ಮಲೆ ಮಹದೇಶ್ವರ ಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

ಕ್ಷೇತ್ರದಲ್ಲಿ 24 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಕ್ಯೂ ಲೈನ್ ಕಾಂಪ್ಲೆಕ್ಸ್ ಕಾಮಗಾರಿಯನ್ನು ಸಚಿವರು ವೀಕ್ಷಿಸಿದರು. ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಸೌಲಭ್ಯಗಳು ಇರಬೇಕೆಂದು ಸಚಿವರು ಸೂಚಿಸಿದರು.

ಬಳಿಕ 416 ಕೊಠಡಿಗಳ ನಿರ್ಮಾಣ ಕಾಮಗಾರಿಗಳನ್ನು ವೀಕ್ಷಿಸಿದ ಸಚಿವರು ಬಾಕಿ ಇರುವ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ತಿಳಿಸಿದರು.

ದೀಪದ ಗಿರಿ ಒಡ್ಡುವಿನಲ್ಲಿ ನಿರ್ಮಾಣವಾಗಿರುವ 108 ಅಡಿ ಮಲೆ ಮಹದೇಶ್ವರರ ಪ್ರತಿಮೆ ಸ್ಥಳದ ನೆಲ ಅಂತಸ್ತಿನಲ್ಲಿ ಮಹದೇಶ್ವರರ ಕುರಿತು ಚರಿತ್ರೆ, ಪವಾಡ ತಿಳಿಸುವ ವೈವಿಧ್ಯಮಯ ಕಲಾಕೃತಿಗಳ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.

ಬಳಿಕ ಮಲೆ ಮಹದೇಶ್ವರ ದೇವಾಲಯದ ಮುಖ್ಯ ಗೋಪುರದ ಎದುರಿನ ಸ್ಥಳದಲ್ಲಿ ಭಕ್ತಾಧಿಗಳಿಗೆ ಕಲ್ಪಿಸಬಹುದಾದ ನೆರಳಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.

ನಂತರ 1 ಮೆಗಾವ್ಯಾಟ್ ಸೋಲಾರ್ ಪವರ್ ಪ್ಲಾಂಟ್ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ ಸಚಿವರು ಬಾಕಿ ಇರುವ ಕಾಮಗಾರಿಯನ್ನು ವಿಳಂಬ ಮಾಡದೇ ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ನಿರ್ದೇಶನ ನೀಡಿದರು.

ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿ ಇರುವ ಖಾಲಿ ನಿವೇಶನದಲ್ಲಿ ಸಾರ್ವಜನಿಕರಿಗೆ ಸಾಮೂಹಿಕ ಶೌಚಾಲಯಗಳನ್ನು ನಿರ್ಮಾಣ ಮಾಡುವ ಸಂಬಂಧ ಪರಿಶೀಲನೆ ನಡೆಸಿದರು. ಇದೇ ವೇಳೆ ಬಸ್ ನಿಲ್ದಾಣದಲ್ಲಿ ಭಕ್ತಾಧಿಗಳೊಂದಿಗೆ ಮಾತನಾಡಿದ ಸಚಿವರು ಅವರ ಅಹವಾಲುಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಇನ್ನೂ ಯಾವ ಯಾವ ಸೌಲಭ್ಯಗಳು ಅಗತ್ಯವಿದೆ? ಎಂದು ಭಕ್ತಾಧಿಗಳಿಂದ ಕೇಳಿದರು. ಭಕ್ತಾಧಿಗಳು ಇನ್ನಷ್ಟು ಬಸ್‍ಗಳ ವ್ಯವಸ್ಥೆಯನ್ನು ಎಲ್ಲಾ ಕಡೆಯಿಂದ ಹೆಚ್ಚಾಗಿ ನಿಯೋಜಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿ ಮಹೇಶ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಮಹೇಶ್, ಇತರೆ ಅಧಿಕಾರಿಗಳು ಇದ್ದರು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ಅತಿಥಿಗೃಹ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಕಾಮಗಾರಿ ನಿರ್ವಹಣೆ ಸಂಬಂಧ ಚರ್ಚೆ ನಡೆಸಿದರು.

Leave a Reply

Your email address will not be published. Required fields are marked *