ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ
ಚಾಮರಾಜನಗರ, ಅ. ೨೭- ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ತಮ್ಮ ವೃತ್ತಿಬದುಕಿನಲ್ಲಿ ಯಶಸ್ಸು ಕಾಣಬಹುದು ಎಂದು ವೆಂಕಟಯ್ಯನಛತ್ರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್. ನಾಗೇಶ್ ಹೇಳಿದರು.
ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ (ಅಲುಮ್ನಿ ಅಸೋಸಿಯೇಷನ್) ದ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ನನ್ನ ವೃತ್ತಿ ಜೀವನದಲ್ಲಿ ಯಶಸ್ಸು ಕಾಣಲು, ಜೆಎಸ್ಎಸ್ ಸಂಸ್ಥೆ ಮತ್ತು ವಿದ್ಯೆ ನೀಡಿದ ಗುರುಗಳು ಕಾರಣ. ಇದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿ, ಇಲ್ಲಿಯೇ ಉಪನ್ಯಾಸಕನಾಗಿ ಕರ್ತವ್ಯ ಸಲ್ಲಿಸಿ, ಈಗ ಸರ್ಕಾರಿ ಕಾಲೇಜಿನಲ್ಲಿ ಪ್ರಾಂಶುಪಾಲನಾಗಿzನೆ. ಇದಕ್ಕೆ ಸಂಸ್ಥೆಯ ಕೃಪಾಶೀರ್ವಾದ ಕಾರಣ ಎಂದು ಸ್ಮರಿಸಿದರು.
ಕುದೇರು ಸರ್ಕಾರಿ ಎಂ.ಸಂಗಶೆಟ್ಟಿ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಕೆ.ಎನ್.ಅಶ್ವಿನಿ ಮಾತನಾಡಿ, ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆಯಿದ್ದು, ಅದೃಷ್ಟ, ದೇವರು ಎಂದು ಕುಳಿತರೆ ನಾವು ಏನನ್ನೂ ಸಾಧಿಸಲು ಆಗುವುದಿಲ್ಲ. ನಾವು ಅಂದುಕೊಂಡಿದ್ದ ಗುರಿಯನ್ನು ಸಾಧಿಸಲು ಸತತ ಪರಿಶ್ರಮ ಪಡಬೇಕು. ತಮ್ಮ ಪಾಲಿನ ಬದುಕು ಸುಖ ಅಥವಾ ದುಖದೊಂದಿಗೆ ಕೂಡಿರಲಿ, ಅದನ್ನು ಮುಕ್ತಮನಸ್ಸಿನಿಂದ ಸ್ವೀಕರಿಸಬೇಕು ಎಂದರು.
ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸಾಧಿಸಲು ಆಸಕ್ತಿ, ಶ್ರದ್ಧೆ, ಸತತ ಪರಿಶ್ರಮ ಪಡಬೇಕು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಸಮಯ ಪ್ರಜ್ಞೆ ರೂಢಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಜಿ.ಸಿದ್ದರಾಜು ಮಾತನಾಡಿ, ಕಾಲೇಜಿನಲ್ಲಿ ಪದವಿಪಡೆದ ಸಾವಿರಾರು ಮಂದಿ ವಿವಿಧ ಕ್ಷೇತ್ರದಲ್ಲಿ ಉನ್ನತಮಟ್ಟದ ಅಧಿಕಾರಿಗಳಾಗಿ ಸೇವೆಸಲ್ಲಿಸುತ್ತಿದ್ದಾರೆ. ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಒಂದೆಡೆ ಸಮ್ಮಿಲನಗೊಂಡು, ಸಮಾವೇಶ ಆಯೋಜನೆ ಮಾಡಿರುವುದು ಹಿರಿಯ ವಿದ್ಯಾರ್ಥಿಗಳು ಒಂದೆಡೆ ಸೇರಲು ಸಹಕಾರಿಯಾಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ಬೆಂಗಳೂರು ಆಕಾಶವಾಣಿ ಕಲಾವಿದೆ ಮಂಜುಳಾಪ್ರಭಾಕರ್ ಮಾತನಾಡಿ, ತಾವು ಈ ಕಾಲೇಜಿನ ವಿದ್ಯಾರ್ಥಿನಿ ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ. ಇಲ್ಲಿನ ವ್ಯಾಸಂಗ ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಕಾರಣವಾಯಿತು ಎಂದರು.
ಜೆಎಸ್ಎಸ್ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ, ಐಕ್ಯುಎಸಿ ಸಂಚಾಲಕಿ ಬಿ.ರೇವಣಾಂಬ, ಸಹಾಯಕ ಪ್ರಾಧ್ಯಾಪಕರಾದ ಆರ್.ಪಿ.ಅನುರಾಧಾ, ಎಸ್. ಜಮುನಾ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಸಿ.ರೂಪಶ್ರೀ ಸೇರಿದಂತೆ ಹಿರಿಯ ವಿದ್ಯಾರ್ಥಿಗಳು ಹಾಜರಿದ್ದರು.