ಹಂಗಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಭೇಟಿ : ಪರಿಶೀಲನೆ

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಭೇಟಿ ನೀಡಿ ಆರೋಗ್ಯ ಕೇಂದ್ರದ ಸ್ಥಿತಿಗತಿ ಹಾಗೂ ವೈದ್ಯಕೀಯ ಸೇವೆಯನ್ನು ಪರಿಶೀಲಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಕೊಠಡಿಗಳು, ಸ್ವಚ್ಚತೆ, ಔಷಧಿ ನಿರ್ವಹಣೆ ಹಾಗೂ ಒಳರೋಗಿಯಾಗಿ ದಾಖಲಾಗಿದ್ದ ರೋಗಿಗಳಿಗೆ ಕೇಂದ್ರದಿಂದ ನೀಡುತ್ತಿರುವ ವೈದ್ಯಕೀಯ ಸೌಲಭ್ಯಗಳ ಕುರಿತು ಮತ್ತು ಕೇಂದ್ರದಲ್ಲಿದ್ದ ಔಷಧಿಗಳ ನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ಸುಮಾರು 60 ರಿಂದ 70 ಜನರು ಚಿಕಿತ್ಸೆ ಕೋರಿ ಬರುತ್ತಿದ್ದಾರೆ. ಕೇಂದ್ರದಲ್ಲಿ 18 ಮಂದಿ ನೌಕರರಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡಲು 4 ಜನರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ತುರ್ತು ಸಮಯದಲ್ಲಿ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಈ ಸಂಬಂಧ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಗಮನಕ್ಕೆ ತಂದು, ಕೂಡಲೇ ಸಿಬ್ಬಂದಿಗಳ ಕೊರತೆಯನ್ನು ನಿವಾರಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಲು ಕ್ರಮ ವಹಿಸುವಂತೆ ನ್ಯಾಯಾಧೀಶರು ಸೂಚಿಸಿದರು.

ಚಿಕಿತ್ಸೆ ಕೋರಿ ಕೇಂದ್ರಕ್ಕೆ ಬರುವÀ ರೋಗಿಗಳ ಜೊತೆ ಮಾನವೀಯತೆ ಹಾಗೂ ಸಹಾನುಭೂತಿಯಿಂದ ನಡೆದುಕೊಳ್ಳಬೇಕು. ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆಯನ್ನು ನೀಡಬೇಕು. ರೋಗಿಗಳಿಗೆ ಸರ್ಕಾರದಿಂದ ಉಚಿತವಾಗಿ ದೊರೆಯುವಂತಹ ಸರ್ಕಾರದ ಔಷಧಗಳನ್ನೇ ನೀಡುವಂತೆ ಅಲ್ಲಿನ ವೈದ್ಯರಿಗೆ ನ್ಯಾಯಾಧೀಶರು ನಿರ್ದೇಶನ ನೀಡಿದರು.

ಬಳಿಕ ಕೇಂದ್ರಕ್ಕೆ ಬಂದಿದ್ದ ರೋಗಿಗಳನ್ನು ಮಾತನಾಡಿಸಿದ ನ್ಯಾಯಾಧೀಶರು ಕೇಂದ್ರದಿಂದ ದೊರೆಯುತ್ತಿರುವ ವೈದ್ಯಕೀಯ ಸೌಲಭ್ಯ, ಚಿಕಿತ್ಸೆ ಮತ್ತು ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದರು. ತುರ್ತು ಪರಿಸ್ಥಿತಿ ಹಾಗೂ ಹಿರಿಯ ನಾಗರಿಕರಿಗೆ ಮಾನವೀಯತೆಯಿಂದ ಶೀಘ್ರವಾಗಿ ಸ್ಪಂದಿಸಬೇಕು. ರೋಗಿಗಳು ಹಾಗೂ ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು.

ನಂತರ ಮೇಲುಕಾಮನಹಳ್ಳಿಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ನ್ಯಾಯಾಧೀಶರು ಅಲ್ಲಿನ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುತ್ತಿರುವ ಬಗ್ಗೆ ಹಾಗೂ ಅಂಗನವಾಡಿಯ ಸ್ವಚ್ಚತೆಯನ್ನು ಪರಿಶೀಲಿಸಿದರು. ಸಾರ್ವಜನಿಕರು ಕಾನೂನು ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದು ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಸಲಹೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಸಂದೀಪ್‍ಕುಮಾರ್, ಕೇಂದ್ರದ ಸಿಬ್ಬಂದಿ ಇದೇ ವೇಳೆ ಹಾಜರಿದ್ದರು.

Leave a Reply

Your email address will not be published. Required fields are marked *