ಬಿಳಿಗಿರಿರಂಗನಾಥಸ್ವಾಮಿ ಸಂಕ್ರಾಂತಿ ರಥೋತ್ಸವ : ಭಕ್ತಾಧಿಗಳಿಗೆ ಸಕಲ ಸೌಲಭ್ಯ ಕಲ್ಪಿಸಲು ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಸೂಚನೆ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟದಲ್ಲಿ ಜನವರಿ 16ರಂದು ನಡೆಯಲಿರುವ ಬಿಳಿಗಿರಿರಂಗನಾಥಸ್ವಾಮಿ ಸಂಕ್ರಾಂತಿ ರಥೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಸೂಚಿಸಿದರು.

ಬಿಳಿಗಿರಿರಂಗನ ಬೆಟ್ಟದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಭಾಂಗಣದಲ್ಲಿಂದು ಬಿಳಿಗಿರಿರಂಗನಾಥಸ್ವಾಮಿ ಸಂಕ್ರಾಂತಿ ರಥೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಿಳಿಗಿರಿರಂಗನಾಥಸ್ವಾಮಿ ಸಂಕ್ರಾಂತಿ ರಥೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕ್ಷೇತ್ರದಲ್ಲಿ ಸಕಲ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಕುಡಿಯುವ ನೀರು ಸಮರ್ಪಕವಾಗಿ ಪೂರೈಸಬೇಕಿದೆ. ಪ್ರಸ್ತುತ ಇರುವ ಕೊಳವೆ ಬಾವಿಗಳನ್ನು ದುರಸ್ತಿಪಡಿಸಬೇಕು. ಪೈಪ್‍ಲೈನ್ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ವಾಟರ್ ಟ್ಯಾಂಕರ್‍ಗಳ ಮೂಲಕವು ಶುದ್ದ ಕುಡಿಯುವ ನೀರಿನ ವ್ಯವಸ್ಥೆಯಾಗಬೇಕೆಂದು ಶಾಸಕರು ತಿಳಿಸಿದರು.

ಭಕ್ತಾಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆ ದುರಸ್ತಿಪಡಿಸುವ ಕಾರ್ಯ ಮಾಡಬೇಕು. ರಸ್ತೆಯ ಎರಡು ಭಾಗಗಳಲ್ಲಿರುವ ಹಳ್ಳಕೊಳ್ಳಗಳನ್ನು ಮುಚ್ಚಿಸಿ ವಾಹನಗಳ ಸುಗಮ ಸಂಚಾರಕ್ಕೆ ಸಜ್ಜು ಮಾಡಬೇಕು. ಜಾತ್ರಾ ಕರ್ತವ್ಯಕ್ಕೆ ನಿಯೋಜಿತರಾಗುವ ಅಧಿಕಾರಿ ಸಿಬ್ಬಂದಿಗೆ ಪ್ರವಾಸಿ ಮಂದಿರದ ಕೊಠಡಿಗಳನ್ನು ಕಾಯ್ದಿರಿಸಬೇಕು ಎಂದರು.

ಭಕ್ತಾಧಿಗಳ ಸೌಕರ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸುಗಳನ್ನು ನಿಯೋಜಿಸಬೇಕು. ಮಹಿಳಾ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇರುವುದರಿಂದ ಯಾವುದೇ ಕೊರತೆಯಾಗದಂತೆ ವಿವಿಧ ಕಡೆಯಿಂದ ಬಸ್ಸುಗಳ ವ್ಯವಸ್ಥೆಯಾಗಬೇಕು. ಬಸ್ಸುಗಳ ನಿಲುಗಡೆಗೆ ನಿಗದಿತ ಸ್ಥಳವನ್ನು ಗುರುತಿಸಬೇಕು. ಸಂಚಾರಕ್ಕೆ ಯಾವುದೇ ಅಡಚಣೆಯಾಗಬಾರದು ಎಂದು ಶಾಸಕರು ತಿಳಿಸಿದರು.

ಜಾತ್ರಾ ಸಂದರ್ಭದಲ್ಲಿ ನಿರಂತರ ವಿದ್ಯುತ್ ಪೂರೈಕೆ ಇರಬೇಕು. ವೈದ್ಯಕೀಯ ಸಿಬ್ಬಂದಿ, ಆಂಬ್ಯುಲೆನ್ಸ್, ಅಗ್ನಿಶಾಮಕ ವಾಹನಗಳು ಇರಬೇಕು. ವಿದ್ಯುತ್ ದೀಪಗಳ ವ್ಯವಸ್ಥೆ, ಚರಂಡಿ ಸ್ವಚ್ಚಗೊಳಿಸುವಿಕೆ, ಕ್ಷೇತ್ರದಲ್ಲಿ ನೈರ್ಮಲ್ಯ ಕಾಪಾಡಲು ಅಗತ್ಯ ವ್ಯವಸ್ಥೆ ಮಾಡಬೇಕು. ಜಾತ್ರಾ, ರಥೋತ್ಸವ ಸುಗಮವಾಗಿ ನಡೆಯಲು ಪೂರಕವಾಗಿರುವ ಎಲ್ಲಾ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ ಜಾತ್ರಾ ಸಿದ್ದತಾ ಕಾರ್ಯ ಒಂದುವಾರದ ಮುಂಚೆಯೇ ಪೂರ್ಣಗೊಳಿಸಲು ಅಧಿಕಾರಿಗಳು ನಿಗಾವಹಿಸಿ. ಸಮನ್ವಯದಿಂದ ಭಕ್ತಾಧಿಗಳಿಗೆ ಎಲ್ಲಾ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ಕಲ್ಪಿಸಿ. ಶುದ್ದ ಕುಡಿಯುವ ನೀರಿನ ಪೂರೈಕೆ, ಮೊಬೈಲ್ ಶೌಚಾಲಯಗಳ ವ್ಯವಸ್ಥೆ, ಸಾರಿಗೆ ವಾಹನಗಳ ನಿಯೋಜನೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಗತ್ಯಕ್ಕೆ ಅನುಗುಣವಾಗಿ ಪೂರೈಸುವಂತೆ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿ ಮಹೇಶ್, ತಹಶೀಲ್ದಾರ್ ಜಯಪ್ರಕಾಶ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಶ್ರೀನಿವಾಸ್, ದೇವಾಲಯದ ಪ್ರಧಾನ ಆಗಮಿಕರಾದ ನಾಗೇಂದ್ರ ಭಟ್, ಅರ್ಚಕರಾದ ರವಿಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರದೀಪ್ ಕುಮಾರ್, ಉಪಾಧ್ಯಕ್ಷರಾದ ಕಮಲಮ್ಮ, ಸದಸ್ಯರಾದ ಸಾಕಮ್ಮ, ಮಾದಮ್ಮ, ರಂಗಮ್ಮ, ಬಸವಣ್ಣ, ಸಿರಿಮಹದೇವ, ಡಿವೈಎಸ್‍ಪಿ ಸೋಮಣ್ಣೇಗೌಡ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಚಿದಂಬರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *