ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ
ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹ.ರ.ಮಹೇಶ್ ಬೇಸರ
ಚಾಮರಾಜನಗರ: ಇತ್ತೀಚಿನ ದಿನಗಳಲ್ಲಿ ಪೌಷ್ಠಿಕಾಂಶವಿಲ್ಲದ ಕಲಬೆರಕೆ ಆಹಾರ ಪದಾರ್ಥಗಳ ಬಳಕೆಯಿಂದ ನಮ್ಮ ಇಂದಿನ ಯುವ ಪೀಳಿಗೆ ಹೆಚ್ಚು ಅನಾರೋಗ್ಯಕ್ಕೀಡಾಗುತ್ತಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹ.ರ.ಮಹೇಶ್ ಬೇಸರ ವ್ಯಕ್ತಪಡಿಸಿದರು.

ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಕ್ಕ ಮಾಯಾವತಿ ಅವರ 68ನೇ ಹುಟ್ಟುಹಬ್ಬ ಹಾಗೂ ಜನ ಕಲ್ಯಾಣ ದಿವಸ್ ಅಂಗವಾಗಿ ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಉಚಿತ ಕಣ್ಣಿನ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ನಮ್ಮ ಹಿಂದಿನ ಪೀಳಿಗೆಯ ಜನರು ಕಲಬೆರಕೆ ಇಲ್ಲದ ಉತ್ತಮವಾದ ಆಹಾರ ಸೇವಿಸಿ ಗಟ್ಟಿಮುಟ್ಟಾಗಿ ಇರುತ್ತಿದ್ದರು. ಆದರೆ ಇಂದಿನ ಪೀಳಿಗೆ ಸಂಪೂರ್ಣ ರಾಸಾಯನಿಕ ಗೊಬ್ಬರದಿಂದ ಬೆಳೆಯಲಾದ ಕಲಬೆರಕೆ ಆಹಾರದಿಂದ ಎಲ್ಲರ ಆರೋಗ್ಯ ಹಾಳಾಗುತ್ತಿದೆ ಎಂದರು.
ಕೆಮಿಕಲ್ ಮುಕ್ತ ಬೆಳೆಯನ್ನು ಬೆಳೆಯುವಂತೆ ಹಾಗೂ ಕೊಟ್ಟಿಗೆ ಗೊಬ್ಬರವನ್ನು ಬಳಸುವಂತೆ ನಮ್ಮ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದರು.
ಸಾರ್ವಜನಿಕರು ಬೀಡಿ, ಸಿಗರೇಟು, ಕುಡಿತಕ್ಕೆ ಬಲಿಯಾಗಿ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂತಹ ದುಶ್ಚಟಗಳಿಂದ ದೂರ ಇರಬೇಕು ಎಂದ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ಬಹುಜನ ಸಮಾಜ ಪಕ್ಷದ ವತಿಯಿಂದ ಕಣ್ಣಿನ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿದ್ದು, ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.

ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಎನ್.ನಾಗಯ್ಯ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಆರೋಗ್ಯ ಪ್ರತಿಯೊಬ್ಬರಿಗೂ ಬಹಳ ಮುಖ್ಯವಾಗಿದೆ. ಆದ್ದರಿಂದ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದರೊಂದಿಗೆ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಮತ್ತಷ್ಟು ಉತ್ತಮವಾಗಿರಿಸಿಕೊಳ್ಳಿ ಎಂದರು.
ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಗುರುರಾಜ್.ಎಸ್. ಅವರು ಮಾತನಾಡಿ, ಇಂತಹ ಉಚಿತ ಶಿಬಿರಗಳಿಂದ ಸಾಕಷ್ಟು ಬಡಜನರಿಗೆ ಅನುಕೂಲವಾಗಲಿದೆ. ಇಂತಹ ಕಾರ್ಯಕ್ರಮಗಳನ್ನು ಪಕ್ಷಗಳು, ಸಂಘ ಸಂಸ್ಥೆಗಳು ಹೆಚ್ಚೆಚ್ಚು ಆಯೋಜಿಸುವ ಮೂಲಕ ಬಡ ಜನತೆಗೆ ಅನುಕೂಲ ಮಾಡಿಕೊಡಬೇಕು ಎಂದರು.
ಶಿಬಿರದಲ್ಲಿ 100ಕ್ಕೂ ಹೆಚ್ಚು ಮಂದಿಗೆ ತಪಾಸಣೆ ನಡೆಸಲಾಯಿತು. ಇದರಲ್ಲಿ 33 ಮಂದಿಯನ್ನು ಅರವಿಂದ ಕಣ್ಣಾಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ಕಳುಹಿಸಿಕೊಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಪ್ರಧಾನ ಕಾರ್ಯಧರ್ಶಿ ಭಾ.ಮ.ಕೃಷ್ಣಮೂರ್ತಿ, ಟೌನ್ ಅಧ್ಯಕ್ಷ ರಂಗಸ್ವಾಮಿ, ಲಿಂಗಾಯತ ಸಮಾಜದ ಮುಖಂಡ ಪರಮೇಶ್ವರಪ್ಪ, ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆ ಡಾ.ರೋಹಲ್ ಚಾಕೋ, ಕ್ಯಾಂಪ್ ಪಿಆರ್ಓ ವಿಜಯ್, ಬಾಲರಾಜು, ಮಂಜು, ಸಿದ್ದರಾಜು, ಯೋಗೇಶ್, ಅಭಿ, ಕೃಷ್ಣಮೂರ್ತಿ, ಚಂದ್ರಕಾಂತ್, ಶಿವಶಂಕರ್, ದೊಡ್ಡರಾಯಪೇಟೆ ಶಿವು ಮತ್ತಿತರರಿದ್ದರು.