ಚಾಮರಾಜನಗರ: ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಇಂದು ಭೇಟಿ ನೀಡಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸಂಬಂಧ ಸಿದ್ದತೆಗಳ ಪರಿಶೀಲನೆ ನಡೆಸಿದರು.
ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನ ಆಚರಣೆಗೆ ಕೈಗೊಳ್ಳುತ್ತಿರುವ ಸಿದ್ದತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲಿಸಿದ ಜಿಲ್ಲಾಧಿಕಾರಿಯವರು ವಿಶಾಲವಾದ ಶಾಮಿಯನ ಹಾಕಬೇಕು. ಮಕ್ಕಳಿಗೆ ಬಿಸಿಲು ತಾಗದಂತೆ ನೆರಳಿನ ವ್ಯವಸ್ಥೆ ಇರಬೇಕು. ವೇದಿಕೆ ನಿರ್ಮಾಣ, ಹೂವಿನ ಅಲಂಕಾರ, ಆಸನಗಳ ವ್ಯವಸ್ಥೆ ಸಮರ್ಪಕವಾಗಿ ಇರಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಷ್ಠಾಚಾರ ಪಾಲನೆಯಾಗಬೇಕು. ಈ ನಿಟ್ಟಿನಲ್ಲಿ ಪೂರಕವಾಗಿರುವ ಸಿದ್ದತೆ ವ್ಯವಸ್ಥೆಗಳು ಮಾಡಬೇಕು. ಪಥಸಂಚಲನ, ದೇಶಭಕ್ತಿ, ಸ್ವಾತಂತ್ರ್ಯ ಇತಿಹಾಸ ಬಿಂಬಿಸುವ ವಿದ್ಯಾರ್ಥಿಗಳ ಕಾರ್ಯಕ್ರಮಗಳ ಆಯೋಜನೆಗೆ ಅವಶ್ಯವಿರುವ ಎಲ್ಲ ಅನುಕೂಲಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ಕ್ರೀಡಾಂಗಣವನ್ನು ಕಾರ್ಯಕ್ರಮಕ್ಕೆ ಸಿದ್ದಗೊಳಿಸಬೇಕು. ಸ್ವಚ್ಚತೆ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಲು ನೇಮಕವಾಗಿರುವ ವಿವಿಧ ಸಮಿತಿಗಳು ಸೂಚಿಸಲಾಗಿರುವ ಕೆಲಸಗಳನ್ನು ಹೊಣೆಗಾರಿಕೆಯಿಂದ ಪೂರೈಸಬೇಕು. ಎಲ್ಲಾ ಸಿದ್ದತಾ ಕಾರ್ಯಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ತಹಶೀಲ್ದಾರ್ ಗಿರಿಜಾ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಎಸ್. ಮಹೇಶ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಸುಧಾ, ನಗರಸಭೆ ಆಯುಕ್ತರಾದ ಎಸ್.ವಿ. ರಾಮದಾಸ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶಿವಾಜಿ ಪವಾರ್, ಇತರೆ ಅಧಿಕಾರಿಗಳು ಇದ್ದರು.
