ಪಾರದರ್ಶಕವಾಗಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ : ಮತದಾರರ ಪಟ್ಟಿ ವೀಕ್ಷಕರಾದ ಎನ್. ಮಂಜುನಾಥ ಪ್ರಸಾದ್

ಚಾಮರಾಜನಗರ: ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಪಾರದರ್ಶಕವಾಗಿ ನಿರ್ವಹಿಸಲಾಗುತ್ತಿದ್ದು ಇದಕ್ಕೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಪೂರಕವಾಗಿ ಸಹಕರಿಸುವಂತೆ ಮತದಾರರ ಪಟ್ಟಿ ವೀಕ್ಷಕರಾಗಿರುವ ಸಹಕಾರ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್. ಮಂಜುನಾಥ ಪ್ರಸಾದ್ ಅವರು ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶವಾಗದಂತೆ ಎಚ್ಚರ ವಹಿಸಿ ಪಾರದರ್ಶಕವಾಗಿ ನಿರ್ವಹಿಸಲಾಗುತ್ತಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನ ಅನುಸಾರ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಜವಾಬ್ದಾರಿಯುತವಾಗಿ ಕೈಗೊಳ್ಳಲಾಗಿದೆ. ಅರ್ಹ ಮತದಾರರೆಲ್ಲರನ್ನು ಮತದಾರರ ಪಟ್ಟಿಗೆ ಸೇರಿಸಬೇಕು ಎಂದರು.

ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ನ್ಯೂನತೆಗಳಿರಬಾರದು. 18 ವರ್ಷ ತುಂಬಿದ ಎಲ್ಲಾ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಬೇಕು. ಯಾವುದೇ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ವಂಚಿತರಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿ ಪರಿಷ್ಕರಣೆ ಕಾರ್ಯ ಕೈಗೊಳ್ಳಬೇಕು ಎಂದು ಮತದಾರರ ಪಟ್ಟಿ ವೀಕ್ಷಕರು ತಿಳಿಸಿದರು.
2023ರ ಅಕ್ಟೋಬರ್ 27ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಹಕ್ಕು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 9ರವರೆಗೂ ಕಾಲಾವಕಾಶ ಕಲ್ಪಿಸಲಾಗಿದೆ. 2024ರ ಜನವರಿ 5ಕ್ಕೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. 18 ವರ್ಷ ತುಂಬಿದ ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸುವುದು ನಿರಂತರ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದರು.

ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ಡಿಸೆಂಬರ್ 2 ಹಾಗೂ 3ರಂದು ವಿಶೇಷ ಜಾಗೃತಿ ಅಭಿಯಾನ ಕೈಗೊಳ್ಳಲಾಗಿದೆ. ಈ ಅಭಿಯಾನಕ್ಕೆ ವಿಶೇಷ ಪ್ರಚಾರ ವ್ಯವಸ್ಥೆಯನ್ನು ಸ್ಥಳೀಯ ಮಟ್ಟದಲ್ಲಿ ಮಾಡಬೇಕು. ಶೇ. 100ರಷ್ಟು ದೋಷರಹಿತ ಅಂತಿಮ ಮತದಾರರ ಪಟ್ಟಿ ತಯಾರಿಕೆಗೆ ಅಧಿಕಾರಿಗಳು, ಸಿಬ್ಬಂದಿ ವಿಶೇಷ ಗಮನಹರಿಸಬೇಕು. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಪ್ರಕ್ರಿಯೆಗೆ ಸಹಕಾರ ನೀಡಬೇಕೆಂದು ಮತದಾರರ ಪಟ್ಟಿ ವೀಕ್ಷಕರಾದ ಮಂಜುನಾಥಪ್ರಸಾದ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ಮಹೇಶ್, ಚುನಾವಣಾ ತಹಸೀಲ್ದಾರ್ ಅಶೋಕ್, ತಾಲೂಕು ತಹಶೀಲ್ದಾರರಾದ ಬಸವರಾಜು, ಮಂಜುಳಾ, ಗುರುಪ್ರಸಾದ್, ರಮೇಶ್, ಜಯಪ್ರಕಾಶ್, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎಂ. ಚಿಕ್ಕಮಹದೇವು, ಎಸ್. ಬಾಲಸುಬ್ರಮಣ್ಯ, ಎನ್. ನಾಗಯ್ಯ, ಕೆ. ಹರೀಶ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *