ಚಾಮರಾಜನಗರ: ಹಾಡಿ, ಅರಣ್ಯ ಪ್ರದೇಶಗಳ ಜನರ ಓಡಾಟಕ್ಕೆ ಅನುಕೂಲ ಕಲ್ಪಿಸುವ ಜನವನ ಸಾರಿಗೆಗೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಇಂದು ಚಾಲನೆ ನೀಡಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು, ಶಾಸಕರಾದ ಎಂ.ಆರ್. ಮಂಜುನಾಥ್ ಅವರೊಂದಿಗೆ ಹಸಿರು ನಿಶಾನೆ ತೋರುವ ಮೂಲಕ ನಾಲ್ಕು ಜನವನ ಸಾರಿಗೆ ವಾಹನಗಳ ಸಂಚಾರಕ್ಕೆ ಚಾಲನೆ ನೀಡಿದರು.
ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರ ಅರಣ್ಯ ಇಲಾಖೆಯಿಂದ ಗೂರ್ಖಾ ವಾಹನಗಳನ್ನು ಪಡೆದು ಜನವನ ಸಾರಿಗೆಗೆ ಚಾಲನೆ ನೀಡಿದೆ. ಬೆಟ್ಟದ ವ್ಯಾಪ್ತಿಯ ದುರ್ಗಮ ಹಾಡಿಗಳ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜನವನ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಸರಸ್ವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಇತರರು ಈ ಸಂದರ್ಭದಲ್ಲಿ ಇದ್ದರು.