಅವರ ಜನ್ಮ ದಿನ ಆಚರಣೆಯನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗುವುದು. ಅಚ್ಚುಕಟ್ಟಾಗಿ ಕಾರ್ಯಕ್ರಮ ಏರ್ಪಾಡು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಈ ನಿಟ್ಟಿನಲ್ಲಿ ಸರ್ವರು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಹೇಳಿದರು.

ಸಭೆಯಲ್ಲಿ ಹಾಜರಿದ್ದ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ ಡಿ. ದೇವರಾಜ ಅರಸು ಅವರು ಕರ್ನಾಟಕ ಏಕೀಕರಣಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ೨೦ ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೂ ಕಾರಣರಾಗಿದ್ದಾರೆ. ಅರಸು ಅವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸಬೇಕು. ಅರಸು ಅವರ ಪ್ರತಿಮೆ ಸ್ಥಾಪನೆ ಮಾಡಬೇಕು.

ಅರಸು ಅವರ ಕುರಿತ ಛಾಯಾಚಿತ್ರ ಪ್ರದರ್ಶನ, ವಿಚಾರಧಾರೆಗಳನ್ನು ತಿಳಿಸಿಕೊಡುವ ವಿಚಾರ ಸಂಕಿರಣ ಇನ್ನಿತರ ಕಾರ್ಯಕ್ರಮಗಳನ್ನು ಏರ್ಪಾಡು ಮಾಡುವುದೂ ಸೇರಿದಂತೆ ಇತರೆ ಸಲಹೆಗಳನ್ನು ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಾಜೇಂದ್ರ ಪ್ರಸಾದ್, ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ಸಿ.ಎಂ. ಕೃಷ್ಣಮೂರ್ತಿ, ಸಿ.ಎಂ. ಮಹದೇವಶೆಟ್ಟಿ, ವೆಂಕಟರಮಣ ಪಾಪು, ಕೆ.ಎಂ. ನಾಗರಾಜು, ಸುರೇಶ್ ನಾಯಕ, ಚಾ.ಗು. ನಾಗರಾಜು, ಜಿ. ಬಂಗಾರು, ಪರ್ವತರಾಜು, ಗು. ಪುರುಷೋತ್ತಮ್, ಶಿವಣ್ಣ, ನಾಗೇಶ್, ರವಿಚಂದ್ರ ಪ್ರಸಾದ್, ನಿಜಧ್ವನಿ ಗೋವಿಂದರಾಜು, ಪಣ್ಯದಹುಂಡಿ ರಾಜು, ಹೊಂಗನೂರು ನಟರಾಜು, ಆಲೂರು ನಾಗೇಂದ್ರ, ಬ್ಯಾಡಮೂಡ್ಲು ಬಸವಣ್ಣ ಸೇರಿದಂತೆ ಇನ್ನಿತರ ಮುಖಂಡರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *