ಕ್ರೀಡೆ ಜತೆಗೆ ಪಠ್ಯೇತರ ಚಟುವಟಿಕೆಗೂ ಆದ್ಯತೆ ನೀಡಿ : ಸಚಿವ ಎನ್.ಚಲುವರಾಯಸ್ವಾಮಿ

ಮದ್ದೂರು: ವಿದ್ಯಾರ್ಥಿಗಳು ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ತಾಲೂಕಿನ ಕೊಪ್ಪದ ಸರ್ವೋದಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜು ವಿಭಾಗ, ಸರ್ವೋದಯ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ 2023-24 ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ನಂತರ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಬೆಳಗಿನ ವೇಳೆ ಒಂದು ಗಂಟೆ ಸಂಜೆ ವೇಳೆ ಒಂದು ಗಂಟೆ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡರೆ ಆರೋಗ್ಯ ಸದೃಢವಾಗಿರುತ್ತದೆ. ವಿದ್ಯಾರ್ಥಿಗಳು ತಮಗಿಷ್ಟವಾದ ಕ್ರೀಡೆಯಲ್ಲಿ ನಿರಂತರವಾಗಿ ಅಭ್ಯಾಸ ಮಾಡಿದರೆ ಉನ್ನತ ಸಾಧನೆ ಮಾಡಲು ಸಾಧ್ಯ ಎಂದರು.
ವಿದ್ಯಾರ್ಥಿಗಳು ಸದಾ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ಹಿಗ್ಗದೆ ಸೋತ ವಿದ್ಯಾರ್ಥಿಗಳು ಕುಗ್ಗದೆ ಕ್ರೀಡೆಯನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಳ್ಳಬೇಕು. ಕ್ರೀಡೆ ಮಾನಸಿಕ ಸ್ಥೈರ್ಯ ಮತ್ತು ಧೈರ್ಯವನ್ನು ತುಂಬುತ್ತದೆ. ನಿಯಮಿತವಾಗಿ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಮತ್ತು ದೈಹಿಕ ಸದೃಢತೆ ಬೆಳೆಯುತ್ತದೆ. ಜ್ಞಾನದ ಪರಿಪಕ್ವತೆ ಹೆಚ್ಚಬೇಕಾದರೆ ಕ್ರೀಡೆ ಅತ್ಯಂತ ಅವಶ್ಯಕ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಮರಿತಿಬ್ಬೆಗೌಡ ಅವರು ಮಾತನಾಡಿ, ವಿದ್ಯಾರ್ಥಿಯ ಜೀವನ ಅತ್ಯಂತ ಪ್ರಮುಖವಾದ ಘಟ್ಟವಾಗಿದೆ. ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.
ಕ್ರೀಡಾಕೂಟದಲ್ಲಿ 22 ಕಾಲೇಜುಗಳ 1 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಕ್ರೀಡಾ ಸ್ಪೂರ್ತಿ ಮೆರೆದರು.
ಸರ್ವೋದಯ ವಿದ್ಯಾವರ್ಧಕ ಟ್ರಸ್ಟ್ ಅಧ್ಯಕ್ಷ ವಿವೇಕಾನಂದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲ ಶಿಕ್ಷಣ ಇಲಾಖೆ ಪದೇಪೂರ್ವ ಉಪನಿರ್ದೇಶಕ ಎಸ್. ಉಮೇಶ್, ಗ್ರಾಮ ಪಂಚಾಯತಿ ಅಧ್ಯಕ್ಷ ನವೀನ್ ಕುಮಾರ್, ಉಪಾಧ್ಯಕ್ಷೆ ಮಮತಾ ಕೃಷ್ಣೇಗೌಡ, ಸರ್ವೋದಯ ವಿದ್ಯಾವರ್ಧಕ ಟ್ರಸ್ಟ್ ಕಾರ್ಯದರ್ಶಿ ಕೆ. ಮಾಯಣ್ಣ, ಖಜಾಂಚಿ ಉದ್ಯಗೌಡ, ಆಡಳಿತಾಧಿಕಾರಿ ಡಿ.ಪಿ. ಸ್ವಾಮಿ, ಪ್ರಾಂಶುಪಾಲರಾದ ಎ.ಸಿ. ಗೀತಾ ಜೋಗಿಗೌಡ, ಹನುಮಂತ ರಾಯಪ್ಪ,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.  ದಿವಾಕರ, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ. ಜೋಗಿಗೌಡ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *