ಚಾಮರಾಜನಗರ: ಇತಿಹಾಸವನ್ನು ಬಲ್ಲವರು ಇತಿಹಾಸವನ್ನೇ ಸೃಷ್ಠಿಸಬಲ್ಲರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತಿಳಿಸಿದರು.
ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಮೈಸೂರಿನ ಕೇಂದ್ರ ಸಂವಹನ ಇಲಾಖೆ ಹಾಗೂ ಜೆಎಸ್ಎಸ್ ಮಹಿಳಾ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿರ್ಸಾಮುಂಡ ಜಯಂತಿ, ಸಂವಿಧಾನ ದಿನಾಚರಣೆ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪಠ್ಯದ ಹೊರತಾಗಿ ಹೆಚ್ಚಿನ ವಿಷಯಗಳನ್ನು ತಿಳಿಯುವ ಅವಕಾಶ ಈ ಛಾಯಾಚಿತ್ರ ಪ್ರದರ್ಶನದಲ್ಲಿ ಲಭ್ಯವಿದ್ದು, ಎಲ್ಲರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಸಲಹೆ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಪ್ರಚಾರ ಅಧಿಕಾರಿ ಎನ್.ಟಿ. ಶೃತಿ ಅವರು ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರ ಕೆಲವು ಮಾಹಿತಿಗಳು, ಹಲವು ಮಹಾನಾಯಕರ ಕುರಿತ ಅಪರೂಪದ ಮಾಹಿತಿ ಹಾಗೂ ಭಾವಚಿತ್ರಗಳು, ಬುಡಕಟ್ಟು ಜನಾಂಗದವರಿಗೆ ಲಭಿಸುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ಛಾಯಾಚಿತ್ರ ಪ್ರದರ್ಶನದಲ್ಲಿ ನೀಡಲಾಗುತ್ತಿದೆ. ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ವಿಶೇಷ ಉಪನ್ಯಾಸ ನೀಡಿದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ. ಮಂಜುಳ ಅವರು ಚಾಮರಾಜನಗರ ಜಿಲ್ಲೆಯಲ್ಲಿ ಇರುವ ಬುಡಕಟ್ಟು ಜನಾಂಗ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ದಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳು, ಯೋಜನೆಗಳು ಮತ್ತು ಅರಣ್ಯ ಹಕ್ಕುಗಳ ಕಾಯ್ದೆ ಕುರಿತು ಅರಿವು ಮೂಡಿಸಿದರು.
ಜೆಎಸ್ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಜಿ. ಸಿದ್ದರಾಜು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮಕ್ಕೂ ಮೊದಲು ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಚಿತ್ರಕಲೆ ಹಾಗೂ ಬುಡಕಟ್ಟು ಜನಾಂಗದ ಕುರಿತು ಛದ್ಮವೇಷ ಸ್ಪರ್ಧೆ ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿದರು.
ಸಂಗೀತ ಮತ್ತು ನಾಟಕ ಕಲಾತಂಡದವರು ಜಾನಪದ ಗೀತೆಗಳನ್ನು ಹಾಡಿದರು. ಕ್ಷೇತ್ರ ಪ್ರಚಾರ ಸಹಾಯಕ ದರ್ಶನ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.