ಪ್ರಾಮಾಣಿಕ ಪ್ರಯತ್ನ ಕಠಿಣ ಪರಿಶ್ರಮದಿಂದ ಯಶಸ್ಸು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು

ಚಾಮರಾಜನಗರ: ಪ್ರಾಮಾಣಿಕ ಪ್ರಯತ್ನ, ಕಠಿಣ ಪರಿಶ್ರಮದಿಂದ ಉನ್ನತ ಸಾಧನೆ ಮಾಡಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ತಿಳಿಸಿದರು.

ನಗರದ ಹೊರವಲಯದಲ್ಲಿರುವ ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿಂದು ಆಯೋಜಿಸಿದ್ದ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ಕಾಲೇಜು ವಿದ್ಯಾರ್ಥಿಗಳು ನಿಮ್ಮ ಮುಂದಿನ ಭವಿಷ್ಯ ನಿರ್ಧರಿಸಿಕೊಳ್ಳಬಲ್ಲವರಾಗಿದ್ದೀರಿ. ನೀವು ಏನಾಗಬೇಕೆಂದು ಬಯಸುವಿರೋ ಅದಕ್ಕೆ ಶೇ. ೧೦೦ರಷ್ಟು ಪ್ರಾಮಾಣಿಕ ಪ್ರಯತ್ನ, ಶ್ರದ್ದೆ, ಪರಿಶ್ರಮ ಇರಲಿ. ಇದರಿಂದ ನೀವು ಅಂದುಕೊಂಡ ಉನ್ನತಿಯನ್ನು ಖಚಿತವಾಗಿ ಪಡೆಯಲು ಸಾಧ್ಯವಾಗಲಿದೆ ಎಂದರು.

ಕಾಲೇಜು ವಿದ್ಯಾರ್ಥಿಗಳು ಸಂಚಾರಿ ನಿಯಮ ಕಡ್ಡಾಯವಾಗಿ ಪಾಲನೆ ಮಾಡಬೇಕು. ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಿರಬೇಕು. ಕಾರು ಚಲಾಯಿಸುವಾಗ ಸೀಟ್‌ಬೆಲ್ಟ್ ಹಾಕಿಕೊಳ್ಳಬೇಕು. ಮಾದಕ ವಸ್ತುಗಳ ಸೇವನೆಯಿಂದ ದೂರವಿರಬೇಕು. ಮಾದಕ ವಸ್ತುಗಳ ಮಾರಾಟ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ತಿಳಿಸಿದರು.

ಹಾಸನ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಟಿ.ಸಿ. ತಾರನಾಥ್ ಮಾತನಾಡಿ ಜ್ಯೋತಿ ಜ್ಞಾನದ ಸಂಕೇತವಾಗಿದೆ. ಬೆಳಕು ಇರುವ ಕಡೆ ಕತ್ತಲೆಗೆ ಅವಕಾಶವಿರುವುದಿಲ್ಲ. ವಿದ್ಯಾರ್ಥಿಗಳ ಪರಿಪೂರ್ಣ ಬೆಳವಣಿಗೆಗೆ ಶಿಕ್ಷಣ ಬಹಳ ಮುಖ್ಯ. ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಂಡಾಗ ದೈಹಿಕ, ಮಾನಸಿಕ ಬೆಳವಣಿಗೆ ಸಾಧ್ಯವಾಗುತ್ತದೆ. ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳು ಮನಸ್ಸನ್ನು ಕೇಂದ್ರೀಕೃತ ಮಾಡುವ ಸಾಧನವಾಗಿದೆ ಎಂದರು.

ಜಗತ್ತಿನಲ್ಲಿ ಯಾರು ಯಾರನ್ನು ದೊಡ್ಡವರನ್ನಾಗಿ ಮಾಡಲು ಸಾಧ್ಯವಿಲ್ಲ. ಕ್ರಿಯಾಶಕ್ತಿ ಜ್ಞಾನಶಕ್ತಿ ಸಂಯೋಜನೆಗೊಂಡು ಕಾರ್ಯ ನಿರ್ವಹಿಸಿದರೆ ಯಶಸ್ಸು ಲಭಿಸುತ್ತದೆ. ಆಗ ಮಾತ್ರ ವ್ಯಕ್ತಿ ಎತ್ತರಕ್ಕೆ ಬೆಳೆಯಬಹುದೆಂದು ಪ್ರೊ. ಟಿ.ಸಿ. ತಾರನಾಥ್ ಅವರು ತಿಳಿಸಿದರು.

ಚಾಮರಾಜನಗರ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಪ್ರೊ. ಎಂ.ಆರ್. ಗಂಗಾಧರ್ ಅವರು ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಮೌಲ್ಯಮಾಪನ ರಿಜಿಸ್ಟಾರ್ ಪ್ರೊ. ಪಿ. ಮಾದೇಶ್, ಪ್ರೊ. ಆರ್. ಮಹೇಶ್, ಪಿ.ಎಂ.ಇ.ಬಿ ನಿರ್ದೇಶಕರಾದ ಡಾ. ವಿ.ಜಿ. ಸಿದ್ದರಾಜು, ಸಂದರ್ಶಕ ಪ್ರಾಧ್ಯಾಪಕರಾದ ಪ್ರೊ. ಕೃಷ್ಣಮೂರ್ತಿ ಹನೂರು ಅವರು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *