ಸೆ. 9ರಂದು ಜಿಲ್ಲೆಯಾದ್ಯಂತ ಮೆಗಾ ಲೋಕ್ ಅದಾಲತ್

ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್ ೯ರಂದು ಜಿಲ್ಲೆಯಾದ್ಯಂತ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.

ನಗರದ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದ ಸಭಾಂಗಣದಲ್ಲಿಂದು ಲೋಕ್ ಅದಾಲತ್ ಸಂಬಂಧ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ಸೆಪ್ಟೆಂಬರ್ ೯ರಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲ ತಾಲೂಕು ನ್ಯಾಯಾಲಯಗಳಲ್ಲಿ ಬೈಟಕ್‌ಗಳನ್ನು ಏರ್ಪಡಿಸಿ ಸಂಧಾನಕಾರರನ್ನು ನೇಮಿಸಿ ಆಯಾ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಏರ್ಪಡಿಸಲಾಗಿದೆ.

ಕಳೆದ ಬಾರಿ ವಕೀಲರ, ಕಕ್ಷಿದಾರರ, ಪೊಲೀಸರ, ವಿಮಾ ಕಂಪನಿಗಳ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಲೋಕ್ ಅದಾಲತ್ ಯಶಸ್ವಿಯಾಗಿ ನಡೆದಿತ್ತು. ಒಟ್ಟು ೧೮,೨೨೪ ಪ್ರಕರಣಗಳಲ್ಲಿ ೧೪,೮೩೭ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಈ ಬಾರಿಯ ಲೋಕ್ ಅದಾಲತ್‌ನಲ್ಲಿ ಗರಿ? ಪ್ರಮಾಣದ ಪ್ರಕರಣಗಳು ಇತ್ಯರ್ಥವಾಗುವ ನಿಟ್ಟಿನಲ್ಲಿ ಪ್ರತಿ ನ್ಯಾಯಾಲಯಗಳಲ್ಲಿ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಪೂರ್ವಭಾವಿ ಸಮಾಲೋಚನೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಮೆಗಾ ಲೋಕ್ ಅದಾಲತ್‌ಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ತಮ್ಮ ಸಹಕಾರವನ್ನು ನೀಡಿದ್ದಲ್ಲಿ ಸಂಧಾನಕಾರರು ನೀಡುವ ಸಲಹೆಗಳನ್ನು ಆಲಿಸಿ, ಪರಸ್ಪರ ಒಪ್ಪಿಗೆಯಾದಲ್ಲಿ ಪ್ರಕರಣವನ್ನು ಲೋಕ್ ಅದಾಲತ್ ಬಗೆಹರಿಸಿಕೊಳ್ಳಬಹುದು. ಇದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗುತ್ತದೆ. ಪಕ್ಷಾಕಾರರ ನಡುವೆ ಬಾಂಧವ್ಯ ವೃದ್ದಿಸಲಿದೆ ಎಂದರು.

ಸಾರ್ವಜನಿಕ ಹಿತಾಸಕ್ತಿ ಪ್ರಕರಣಗಳನ್ನು ಹೊರತುಪಡಿಸಿ, ಇತರೆ ಯಾವುದೇ ರೀತಿಯ ಸಿವಿಲ್ ಪ್ರಕರಣಗಳು, ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ದಾಂಪತ್ಯ ಹಕ್ಕುಗಳ ಪುನರ್ ಸ್ಥಾಪನೆ, ಜೀವನಾಂಶ, ಮಕ್ಕಳ ಸಂರಕ್ಷಣೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳು, ಮೋಟಾರ್ ವಾಹನ ಅಪಘಾತಕ್ಕೆ ಸಂಬಂಧಪಟ್ಟ ಪ್ರಕರಣಗಳು, ಕೈಗಾರಿಕಾ ವಿವಾದ ಕಾಯ್ದೆ ಅಡಿಯಲ್ಲಿರುವ ಪ್ರಕರಣಗಳು ಹಾಗೂ ಇತರೆ ಎಲ್ಲಾ ಸ್ವರೂಪದ ಪ್ರಕರಣಗಳು ಮತ್ತು ರಾಜೀ ಯೋಗ್ಯ ಕ್ರಿಮಿನಲ್ ಪ್ರಕರಣಗಳು, ವಿಶೇ? ಕಾನೂನಿನಿಂದ ಶಿಕ್ಷಿಸಲ್ಪಡುವ ಅಪರಾಧಗಳಾದ ಚೆಕ್ಕು ಅಮಾನ್ಯ ಪ್ರಕರಣಗಳು, ಕಾರ್ಮಿಕ ಕಾಯ್ದೆಯಲ್ಲಿ ಬರತಕ್ಕಂತಹ ಪ್ರಕರಣಗಳು, ವಿದ್ಯುಚ್ಛಕ್ತಿ ಕಾಯ್ದೆ ಅಡಿಯಲ್ಲಿ ವಿದ್ಯುತ್ ಕಳವಿಗೆ ಸಂಬಂಧಿಸಿದ ಪ್ರಕರಣಗಳು, ಅಕ್ರಮ ಕಲ್ಲು, ಮರಳು ಸಾಗಾಣಿಕೆಗೆ ಸಂಬಂಧಪಟ್ಟ ಅಪರಾಧಗಳು, ಇತರೆ ಯಾವುದೇ ರಾಜಿ ಯೋಗ್ಯ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಬಹುದು. ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ಲೋಕ್ ಅದಾಲತ್ ನಲ್ಲಿ ರಾಜಿ ಮಾಡಿಕೊಳ್ಳುವ ಅವಕಾಶ ಕಲ್ಪಿಸಿರುವುದರಿಂದ, ನ್ಯಾಯಾಲಯಕ್ಕೆ ದಾಖಲಿಸುವ ಪೂರ್ವದಲ್ಲಿ ಸಮಾಲೋಚನೆಯಲ್ಲಿ ರಾಜೀ ಮಾಡಿಕೊಳ್ಳಬಹುದು ಎಂದು ನ್ಯಾಯಾಧೀಶರು ತಿಳಿಸಿದರು.
ಯಾವುದೇ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ರಾಜೀ ಯೋಗ್ಯ ಪ್ರಕರಣಗಳಲ್ಲಿ ಪಕ್ಷಕಾರರು ಸಂಬಂಧಪಟ್ಟ ನ್ಯಾಯಾಲಯಕ್ಕೆ ಲೋಕ್ ಅದಾಲತ್ ಗೆ ಪ್ರಕರಣವನ್ನು ವರ್ಗಾಯಿಸಲು ಮನವಿ ಸಲ್ಲಿಸಿದ್ದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ ಅದಾಲತ್ ಮುಂದೆ ಕಳುಹಿಸಲಾಗುತ್ತದೆ. ನಿಗದಿಯಾಗಿರುವ ಪ್ರಕರಣಗಳನ್ನು ಮುಂಗಡ ಅರ್ಜಿಯನ್ನು ಸಲ್ಲಿಸುವ ಮುಖಾಂತರ, ಲೋಕ್ ಅದಾಲತ್‌ನಲ್ಲಿ ತರಿಸಿಕೊಂಡು ವ್ಯಾಜ್ಯ ಇತ್ಯರ್ಥಕ್ಕೆ ಪ್ರಯತ್ನಿಸುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ. ಅಲ್ಲದೇ ಪೂರ್ವಭಾವಿ ಸಮಾಲೋಚನಾ ಕೇಂದ್ರಗಳಲ್ಲಿ ನ್ಯಾಯಾಲಯದಿಂದ ಸಾಕ? ಪ್ರಕರಣಗಳು ಪೂರ್ವಭಾವಿ ಸಮಾಲೋಚನೆಯ ಮುಖಾಂತರ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆ ಪ್ರಕಾರ ಕಳೆದ ಒಂದು ತಿಂಗಳಿಂದ ಸಾಕ? ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಮತ್ತು ನ್ಯಾಯಾಲಯದ ಬಾಕಿ ಪ್ರಕರಣಗಳನ್ನು ಪೂರ್ವಭಾವಿ ಸಮಾಲೋಚನೆ ಮೂಲಕ ಇತ್ಯರ್ಥ ಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.

ಪಕ್ಷಗಾರರು ಖುದ್ದಾಗಿ ಹಾಗೂ ಭೌತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸಿಕೊಳ್ಳಬಹುದಾಗಿದೆ. ಲೋಕ ಅದಾಲತ್‌ನಲ್ಲಿ ಹೆಚ್ಚೆಚ್ಚು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಸಲುವಾಗಿ ವಿಮಾ ಕಂಪನಿಗಳು, ಭೂ ಸ್ವಾಧೀನಾಧಿಕಾರಿಗಳು, ಬ್ಯಾಂಕುಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ, ನ್ಯಾಯಾಧೀಶರು ಹಾಗೂ ವಕೀಲರು, ಕಂದಾಯ ಇಲಾಖೆ, ಅಬಕಾರಿ ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಲಾಗಿದೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಪ್ರತಿದಿನ ಹಾಗೂ ಎಲ್ಲಾ ನ್ಯಾಯಾಲಯಗಳಲ್ಲಿ ನಿತ್ಯ ಲೋಕ್ ಅದಾಲತ್ ಪೂರ್ವಭಾವಿ ಸಮಾಲೋಚನಾ ಸಭೆ ಏರ್ಪಡಿಸುತ್ತಿದ್ದು, ರಾಜೀ ಯೋಗ್ಯ ಪ್ರಕರಣಗಳಲ್ಲಿ ಎರಡೂ ಪಕ್ಷಾಕಾರರನ್ನು ಕರೆಸಿ ಪೂರ್ವಭಾವಿ ಸಮಾಲೋಚನೆಯನ್ನು ನಡೆಸಿ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸಂಬಂಧಪಟ್ಟ ಪ್ರತಿಯೊಬ್ಬ ಪಕ್ಷಗಾರರು ಲೋಕ್ ಅದಾಲತ್ ಸೌಲಭ್ಯವನ್ನು ಪಡೆದುಕೊಳ್ಳುವಂತೆ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Leave a Reply

Your email address will not be published. Required fields are marked *