ಜಿಲ್ಲಾಧಿಕಾರಿ ಶಿಲ್ಪ ನಾಗ್ ಅವರ ವಿಶೇಷ ಕಾಳಜಿ ಫಲ :ಶಾಲೆ ತೊರೆದ,ಅನುತ್ತೀರ್ಣರಾದ ಬುಡಕಟ್ಟು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ವಿನೂತನ ವಿಶಿಷ್ಟ ಕಾರ್ಯಕ್ರಮ

ಚಾಮರಾಜನಗರ: ಜಿಲ್ಲೆಯಲ್ಲಿ ವಿವಿಧ ಹಂತಗಳಲ್ಲಿ ಶಾಲೆ ತೊರೆದ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಬುಡಕಟ್ಟು ಸಮುದಾಯದ ಮಕ್ಕಳ ಮುಂದಿನ ಶೈಕ್ಷಣಿಕ ಅಭಿವೃದ್ಧಿಗಾಗಿ ತರಬೇತಿ ನೀಡುವ ವಿಶಿಷ್ಟ ಹಾಗೂ ವಿನೂತನ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ವಿಶೇಷ ಕಾಳಜಿಯಿಂದಾಗಿ ವಿವಿಧ ಹಂತಗಳಲ್ಲಿ ಶಾಲೆಯನ್ನು ಮೊಟಕುಗೊಳಿಸಿದ್ದ ಬುಡಕಟ್ಟು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಸಜ್ಜಾಗುತ್ತಿದ್ದಾರೆ. ಅರಣ್ಯ ವಾಸಿಗಳ ಮಕ್ಕಳ ಶಿಕ್ಷಣ ಕುಂಠಿತವಾಗಬಾರದೆಂಬ ಉದ್ದೇಶದಿಂದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ನಿರ್ದೇಶನ ಅನುಸಾರ ವಿವಿಧ ಹಂತಗಳಲ್ಲಿ ಶಾಲೆ ತೊರೆದ ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ ಅನುತ್ತೀರ್ಣಗೊಂಡ ಬುಡಕಟ್ಟು ಸಮುದಾಯದ 44 ಮಕ್ಕಳನ್ನು ಗುರುತಿಸಿ ಅವರನ್ನು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲಾಡಳಿತವೇ ನೊಂದಾಯಿಸಿ ಪರೀಕ್ಷೆಗೆ ಸಜ್ಜುಗೊಳಿಸುವ ಸಲುವಾಗಿ ಇಂದಿನಿಂದ ತರಬೇತಿ ಆರಂಭಿಸಿದೆ.

ಚಾಮರಾಜನಗರ ತಾಲೂಕಿನ ಹರದನಹಳ್ಳಿಯ ಪರಿಶಿಷ್ಟ ವರ್ಗಗಳ ಮೆಟ್ರಿಕ್‍ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮೈಸೂರಿನ ರೋಟರಿ ಪಂಚಶೀಲ ಸಂಸ್ಥೆ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವಸಿದ್ದತಾ ತರಬೇತಿ ನೀಡುವ ಅಪರೂಪದ ಮಾದರಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕೃತ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಕಾರ್ಯಕ್ರಮದ ಮುಖ್ಯ ಗುರಿಯಾಗಿದೆ. ಮೈಸೂರಿನ ಪಂಚಶೀಲ ರೋಟರಿ ಸಂಸ್ಥೆಯು ಜಿಲ್ಲೆಯ ವಿವಿಧ ಇಲಾಖೆಗಳೊಂದಿಗೆ ಸಹಯೋಗ ವಹಿಸಿ ಜಿಲ್ಲೆಯಲ್ಲಿ ವಿವಿಧ ಹಂತಗಳಲ್ಲಿ ಶಾಲೆ ತೊರೆದ ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ ಅನುತ್ತೀರ್ಣಗೊಂಡ ಬುಡಕಟ್ಟು ಸಮುದಾಯದ 44 ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಹೊತ್ತಿದೆ. ಹಾಗಾಗಿ ಇದೊಂದು ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದರು.

ಈಗಾಗಲೇ ಗುರುತಿಸಿ ನೊಂದಾಯಿಸಿರುವ 44 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿನಿಲಯದಲ್ಲಿ ಪ್ರತ್ಯೇಕವಾಗಿ ವಸತಿ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಹಾಗೂ ಜಿಲ್ಲಾಮಟ್ಟದ ನುರಿತ 20 ಮಂದಿ ಸಂಪನ್ಮೂಲ ಶಿಕ್ಷಕರು 3 ತಿಂಗಳ ಕಾಲ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ಸಲುವಾಗಿ ತರಬೇತಿ ನೀಡಲು ಮುಂದೆ ಬಂದಿದ್ದಾರೆ. ಪ್ರಸ್ತುತ 44 ಮಂದಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪಠ್ಯದ ಜೊತೆಗೆ ಆಟೋಟದಲ್ಲಿ ಪಾಲ್ಗೊಳ್ಳಲು ದೈಹಿಕ ಶಿಕ್ಷಕರು ಹಾಗೂ ಸಂಗೀತ ಶಿಕ್ಷಕರನ್ನು ನಿಯೋಜಿಸಲಾಗಿದೆ. ಮಕ್ಕಳು ನಿರಂತರ ಅಭ್ಯಾಸ ಕೈಗೊಂಡು ಸಾಕಷ್ಟು ಪ್ರಯತ್ನ ಹಾಕಬೇಕು. ಪರೀಕ್ಷೆ ಬಗ್ಗೆ ಏನೇ ಗೊಂದಲಗಳಿದ್ದರೂ ಶಿಕ್ಷಕರೊಂದಿಗೆ ಮುಕ್ತವಾಗಿ ಮಾತನಾಡಿ, ಯಾವುದೇ ಮುಜುಗರ ಬೇಡ ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಯಾವುದೋ ಕಾರಣದಿಂದ ಶಾಲೆ ತೊರೆದಿರಬಹುದು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರಬಹುದು. ಅವರು ಜಾಣರಲ್ಲ ಎಂದಲ್ಲ. ಅವರಿಗೆ 2ನೇ ಅವಕಾಶ ನೀಡಿ ಶಿಕ್ಷಣಕ್ಕೆ ಪೂರಕ ವಾತಾವರಣ ಕಲ್ಪಿಸಿ ಪರೀಕ್ಷೆಗೆ ಕೂರಲು ಪ್ರೇರೇಪಿಸಬೇಕು. ಅವಕಾಶದಿಂದ ಯಾರೂ ವಂಚಿತರಾಗಬಾರದು. ಈ ಸದಾವಕಾಶನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಯಾವುದೇ ಸಹಾಯ, ಸಹಕಾರಕ್ಕೆ ಜಿಲ್ಲಾಡಳಿತ ನಿಮ್ಮೊಂದಿಗಿದೆ. ನಿಮ್ಮ ಮುಂದಿನ ಉತ್ತಮ ಜೀವನಕ್ಕಾಗಿ ಎಲ್ಲರೂ ಸೇರಿ ಒಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ. ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಜಿಲ್ಲಾಧಿಕಾರಿಯವರು ವಿದ್ಯಾರ್ಥಿಗಳಿಗೆ ಹಾರೈಸಿದರು.

ಕಾರ್ಯಕ್ರಮದಲ್ಲಿ ಮೈಸೂರಿನ ರೋಟರಿ ಪಂಚಶೀಲ ಸಂಸ್ಥೆಯ ಕಿರಣ್ ರಾಬರ್ಟ್ ಹಾಗೂ ಅಂತರಾಷ್ಟ್ರೀಯ ತರಬೇತುದಾರರಾದ ಬೆಂಜಮಿನ್ ಅವರು ಕಾರ್ಯಕ್ರಮದ ಸದುದ್ದೇಶ, ಪರೀಕ್ಷಾ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳುವ ಬಗ್ಗೆ ಪ್ರೋತ್ಸಾಹದಾಯಕ ನುಡಿಗಳನ್ನಾಡಿದರು.

ಬುಡಕಟ್ಟು ಸಮುದಾಯದ ಮಕ್ಕಳಿಗೆ ಪರೀಕ್ಷೆಗೆ ಸಿದ್ದರಾಗಲು ಅನುಕೂಲವಾಗುವಂತೆ ಪಠ್ಯಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.

ಪೂರ್ವಸಿದ್ದಾತಾ ತರಬೇತಿ ಕಾರ್ಯಾಗಾರದ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕಧಿಕಾರಿ ಆನಂದ್ ಪ್ರಕಾಶ್ ಮೀನಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಪ್ರಾಂಶುಪಾಲರಾದ ಕಾಶೀನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *