ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡಿರುವ ಡಿ.ಎಸ್. ರಮೇಶ್ ಅವರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು ಇಂದು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆಯೋಜಿಸಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ನಿರ್ಗಮಿತ ಡಿ.ಎಸ್. ರಮೇಶ್ ಮತ್ತು ಅವರ ಪತ್ನಿ ಶೋಭಾ ಅವರನ್ನು ಸನ್ಮಾನಿಸಲಾಯಿತು.
ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಅವರು ಮಾತನಾಡಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ರಮೇಶ್ ಅವರ ಕಾರ್ಯವೈಖರಿ, ಪರಿಶ್ರಮ, ಉತ್ಸಾಹ ಎಲ್ಲರಿಗೂ ಮಾದರಿಯಾಗಿದೆ. ಒತ್ತಡದ ಸಂದರ್ಭದಲ್ಲಿ ಅವರು ನಿರ್ವಹಿಸಿದ ಕಾರ್ಯಗಳು ನಮಗೆ ಸ್ಪೂರ್ತಿಯಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮಾತನಾಡಿ ಜಿಲ್ಲಾಧಿಕಾರಿಯವರು ನಿರ್ವಹಿಸಿದ ಹಾಗೂ ಪರಿಹರಿಸಿದ ಕಾರ್ಯಗಳಿಂದ ಸಾಕಷ್ಟು ನಾವು ಕಲಿತಿದ್ದೇವೆ. ಎಂತಹದೇ ಕ್ಲಿಷ್ಟಕರ ಸಂದರ್ಭದಲ್ಲಿಯೂ ಸುಲಲಿತವಾಗಿ ಸಮಸ್ಯೆಗಳನ್ನು ಪರಿಹರಿಸುತ್ತಿದ್ದರು. ಅವರ ಕರ್ತವ್ಯ ನಿರ್ವಹಣೆ ಯಂತಹ ಗುಣಗಳನ್ನು ಅಧಿಕಾರಿಗಳು ಅಳವಡಿಸಿಕೊಳ್ಳಬೇಕಿದೆ ಎಂದರು.
ವಿವಿಧ ಸಂಘಟನೆಗಳ ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಸಿ.ಎಂ. ಕೃಷ್ಣಮೂರ್ತಿ, ಸಿ.ಎಂ. ನರಸಿಂಹಮೂರ್ತಿ, ಜಿ. ಬಂಗಾರು, ಅಂಬರೀಷ್ ಅವರು ಮಾತನಾಡಿ ಸದಾ ಹಸನ್ಮುಖಿಯಾಗಿ ಸಾರ್ವಜನಿಕರು, ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಮಾತನಾಡಿ ಸಮಸ್ಯೆ ಆಲಿಸಿ ಪರಿಹರಿಸುವ ಗುಣ ಜಿಲ್ಲಾಧಿಕಾರಿ ರಮೇಶ್ ಅವರಿಗೆ ಇತ್ತು. ಕಡಿಮೆ ಅವಧಿಯಲ್ಲಿ ಜಿಲ್ಲೆಯಲ್ಲಿ ಅವರು ಕಾರ್ಯನಿರ್ವಹಿಸಿದ್ದರೂ ಸಹ ಸಾಕಷ್ಟು ಸ್ಮರಣೀಯ ಕೆಲಸಗಳನ್ನು ಮಾಡುವ ಮೂಲಕ ಎಲ್ಲರ ಮನಸ್ಸಿನಲ್ಲಿ ಉಳಿದಿದ್ದಾರೆ. ಅವರ ಸರಳತೆ, ಸಜ್ಜನಿಕೆ, ಮಾತೃಹೃದಯಿ ಗುಣ ಶ್ಲಾಘನೀಯವಾಗಿದ್ದು ಎಂದರು.
ನಿರ್ಗಮಿತ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಉತ್ತಮ ಅವಕಾಶ ಒದಗಿ ಬಂತು. ೮ ತಿಂಗಳ ಅವಧಿಯಲ್ಲಿ ಮಾಡಿದ ಕೆಲಸ ಸಂತೋಷ ಸಂತೃಪ್ತಿ ತಂದಿದೆ. ನನ್ನ ಜೊತೆ ಎಲ್ಲ ಅಧಿಕಾರಿಗಳು ಸಿಬ್ಬಂದಿ ಸಹಕರಿಸಿದ್ದಾರೆ. ಜಿಲ್ಲೆಯ ಸಂಘಟನೆಗಳ ಮುಖಂಡರು ಸೇರಿದಂತೆ ಪ್ರತಿಯೊಬ್ಬರೂ ತೋರಿದ ಪ್ರೀತಿ, ವಿಶ್ವಾಸಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು.
ಪ್ರತೀ ಸಮಸ್ಯೆಗೂ ಪರಿಹಾರ ಇದೆ. ತಾಳ್ಮೆ ಅತೀ ಮುಖ್ಯವಾಗಿದೆ. ಸಾರ್ವಜನಿಕರು ಹೇಳುವ ಸಮಸ್ಯೆ, ಅಹವಾಲುಗಳನ್ನು ತಾಳ್ಮೆಯಿಂದ ಕೇಳಬೇಕು. ಸಹನೆ ಕಳೆದುಕೊಳ್ಳಬಾರದು. ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕು ಎಂದು ನಿರ್ಗಮಿತ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರ ಪತ್ನಿ ಶೋಭಾ ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ ನಿರ್ದೇಶಕರಾದ ದೀಪಾ ಕಂಟ್ರಾಕ್ಟರ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಡಾ. ಸಂತೋಷ್ ಕುಮಾರ್, ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರಾದ ರಾಜೇಂದ್ರ ಪ್ರಸಾದ್, ಇತರರು ಇದ್ದರು.
