ಚಾಮರಾಜನಗರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ 2023-24ನೇ ಸಾಲಿಗೆ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ (ಮಂಗಳಮುಖಿ) ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಅಭಿವೃದ್ದಿ ಹೊಂದಲು 30 ಸಾವಿರ ರೂ. ಪ್ರೋತ್ಸಾಹಧನ ನೀಡಲಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 20 ರೂ. ಛಾಪಾ ಕಾಗದದಲ್ಲಿ ಸಾಲ ಪಡೆಯುವ ಕುರಿತು ನಿಗದಿತ ಅವಧಿಯಲ್ಲಿ ಮರುಪಾವತಿಸುವ ಕುರಿತು ಹಾಗೂ ಮರುಪಾವತಿ ಮಾಡದಿದ್ದಲ್ಲಿ ಕಾನೂನು ಕ್ರಮಕ್ಕೆ ಬದ್ದರಾಗಿರುವ ಕುರಿತು ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಕರಾರು ಪತ್ರ ಸಲ್ಲಿಸಬೇಕು. ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಕಡ್ಡಾಯವಾಗಿ ಖಾತೆಯನ್ನು ಹೊಂದಿದ್ದು, ಬ್ಯಾಂಕ್ ಖಾತೆಯ ಪ್ರತಿಯನ್ನು ಲಗತ್ತಿಸಬೇಕು. ಬ್ಯಾಂಕ್ ಖಾತೆಯೊಂದಿಗೆ ಅರ್ಜಿದಾರರ ಆಧಾರ್ ಲಿಂಕೇಜ್ ಆಗಿರಬೇಕು. ಅರ್ಜಿದಾರರು ಯಾವುದೇ ಆರ್ಥಿಕ ಸಂಸ್ಥೆ, ಬ್ಯಾಂಕುಗಳಲ್ಲಿ ಸುಸ್ತಿದಾರರಾಗಿರಬಾರದು ಎಂಬ ಬಗ್ಗೆ ದೃಢೀಕರಣ ಪತ್ರ ಸಲ್ಲಿಸಬೇಕು.
ಅರ್ಜಿಗಳನ್ನು ಆನ್ಲೈನ್ ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಡಿಸೆಂಬರ್ 22 ರೊಳಗೆ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.