ಚಾಮರಾಜನಗರ: ಹಿರಿಯ ನಾಗರಿಕರನ್ನು ಪ್ರೀತಿ ಗೌರವದಿಂದ ನೋಡಿಕೊಳ್ಳಬೇಕು. ಮಕ್ಕಳು ಇಳಿವಯಸ್ಸಿನಲ್ಲಿ ತಂದೆ ತಾಯಿ ಪೋಷಕರನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತಿಳಿಸಿದರು.
ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಹಮ್ಮಿಕೊಳ್ಳಲಾಗಿದ್ದ ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಿರಿಯ ನಾಗರಿಕರ ಬಗ್ಗೆ ಕಾಳಜಿ ವಹಿಸಬೇಕು. ತಂದೆ ತಾಯಿ ಪೋಷಕರನ್ನು ಗೌರವದಿಂದ ಕಾಣಬೇಕು. ಇತ್ತೀಚಿನ ದಿನಗಳಲ್ಲಿ ಪೋಷಕರ ಬಗ್ಗೆ ನಿರ್ಲಕ್ಷ್ಯ ವಹಿಸುವುದನ್ನು ನೋಡುತ್ತಿದ್ದೇವೆ. ಇಂತಹ ಧೋರಣೆ ಸರಿಯಲ್ಲ. ವಯಸ್ಸಾದವರಿಗೆ ರಕ್ಷಣೆ ನೀಡಿ ಅವರ ಆರೋಗ್ಯ ಸುಧಾರಣೆಗೆ ಔಷದೋಪಚಾರ ಇನ್ನಿತರ ಅಗತ್ಯಗಳನ್ನು ಪೂರೈಸಬೇಕು ಎಂದರು.
ಹಿರಿಯ ನಾಗರಿಕರಿಗಾಗಿ ಪೋಷಣಾ ಅಧಿನಿಯಮ ಕಾಯ್ದೆ ಇದೆ. ಮಕ್ಕಳು ಅಥವಾ ಸಾಕು ಮಕ್ಕಳು ಇಲ್ಲವೇ ಅವಲಂಬಿತರಿಗೆ ತಂದೆ ತಾಯಿ ಆಸ್ತಿ ನೋಂದಣಿ ಮಾಡಿಕೊಟ್ಟಿದ್ದರೂ ಸಹ ಮತ್ತೆ ಆಸ್ತಿ ಹಿಂದಕ್ಕೆ ಪಡೆಯುವ ಅವಕಾಶವನ್ನು ಕಾಯ್ದೆಯಲ್ಲಿ ರೂಪಿಸಲಾಗಿದೆ ಎಂದು ತಿಳಿಸಿದರು.
ಕ್ರೀಡೆ, ಸಾಂಸ್ಕøತಿಕ ಚಟುವಟಿಕೆಗಳಿಗೆ ವಯಸ್ಸಿನ ಮಿತಿಯಿಲ್ಲ. ಎಲ್ಲರು ಸಂತೋಷದಿಂದ ಭಾಗವಹಿಸಬಹುದು. ಇಂದೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಪಾಲ್ಗೊಂಡಿರುವುದು ಸಂತಸದ ವಿಷಯವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತಿಳಿಸಿದರು.
ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ನಾಗೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಗೀತಾ ಲಕ್ಷ್ಮಿ, ನಿರೂಪಣಾ ಅಧಿಕಾರಿ ದಿನೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎ. ರಮೇಶ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಸುರೇಶ್ ಇದ್ದರು.