ಚಾಮರಾಜನಗರ: ನಗರದಲ್ಲಿ ಸ್ವಾತಂತ್ರ್ಯ ದಿನ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸಕಲ ಸಿದ್ದತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸ್ವಾತಂತ್ರ್ಯ ದಿನ ಆಚರಣೆ ಸಿದ್ದತೆ ಪರಿಶೀಲನೆ ಸಂಬಂಧ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ದಿನ ಆಚರಣೆಯನ್ನು ಸುಸೂತ್ರವಾಗಿ ಕೈಗೊಳ್ಳುವ ಸಂಬಂಧ ನೇಮಕವಾಗಿರುವ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿಗಳು ಕೂಡಲೇ ವಹಿಸಿದ ಜವಾಬ್ದಾರಿ ಅನುಸಾರ ಕಾರ್ಯೋನ್ಮುಖರಾಗಬೇಕು. ಕಾರ್ಯಕ್ರಮ ಸುವ್ಯಸ್ಥಿತವಾಗಿ ನಡೆಯಲು ಬೇಕಿರುವ ಎಲ್ಲಾ ಸಿದ್ದತೆಗಳನ್ನು ಶೀಘ್ರ ಪೂರ್ಣಗೊಳಸಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಕಾರ್ಯಕ್ರಮ ನಡೆಯುವ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಈಗಾಗಲೇ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಕ್ರೀಡಾಂಗಣದಲ್ಲಿ ವೇದಿಕೆ, ಹೂವಿನ ಅಲಂಕಾರ, ಧ್ವನಿವರ್ಧಕ, ಶಾಮಿಯಾನ, ಆಸನಗಳು ಸೇರಿದಂತೆ ಎಲ್ಲವು ಅಚ್ಚುಕಟ್ಟಾಗಿ ಇರಬೇಕು. ಎಲ್ಲರಿಗೂ ನೆರಳು ಇರುವಂತೆ ಹೆಚ್ಚುವರಿಯಾಗಿ ವ್ಯವಸ್ಥೆ ಮಾಡಬೇಕು ಎಂದರು.
ಕ್ರೀಡಾಂಗಣದಲ್ಲಿ ಪಥಸಂಚಲನ, ವಿದ್ಯಾರ್ಥಿಗಳಿಂದ ದೇಶಭಕ್ತಿ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸ ಕುರಿತ ಉತ್ತಮ ಕಾರ್ಯಕ್ರಮಗಳ ಆಯೋಜನೆ, ತಾಲೀಮು ನಡೆಸಲು ಸಂಬಂಧಪಟ್ಟ ಸಮಿತಿ ನೋಡಿಕೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆ ಕ್ರೀಡಾಂಗಣದ ಎಲ್ಲೆಡೆ ಇರಬೇಕು. ಪ್ಲಾಸ್ಟಿಕ್ ಬಳಕೆಯಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ವಿಶೇಷವಾಗಿ ಕ್ರೀಡಾಂಗಣವನ್ನು ಸ್ವಚ್ಚಗೊಳಿಸಬೇಕು. ಸ್ವಾತಂತ್ರ್ಯ ದಿನ ಆಚರಣೆಯಂದು ನಗರಸಭೆ ವತಿಯಿಂದ ಪ್ರಮುಖ ಸ್ಥಳಗಳಲ್ಲಿ ತಳಿರು ತೋರಣಗಳಿಂದ ಅಲಂಕರಿಸುವ ವ್ಯವಸ್ಥೆಯಾಗಬೇಕು. ಆಹ್ವಾನ ಪತ್ರಿಕೆಯ ಮುದ್ರಣ, ವಿತರಣೆ ಸೇರಿದಂತೆ ಎಲ್ಲಾ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ನಿರ್ದೇಶನ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ. ಉದೇಶ, ತಹಶೀಲ್ದಾರ್ ಗಿರಿಜಾ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
