ಪ್ರತಿಯೊಬ್ಬರೂ ಶಿಕ್ಷಣ ಪಡೆಯಲು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸಲಹೆ

ಚಾಮರಾಜನಗರ: ಸಮಾಜದಲ್ಲಿ ಅತ್ಯಂತ ಪ್ರಮುಖವಾಗಿರುವ ಶಿಕ್ಷಣವನ್ನು ಪ್ರತಿಯೊಬ್ಬರೂ ಪಡೆದು ಉತ್ತಮ ಸ್ಥಾನ ಪಡೆಯಬೇಕೆಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಸಲಹೆ ಮಾಡಿದರು.

ನಗರದ ಜಿಲ್ಲಾ ಕಾರಾಗೃಹ ಆವರಣದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸಹಯೋಗದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ಸಾಕ್ಷರತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಪಡೆಯಲು ಎಲ್ಲರಿಗೂ ಅವಕಾಶಗಳಿವೆ. ಯಾರೊಬ್ಬರೂ ಶಿಕ್ಷಣದಿಂದ ವಂಚಿತರಾಗಬಾರದು. ಓದು ಬರಹ ಪ್ರತಿಯೊಬ್ಬರೂ ಕಲಿಯಬೇಕು. ಮಕ್ಕಳಿಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಉತ್ತೇಜಿಸಬೇಕು. ಉನ್ನತ ಹುದ್ದೆಗಳನ್ನು ಅಲಂಕರಿಸಲು ಪ್ರೋತ್ಸಾಹ ನೀಡಬೇಕು ಎಂದರು.

ಕಾರಾಗೃಹದಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪಿಸಬೇಕು. ಜ್ಞಾನಾರ್ಜನೆಗೆ ಹೆಚ್ಚಿನ ಅವಕಾಶ ಮಾಡಿಕೊಡಬೇಕು. ಯುವಕರು ಕಾರಾಗೃಹದಲ್ಲಿ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇವರಿಗೆ ಕಂಪ್ಯೂಟರ್ ತರಬೇತಿ ನೀಡಬೇಕು. ಇದರಿಂದ ಯುವಕರು ಇಲ್ಲಿಂದ ಹೊರಹೋದ ಮೇಲೆ ಬದುಕು ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಸಲಹೆ ಮಾಡಿದರು.

ಮುಖ್ಯ ಭಾಷಣಕಾರರಾಗಿ ಮಾತನಾಡಿದ ಮೈಸೂರಿನ ನಿವೃತ್ತ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ. ಕೆ. ಶಂಕರೇಗೌಡ ಅವರು ಅನಕ್ಷರಸ್ಥರನ್ನು ಗುರುತಿಸಿ ಕಲಿಕೆಯಲ್ಲಿ ಗಟ್ಟಿತನ ಬೆಳೆಸಲು ಸಮಾಜದ ಮುಂಚೂಣಿಗೆ ಬರುವಂತಾಗಬೇಕು ಎಂಬ ಉದ್ದೇಶದಿಂದ ಸಾಕ್ಷರತಾ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಶೇ. ೩೦ ರಿಂದ ೪೦ರಷ್ಟಿದ್ದ ಸಾಕ್ಷರತೆ ಪ್ರಮಾಣ ಇಂದು ಶೇ. ೮೦ಕ್ಕೆ ತಲುಪಿದೆ ಎಂದರು.

ಬದುಕಿನಲ್ಲಿ ಹಳೆಯ ಕೆಟ್ಟ ಕಹಿ ಘಟನೆಗಳನ್ನು ಮರೆತು ಸಕಾರಾತ್ಮಕ ಹೊಸ ದಿಕ್ಕಿನತ್ತ ಚಿಂತನೆ ಮಾಡಬೇಕು. ಸಹನೆ, ತಾಳ್ಮೆ, ಗುಣಗಳನ್ನು ಅಳವಡಿಸಿಕೊಳ್ಳಬೇಕು. ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು. ಜವಾಬ್ದಾರಿಯುತವಾಗಿ ಮುಂದಿನ ಜೀವನವನ್ನು ನಡೆಸಬೇಕು ಎಂದು ಶಂಕರೇಗೌಡ ಅವರು ತಿಳಿಸಿದರು.

ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕಾಶಿನಾಥ್ ಅವರು ಮಾತನಾಡಿ ಅಕ್ಷರ ಜ್ಞಾನವನ್ನು ಪ್ರತಿಯೊಬ್ಬರೂ ಪಡೆಯಬೇಕು. ರಚನಾತ್ಮಕ ಬದಲಾವಣೆ ಬದುಕಿನಲ್ಲಿ ಬರಬೇಕು. ಓದಿನ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಉತ್ತಮ ಕಾರ್ಯಗಳಿಗೆ ಪ್ರೇರೇಪಣೆಯಾಗಬೇಕು ಎಂದರು.

ಇದೇ ವೇಳೆ ನವ ಸಾಕ್ಷರರಿಗೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಪ್ರಮಾಣ ಪತ್ರ ವಿತರಿಸಿದರು. ಸಾಕ್ಷರತಾ ಸಪ್ತಾಹದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಗಣ್ಯರು ಬಹುಮಾನ ವಿತರಿಸಿದರು.

ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಎನ್.ಎಸ್. ಶಿವಕುಮಾರ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಜಿ.ಎ. ಲೋಕೇಶ್, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಎನ್.ವಿ. ಸ್ವಾಮಿ, ಸಾಕ್ಷರತಾ ಸಹಾಯಕರಾದ ಶೋಭಾ, ಸಮನ್ವಯ ಶಿಕ್ಷಣ ಸಂಯೋಜಕರಾದ ಜೆ. ರೆಬೆಲ್ಲೊ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *