ಚಾಮರಾಜನಗರ: ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಹಿನ್ನೆಲೆಯಲ್ಲಿ ನಗರದ ವಿವಿಧ ಅಂಗಡಿಗಳ ಮೇಲೆ ಇಂದೂ ಸಹ ನಗರಸಭೆ ಪೌರಾಯುಕ್ತರಾದ ಎಸ್.ವಿ. ರಾಮ್ದಾಸ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿ ಅಂದಾಜು ೮೦ ಕೆ.ಜಿಯಷ್ಟು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದೆ. ಅಲ್ಲದೇ ೧೭ ಸಾವಿರ ರೂ. ದಂಡ ವಿಧಿಸಿದೆ.
ನಗರದ ದೊಡ್ಡ ಅಂಗಡಿ ಬೀದಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಹಾಗೂ ಮಾರಾಟ ಮಾಡುತ್ತಿದ್ದ ೧೦ಕ್ಕೂ ಹೆಚ್ಚು ಅಂಗಡಿಗಳ ಮೇಲೆ ಕಾರ್ಯಾಚರಣೆ ನಡೆಸಿದ ನಗರಸಭೆ ಅಧಿಕಾರಿಗಳು ನಿಷೇದಿತ ಪ್ಲಾಸ್ಟಿಕ್ ನಿಂದ ತಯಾರಿಸಲಾದ ಲೋಟ, ತಟ್ಟೆ, ಕ್ಯಾರಿಬ್ಯಾಗ್, ಇನ್ನಿತರ ಸಾಮಾಗ್ರಿಗಳನ್ನು ವಶಪಡಿಸಿಕೊಂಡರು.
ಇದೇ ಸಂದರ್ಭದಲ್ಲಿ ಕೆಲ ಅಂಗಡಿಗಳು ಟ್ರೇಡ್ ಲೈಸನ್ಸ್ ಪಡೆಯದಿರುವ ಬಗ್ಗೆಯೂ ಪರಿಶೀಲಿಸಿತು. ಕೂಡಲೇ ಲೈಸನ್ಸ್ ಪಡೆಯಲು ಅಧಿಕಾರಿಗಳು ನಿರ್ದೇಶನ ನೀಡಿದರು.
ಇದೇ ವೇಳೆ ಮಾಹಿತಿ ನೀಡಿರುವ ನಗರಸಭೆ ಪೌರಾಯುಕ್ತರಾದ ರಾಮ್ದಾಸ್ ಅವರು ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾರಾಟ ಮಾಡದಂತೆ ನಗರದ ಅಂಗಡಿ ಉದ್ದಿಮೆ ಮಾಲೀಕರಿಗೆ ಸಾಕಷ್ಟು ಸೂಚನೆ ನೀಡಲಾಗಿದೆ. ಹೀಗಿದ್ದರೂ ಹಲವು ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾರಾಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ದಾಳಿಯ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆದಿದ್ದೇವೆ ಎಂದರು.
ಪ್ಲಾಸ್ಟಿಕ್ ಮಾರಾಟ ವಿರುದ್ದ ಕಾರ್ಯಾಚರಣೆ ಸಂದರ್ಭದಲ್ಲಿ ಅಂಗಡಿ ಮಾಲೀಕರಿಗೆ ಪ್ಲಾಸ್ಟಿಕ್ ನಿಷೇಧ ಇರುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಜುಲೈ ೧ ರಿಂದ ೨೮ ರವರೆಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನ ನಡೆಸಲಾಗುತ್ತಿದೆ. ಏಕ ಬಳಕೆಯ ಪ್ಲಾಸ್ಟಿಕ್ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ, ಬಳಕೆ ಸಂಬಂಧ ಜಾರಿಯಲ್ಲಿರುವ ನಿಯಮಗಳನ್ನು ಮನದಟ್ಟು ಮಾಡಿಕೊಡಲಾಗುತ್ತಿದೆ. ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಸಾರ್ವಜನಿಕರ ಸಹಕಾರ ಕೋರಲಾಗುತ್ತಿದೆ ಎಂದು ಪೌರಾಯುಕ್ತರಾದ ರಾಮ್ದಾಸ್ ಅವರು ತಿಳಿಸಿದರು.
ಪರಿಸರ ಅಧಿಕಾರಿ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಗಿರಿಜಮ್ಮ, ಆರೋಗ್ಯ ನಿರೀಕ್ಷಕರಾದ ಮಂಜು, ಪುಷ್ಪ, ಸಿಬ್ಬಂದಿ ಸಂತೋಷ್ ಇತರರು ಇದ್ದರು.
