ಕರ್ನಾಟಕ ಬಂದ್ ಬೆಂಬಲಿಸಿ ಜೆಡಿಎಸ್ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿಯಲ್ಲಿ  ತಲೆಮೇಲೆ ಕಲ್ಲುಹೊತ್ತು, ಖಾಲಿಕೊಡ ಹಿಡಿದು ಅಕ್ರೋಶ
ಚಾಮರಾಜನಗರ: ಕರ್ನಾಟಕ ಬಂದ್ ಬೆಂಬಲಿಸಿ ಜೆಡಿಎಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ  ಪಕ್ಷದ ಮುಖಂಡ ಆಲೂರುಮಲ್ಲು ಅವರ ನೇತೃತ್ವದಲ್ಲಿ ಮುಂಜಾನೆ ೫:೩೦ಕ್ಕೆ ಜಮಾಯಿಸಿದ ಪ್ರತಿಭಟನಾನಿರತರು ತಮಿಳು ಸರ್ಕಾರ, ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ    ಕುಳಿತು ತಿಂಡಿ ತಿಂದು ಖಾಲಿ ಬಾಟಲ್ ಹಿಡಿದು ಕುಡಿಯಲು ನೀರಿಲ್ಲ , ಎಂದು ತಲೆಮೇಲೆ ಕಲ್ಲುಹೊತ್ತು ,ಖಾಲಿ ಕೊಡ ಹಿಡಿದು ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಜೆಡಿಎಸ್ ಮುಖಂಡ ಆಲೂರುಮಲ್ಲು ಮಾತನಾಡಿ, ಕಾವೇರಿ ನೀರಿನ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕರ್ನಾಟಕ ಸರ್ಕಾರ ತಮಿಳುನಾಡು ಒತ್ತಡಕ್ಕೆ ಮಣಿದು ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದು ಅತ್ಯಂತ ಖಂಡನೀಯ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಾನಾ ಸಂಘಟನೆಗಳು ಕರೆಕೊಟ್ಟಿರುವ ಕರ್ನಾಟಕ ಬಂದ್‌ಗೆ ಜೆಡಿಎಸ್ ಸಂಪೂರ್ಣ ಬೆಂಬಲ ಕೊಡುತ್ತದೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ಒಂದು ಹನಿ ನೀರನ್ನು ಬಿಡಬಾರದು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಿ.ಎಂ.ಕೃಷ್ಣಮೂರ್ತಿ, ಜೆಡಿಎಸ್ ಮುಖಂಡರಾದ ಜಿ.ಎಂ.ಶಂಕರ್, ಹೊಂಗನೂರು ರಾಜು, ಇಂದ್ರೇಶ್, ನಮ್ಮನೆ ಪ್ರಶಾಂತ್,   ಡಿ.ಎನ್.ಉಷಾ, ಗೀತಾ, ಹರೀಶ್, ಕುಮಾರ್, ನಾರಾಯಣ್ ಸುರೇಶ್ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *