ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ ಅಗತ್ಯ: ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ನಗರದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ನೆರವೇರಿಸಿದರು.

ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಓದುವ ಸಂದರ್ಭದಲ್ಲಿ ಶಿಸ್ತು ಮತ್ತು ಸಮಯಪ್ರಜ್ಞೆ ಅಗತ್ಯ. ಸಮಯ ಮತ್ತೆ ಬರುವುದಿಲ್ಲ ಹೀಗಾಗಿ ಸಮಯ ಪರಿಪಾಲನೆಗೆ ಒತ್ತು ಕೊಟ್ಟು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಿಕ್ಷಣಕ್ಕಾಗಿ ಸರ್ಕಾರ ಹೆಚ್ಚಿನ ಒತ್ತು ನೀಡಿ ಬಜೆಟ್‌ನಲ್ಲಿ ಹೆಚ್ಚಿನ ಹಣ ಮೀಸಲಿರಿಸಿದೆ. ಚಾಮರಾಜನಗರ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿಯನ್ನು ಸಾಧಿಸುತ್ತಿದ್ದು, ಜಿಲ್ಲೆಯಲ್ಲಿ ನುರಿತ ಭೋಧಕ ವರ್ಗದವರು ಸಹ ಇದಕ್ಕೆ ತಮ್ಮ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ಚಾಮರಾಜನಗರದಲ್ಲಿ ಮೆಡಿಕಲ್ ಕಾಲೇಜು, ಕೃಷಿ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಮುಂದಿನ ದಿನಗಳಲ್ಲಿ ಕಾನೂನು ಕಾಲೇಜುಗಳು ಸಹ ಪ್ರಾರಂಭವಾಗಲಿದ್ದು, ಉನ್ನತ ವ್ಯಾಸಂಗವನ್ನು ಇಲ್ಲೇ ಮುಂದುವರಿಸಲು ಅವಕಾಶವಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿದ್ದು, ನುರಿತ ಭೋಧಕ ವರ್ಗದವರು ಉತ್ತಮವಾಗಿ ಪಾಠ-ಪ್ರವಚನಗಳನ್ನು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾಲೇಜು ಅಭಿವೃದ್ದಿಗೆ ಅಗತ್ಯ ನೆರವು ನೀಡುವುದಾಗಿ ಶಾಸಕರು ಭರವಸೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ ಪ್ರಸನ್ನ ಅವರು ಮಾತನಾಡಿ, ತಂದೆ-ತಾಯಿಗಳು ಪರಿಶ್ರಮ ವಹಿಸಿ ಕೂಲಿ ಕೆಲಸಗಳನ್ನು ಮಾಡಿಕೊಂಡು ತಮ್ಮ ಮಕ್ಕಳ ಭವಿಷ್ಯದ ಕನಸು ಇಟ್ಟುಕೊಂಡು ಕಾಲೇಜಿಗೆ ಕಳುಹಿಸುತ್ತಾರೆ.

ಹೀಗಾಗಿ ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಪರಿಶ್ರಮ ವಹಿಸಿ ಶ್ರದ್ಧಾ-ಭಕ್ತಿಯಿಂದ ಅಧ್ಯಯನ ಮಾಡಿ ಉತ್ತಮ ಅಂಕಗಳನ್ನು ಪಡೆದು ಮುಂದೆ ಉನ್ನತ ವ್ಯಾಸಂಗ ಪೂರೈಸಿ ಉನ್ನತ ಹುದ್ದೆಗಳನ್ನು ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಸಲಹೆ ನೀಡಿದರು. ಅದಕ್ಕೆ ನಿದರ್ಶನ ಎಂಬಂತೆ ತಾನು ಸಹ ಇದೇ ಕಾಲೆಜಿನಲ್ಲಿ ಓದಿ ಇಂದು ಉಪನಿರ್ದೇಶಕನಾಗಿದ್ದೇನೆ.

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಅಧ್ಯಯನ ಮಾಡಿದ ಬಹುತೇಕರು ಇಂದು ಸರ್ಕಾರದ ಉನ್ನತ ಹುದ್ದೆಗಳಲ್ಲಿ, ಸಮಾಜದ ವಿವಿಧ ಸ್ತರಗಳಲ್ಲಿ ಪ್ರಮುಖ ಸ್ಥಾನದಲ್ಲಿದ್ದಾರೆಂದು ತಿಳಿಸಿದರು. ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ಉತ್ತಮ ಅಭ್ಯಾಸ ಮಾಡಿ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಬೇಕೆಂದು ತಿಳಿಸಿದರು.

ಪ್ರಾಂಶುಪಾಲ ಸೋಮಣ್ಣ ಮಾತನಾಡಿ, ಕಾಲೇಜಿನಲ್ಲಿ ದಾಖಲಾತಿ ಹೆಚ್ಚಾಗುತ್ತಿದ್ದು ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜು ಸಭಾಂಗಣಕ್ಕೆ ಮೇಲ್ಛಾವಣಿ,ಶುದ್ದ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿಕೊಡುವಂತೆ ಸಾಸಕರಲ್ಲಿ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಉಪನ್ಯಾಸಕರಾದ ಮುನಿಸ್ವಾಮಿ ಮತ್ತು ಶ್ರೀಕಂಠಸ್ವಾಮಿ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಅಭಿವೃದ್ದಿ ಸಮಿತಿಯ ಕಲೀಮುಲ್ಲಾ, ಉಪನ್ಯಾಸಕರಾದ ರಾಮಕೃಷ್ಣ, ಮಹದೇವಸ್ವಾಮಿ, ಕೃಷ್ಣಮೂರ್ತಿ, ಮಾದಪ್ಪ, ಮಧು, ಸುಮಿಲ್, ಸತ್ಯದಾಸ್,ಸವಿತ, ಶೀಲ,ಜಯಶ್ರೀ,ಸೇರಿದಂತೆ ಅತಿಥಿ ಉಪನ್ಯಾಸಕರು ಹಾಜರಿದ್ದರು.

Leave a Reply

Your email address will not be published. Required fields are marked *