ಮಾನಸಿಕ ದೈಹಿಕ ಸದೃಢತೆಗೆ ಯೋಗ ಸಹಕಾರಿ : ಜಿಲ್ಲಾಧಿಕಾರಿ ಡಿ.ಎಸ್ ರಮೇಶ್

ಚಾಮರಾಜನಗರ: ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಲು ಯೋಗವು ಅತ್ಯಂತ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.

ನಗರದ ನಂದಿ ಭವನದಲ್ಲಿಂದು ಆಯುಷ್ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪತಂಜಲಿ ಯೋಗ ಶಿಕ್ಷಣ ಸಮಿತಿ, ಯೋಗ ನಿರತ ಸಂಘ ಸಂಸ್ಥೆಗಳ ಸಹಯೋಗದಲ್ಲಿ ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಜೀವನದಲ್ಲಿ ಉತ್ತಮ ಚಟುವಟಿಕೆಯಾದ ಯೋಗ, ಧ್ಯಾನದಂತಹ ಅಭ್ಯಾಸವನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕು. ಜೀವನದಲ್ಲಿ ನಾವು ಸಂತೋಷವಾಗಿದ್ದಾಗ ಮಾತ್ರ ಸುತ್ತಲಿನ ವಾತಾವರಣ ಸಂತೋಷದಿಂದ ಇರಲು ಸಾಧ್ಯವಾಗುತ್ತದೆ. ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಎಲ್ಲರಿಗೂ ಆರೋಗ್ಯಯುತ ಉತ್ತಮ ಜೀವನಕ್ಕೆ ದಾರಿಯಾಗಲಿ ಎಂದು ಜಿಲ್ಲಾಧಿಕಾರಿ ಅವರು ಹಾರೈಸಿದರು.

ಸಮಸ್ಯೆಗಳ ಮೂಲವೇ ಮನುಷ್ಯನಾಗಿರುತ್ತಾನೆ. ಸಮಸ್ಯೆಗಳಿಗೆ ಪರಿಹಾರವನ್ನು ಬೇರೆ ಕಡೆ ಹುಡುಕದೇ ತಮ್ಮಲೇ ಹುಡುಕಿದರೆ ಪರಿಹಾರ ಸಿಗುತ್ತವೆ. ಮನಸ್ಸು ಹಾಗೂ ಪ್ರಕೃತಿಯ ಜೊತೆಯಲ್ಲಿ ಮಾತನಾಡುವ ಗುಣವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ಪ್ರಕೃತಿ ಮತ್ತು ಮನುಷ್ಯರಿಗೆ ಒಂದು ರೀತಿಯ ಅವಿನಾಭಾವ ಸಂಬಂಧವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಪ್ರಕೃತಿ ಮತ್ತು ಮನುಷ್ಯರ ಸಂಬಂಧಕ್ಕೆ ಪ್ರಮುಖ ಕಾರಣ ವಾಯು. ಗಾಳಿ ಇಲ್ಲದಿದ್ದರೆ ಪ್ರಕೃತಿ ಮತ್ತು ಮನುಷ್ಯನ ಸಂಬಂಧವೆ ಇರುವುದಿಲ್ಲ. ಆದರಿಂದ ಪ್ರಕೃತಿ ಮತ್ತು ಮನುಷ್ಯನ ಸಂಬಂಧವನ್ನು ಗಟ್ಟಿಯಾಗಿಸಿಕೊಳ್ಳಬೇಕು. ಪ್ರಕೃತಿ ದತ್ತವಾಗಿ ದೊರೆಯುವ ಗಾಳಿಯ ಬಗ್ಗೆ ಯಾರು ಯೋಚಿಸುವುದಿಲ್ಲ. ಪ್ರಕೃತಿಯಿಂದ ಯಾವುದೇ ಅಗತ್ಯ ಇಲ್ಲದಂತೆ ನಡೆದುಕೊಳ್ಳುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ. ನಗರಸಭೆ ಪೌರಾಯುಕ್ತರಾದ ಎಸ್.ವಿ. ರಾಮದಾಸ್, ಪತಂಜಲಿ ಯೋಗ ಶಿಕ್ಷಣ ಸಮಿತಿ ಅಧ್ಯಕ್ಷರಾದ ಹೆಚ್.ಜಿ. ಕುಮಾರಸ್ವಾಮಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಸುಜಾತ ಇತರರು ಉಪಸ್ಥಿತರಿದ್ದರು.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಸಹ ಯೋಗ ಮಾಡುವ ಮೂಲಕ ಗಮನ ಸೆಳೆದರು.

Leave a Reply

Your email address will not be published. Required fields are marked *