ಚಾಮರಾಜನಗರ: ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ 154ನೇ ಜಯಂತಿ ಆಚರಣೆ ಹಾಗೂ ಮಹಾತ್ಮ ಗಾಂಧಿಜೀಯವರ ವಿಚಾರಧಾರೆಗಳನ್ನು ಪ್ರಚುರಪಡಿಸುವ ಉದ್ದೇಶದಿಂದ ನಿರ್ಮಿಸಿರುವ ನೂತನ ಗಾಂಧಿ ಭವನ ಕಟ್ಟಡದ ಲೋಕಾರ್ಪಣೆ ಇಂದು ಅರ್ಥಪೂರ್ಣವಾಗಿ ನಡೆಯಿತು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ನಗರದ ಹೊರವಲಯದ ಯಡಬೆಟ್ಟದಲ್ಲಿರುವ ಸಿಮ್ಸ್ ಬೋಧನಾ ಆಸ್ಪತ್ರೆಯ ಪಕ್ಕದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಿರ್ಮಾಣಗೊಂಡಿರುವ ನೂತನ ಗಾಂಧಿ ಭವನದಲ್ಲಿ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.

ಆರಂಭದಲ್ಲಿಯೇ ನೂತನ ಗಾಂಧಿ ಭವನವನ್ನು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು. ಗಾಂಧಿ ಭವನದಲ್ಲಿ ಪ್ರತಿಷ್ಠಾಪಿಸಿರುವ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿ ಗೌರವ ಸಲ್ಲಿಸಿದರು.
ಬಳಿಕ ಗಾಂಧಿ ಭವನದ ಅವರಣದಲ್ಲಿ ನಡೆದ ಗಾಂಧಿ ಜಯಂತಿ ಆಚರಣೆಯ ವೇದಿಕೆ ಕಾರ್ಯಕ್ರಮದಲ್ಲಿ ಸರ್ವಧರ್ಮಗಳ ಪ್ರಾರ್ಥನೆ ನಡೆಯಿತು. ವಿವಿಧ ಧರ್ಮಗುರುಗಳಾದ ಸರ್ಪಭೂಷಣ ಸ್ವಾಮೀಜಿ, ಅಂತೋಣಿಸ್ವಾಮಿ, ಸೈಯ್ಯದ್ ಮುಕ್ತಾರ್, ಇಂದುಮತಿ ಅವರು ಸರ್ವಧರ್ಮ ಸಮನ್ವಯದ ಸಂದೇಶ ವಾಚಿಸಿದರು.
ಭಾರತ ಹಲವು ಭಾಷೆ, ಸಂಸ್ಕøತಿಗಳ ನೆಲೆವೀಡು. ಸರ್ವಧರ್ಮಗಳನ್ನು ಸಮಾನತೆಯಿಂದ ಕಾಣುವ ಏಕೈಕ ದೇಶ ಭಾರತವಾಗಿದೆ. ದೇಶವು ಅಹಿಂಸೆಯ ಮೂಲಕ ಸ್ವಾತಂತ್ರ್ಯ ಪಡೆದು ಅಹಿಂಸೆಯೆ ಪರಮಧರ್ಮವೆಂದು ವಿಶ್ವಕ್ಕೆಲ್ಲಾ ಸಾರಿತು. ಪುಸ್ತಕಗಳು ಹಾಗೂ ನಾಟಕಗಳಿಂದ ಪ್ರೇರಣೆಗೊಂಡ ಮಹಾತ್ಮ ಗಾಂಧಿಜೀಯವರು ಸತ್ಯ, ಅಹಿಂಸೆ, ಶಾಂತಿ, ಸಹಬಾಳ್ವೆ, ಸಾಮರಸ್ಯ ಹಾಗೂ ಸರಳ ಜೀವನದ ಸಂದೇಶಗಳನ್ನು ಸಾರಿದರು. ಅವರ ಜೀವನಾದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಸರ್ವಧರ್ಮಗುರುಗಳು ತಮ್ಮ ಸಂದೇಶದ ಮೂಲಕ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿಜೀಯವರ ಜನ್ಮದಿನ ಆಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧಿಜೀಯವರ ಬದುಕು, ಬರಹ, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪøಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳ ಕುರಿತ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಪುರಸ್ಕಾರ, ಪ್ರಮಾಣಪತ್ರಗಳನ್ನು ಗಣ್ಯರು ವಿತರಿಸಿದರು.
ಇದೇ ವೇಳೆ ಮಹಾತ್ಮ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್, ನೆಹರು, ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಒಬವ್ವ, ನೇತಾಜಿ ಸುಭಾಷ್ ಚಂದ್ರ ಬೋಸ್, ಸಂಗೊಳ್ಳಿ ರಾಯಣ್ಣ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಸೇರಿದಂತೆ ರಾಷ್ಟ್ರನಾಯಕರು, ಸ್ವಾತಂತ್ರ್ಯ ಹೋರಾಟಗಾರರರನ್ನು ಅನುಕರಿಸುವ ವೇಷಭೂಷಣ ತೊಟ್ಟಿದ್ದ ಪುಟ್ಟಮಕ್ಕಳು ಗಾಂಧಿ ಜಯಂತಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.
ಗಾಂಧಿಪ್ರಿಯ ಗಾಯನಗಳ ಭಜನೆ ಕಾರ್ಯಕ್ರಮ ವಿಶೇಷ ಗಮನ ಸೆಳೆಯಿತು. ಕಾರ್ಯಕ್ರಮದ ಆರಂಭದಲ್ಲಿ ನೂತನ ಗಾಂಧೀ ಭವನ ಕಟ್ಟಡದ ಲೋಕಾರ್ಪಣೆ ಸವಿನೆನಪಿಗಾಗಿ ಭವನದ ಅವರಣದಲ್ಲಿ ಗಣ್ಯರು ಗಿಡ ನೆಟ್ಟು ನೀರೆರೆದರು.
ಗಾಂಧಿ ಜಯಂತಿ ಅಂಗವಾಗಿ ಶ್ರಮದಾನದ ಮೂಲಕ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತಿತರ ಕಡೆ ಸ್ವಚ್ಚತಾ ಕಾರ್ಯಕ್ರಮ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ವೃಂದದಿಂದ ನಡೆಯಿತು.
ಶಿವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹದೇವಮ್ಮ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎ. ರಮೇಶ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಮಂಜುನಾಥ್, ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಮಹೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ, ವಾರ್ತಾ ಸಹಾಯಕರಾದ ಸಿ. ಸುರೇಶ್ಕುಮಾರ್, ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.