ಚಾಮರಾಜನಗರ: ಕೃಷಿ ಇಲಾಖೆಯಿಂದ 2026-27ನೇ ಸಾಲಿಗೆ ಆತ್ಮ ಯೋಜನೆಯಡಿ ನೀಡಲಾಗುವ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಪ್ರಗತಿಪರ ರೈತರು ಮತ್ತು ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಉತ್ಪಾದನೆ ಗಣನೀಯವಾಗಿ ಹೆಚ್ಚಳವಾಗಲು ರೈತರ ಶ್ರಮ ಮತ್ತು ಸಕ್ರಿಯ ಪಾಲುಗಾರಿಕೆ ಕಾರಣವಾಗಿರುತ್ತದೆ. ಇಂತಹ ರೈತರನ್ನು ಗುರುತಿಸಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಲಾಗುವುದು.
ಸಮಗ್ರ ಕೃಷಿ ಪದ್ಧತಿ, ಬೆಳೆ ಪದ್ಧತಿಗಳು, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ಆಧುನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ, ರೇಷ್ಮೆ ಕೃಷಿ, ಕೃಷಿ ಉತ್ಪನ್ನ ಸಂಸ್ಕರಣೆ, ಅರಣ್ಯ ಕೃಷಿ ಇನ್ನಿತರ ಯಾವುದಾದರೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಅರ್ಜಿ ಸಲ್ಲಿಸಲು ಇಚ್ಚಿಸುವ ರೈತ/ರೈತ ಮಹಿಳೆಯರು ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಜುಲೈ 31 ರೊಳಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಒಮ್ಮೆ ಪ್ರಶಸ್ತಿ ಪಡೆದ ರೈತರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ರಿಗೆ 25 ಸಾವಿರ ರೂ. ಹಾಗೂ ತಾಲೂಕು ಮಟ್ಟದ ಪ್ರಶಸ್ತಿ ಪುರಸ್ಕೃತ ರಿಗೆ 10 ಸಾವಿರ ರೂ. ಬಹುಮಾನದ ಮೊತ್ತ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Like this:
Like Loading...
Related