ಆಶಾಕಿರಣ ಆಂದೋಲನ : ದ್ವಿತೀಯ ಹಂತದ ಸಮಗ್ರ ನೇತ್ರ ತಪಾಸಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ

ಚಾಮರಾಜನಗರ: ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಸಮಗ್ರ ನೇತ್ರ ತಪಾಸಣೆ ಮತ್ತು ಉಚಿತ ಶಸ್ತ್ರಚಿಕಿತ್ಸೆಯ ಆಶಾಕಿರಣ ಆಂದೋಲನ ಕಾರ್ಯಕ್ರಮದ ದ್ವಿತೀಯ ಹಂತದ ತಪಾಸಣಾ ಶಿಬಿರಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಇಂದು ಚಾಲನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ನೆಲಮಹಡಿಯ ಪ್ರಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ದ್ವಿತೀಯ ಹಂತದ ತಪಾಸಣಾ ಶಿಬಿರ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಆಶಾಕಿರಣ ಆಂದೋಲನ ಕಾರ್ಯಕ್ರಮ ವಿನೂತನ ಹಾಗೂ ವಿಶೇಷವಾಗಿದ್ದು ಸಮಗ್ರ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಸೌಲಭ್ಯ ಒದಗಿಸುವುದ್ದಾಗಿದೆ. ಈ ಯೋಜನೆಗೆ ಆಯ್ಕೆಯಾಗಿರುವ ರಾಜ್ಯದ ನಾಲ್ಕು ಜಿಲ್ಲೆಗಳ ಪೈಕಿ ಚಾಮರಾಜನಗರವೂ ಸೇರಿದೆ. ಮನೆ ಮನೆಗೆ ತೆರಳಿ ನೇತ್ರ ತಪಾಸಣೆ ಮಾಡುವ ಮೊದಲ ಹಂತದ ಕಾರ್ಯ ನಡೆದಿದೆ ಎಂದರು.

ಜಿಲ್ಲೆಯಲ್ಲಿ ಅಂದಾಜು 10 ಲಕ್ಷ ಜನಸಂಖ್ಯೆಯಿದ್ದು, ಈಗಾಗಲೇ 8 ಲಕ್ಷದ 6 ಸಾವಿರ ಜನರಿಗೆ ಮೊದಲ ಹಂತದ ನೇತ್ರ ತಪಾಸಣಾ ಕಾರ್ಯ ಮುಗಿದಿದೆ. ಎರಡನೇ ಹಂತದ ತಪಾಸಣೆಗೆ 90 ಸಾವಿರ ಜನರನ್ನು ಶಿಫಾರಸು ಮಾಡಲಾಗಿದೆ. ಕಣ್ಣಿನ ತೊಂದರೆ ಕಂಡು ಬಂದಿರುವವರಿಗೆ ಎರಡನೇ ಹಂತದ ಸ್ಕ್ರೀನಿಂಗ್ ಮಾಡಲಾಗುತ್ತದೆ. ಅಗತ್ಯವಿರುವ ಕನ್ನಡಕ, ಶಸ್ತ್ರ ಚಿಕಿತ್ಸೆ ನೆರವೇರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಆಶಾಕಿರಣ ಆಂದೋಲನ ಕಾರ್ಯಕ್ರಮ ಜಿಲ್ಲೆಯಲ್ಲಿ ವೇಗವಾಗಿ ಹಾಗೂ ಸಕಾಲಕ್ಕೆ ನಡೆಯುತ್ತಿದೆ. ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಹಾಗೂ ಸೇವಾ ಸಂಸ್ಥೆಗಳು, ಖಾಸಗಿ ಆಸ್ಪತ್ರೆಗಳು ಕಾರ್ಯಕ್ರಮಕ್ಕೆ ಸಹಕರಿಸಿದ್ದಾರೆ. ಜಿಲ್ಲೆಯ ಜನತೆಯ ಕಣ್ಣಿನ ಆರೋಗ್ಯ ರಕ್ಷಣೆಗಾಗಿ ಅನುಷ್ಠಾನಗೊಳಿಸುತ್ತಿರುವ ಈ ಕಾರ್ಯಕ್ರಮವನ್ನ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ದ್ವಿತೀಯ ಹಂತದ ತಪಾಸಣೆ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ. ಅಧಿಕಾರಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಇಂದು ಜಿಲ್ಲಾಡಳಿತ ಭವನದಲ್ಲಿ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ತಿಳಿಸಿದರು.

ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ. ಚಂದ್ರಶೇಖರ್, ನೇತ್ರ ತಜ್ಞರಾದ ಡಾ. ಬಾಲಸುಬ್ರಹ್ಮಣ್ಯ, ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *