ಆರೋಗ್ಯ ಸೇವೆ ಜನರ ಬಳಿಗೆ ತಲುಪಿಸಲು ಆರೋಗ್ಯ ಮೇಳ : ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್

ಚಾಮರಾಜನಗರ: ಆರೋಗ್ಯ ಸೇವೆ ಜನರ ಬಳಿ ತಲುಪಬೇಕು. ತಜ್ಞ ವೈದ್ಯರ ಸೇವೆ, ವೈದ್ಯಕೀಯ ಅತ್ಯಾಧುನಿಕ ಸಲಕರಣೆಗಳ ಸೌಲಭ್ಯವನ್ನು ಆಯಾ ಭಾಗದಲ್ಲಿಯೇ ದೊರಕಿಸಿ ಸಮಗ್ರ ಆರೋಗ್ಯ ತಪಾಸಣೆ ಮಾಡಬೇಕು ಎನ್ನುವ ಉದ್ದೇಶದಿಂದ ಆರೋಗ್ಯ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.

ಕೊಳ್ಳೇಗಾಲ ಪಟ್ಟಣದ ಎಂ.ಜಿ.ಎಸ್.ವಿ ಕಾಲೇಜು ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಹಯೋಗದೊಂದಿಗೆ ಏರ್ಪಾಡಾಗಿದ್ದ ಬೃಹತ್ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ವಿಶೇಷವಾಗಿ ಕಾಡಂಚಿನ, ದೂರದ ಪ್ರದೇಶಗಳ ಜನತೆಗೆ ಆರೋಗ್ಯ ಸೇವೆ ಸಿಗಬೇಕು ಎನ್ನುವ ಕಾರಣದಿಂದ ಕೊಳ್ಳೇಗಾಲದಂತಹ ಪಟ್ಟಣದಲ್ಲಿ ಆರೋಗ್ಯ ಮೇಳ ಏರ್ಪಡಿಸಲಾಗಿದೆ. ಕಳೆದ ಹನೂರು, ಕೊಳ್ಳೇಗಾಲ ಭೇಟಿಯ ವೇಳೆಯೇ ಇಲ್ಲಿಯೇ ಆರೋಗ್ಯ ಮೇಳ ಆಯೋಜನೆಗೆ ನಿರ್ಧರಿಸಿ ಸಚಿವರು, ಶಾಸಕರು, ಅಧಿಕಾರಿಗಳೊಂದಿಗೆ ಚರ್ಚಿಸಿದ್ದೆ. ಅದರಂತೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳು ಉತ್ಸಾಹದಿಂದ ಅತ್ಯಂತ ವ್ಯವಸ್ಥಿತವಾಗಿ ಆರೋಗ್ಯ ಮೇಳ ಏರ್ಪಡಿಸಿದ್ದಾರೆ ಎಂದರು.

ಕೊಳ್ಳೇಗಾಲದಲ್ಲಿ ಆಯೋಜನೆಯಾಗಿರುವ ಬೃಹತ್ ಆರೋಗ್ಯ ಮೇಳಕ್ಕೆ ನಿರೀಕ್ಷೆಗೂ ಮೀರಿ ಹೆಚ್ಚಿನ ಸ್ಪಂದನೆ ದೊರೆತಿದ್ದು ರಾಜ್ಯದ ಇತರೆ ಕಡೆಗಳಲ್ಲಿಯೂ ಆರೋಗ್ಯ ಮೇಳ ಆಯೋಜನೆಗೆ ನಾಂದಿಯಾಗಿದೆ. ತಪಾಸಣೆಗೆ ಒಳಗಾದವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಮೈಸೂರು, ಬೆಂಗಳೂರಿನ ಆಸ್ಪತ್ರೆಗಳಿಗೂ ಕಳುಹಿಸಲಾಗುವುದು. ತಪಾಸಣೆ ಮಾಡಿಸಿಕೊಂಡವರ ಆರೋಗ್ಯ ಸ್ಥಿತಿಗತಿ ತಿಳಿಯುವಂತೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ಆಶಾಕಿರಣ ಯೋಜನೆಯಡಿ ಜಿಲ್ಲೆಯಲ್ಲಿ ಸಮಗ್ರ ನೇತ್ರ ತಪಾಸಣೆ ನಡೆದಿದೆ. 60 ಸಾವಿರ ಜನರಿಗೆ ಹಾಗೂ 17 ಸಾವಿರ ಮಕ್ಕಳ ಕನ್ನಡಕ ವಿತರಣೆ ಮಾಡಲಾಗುತ್ತದೆ. ಸದ್ಯದಲ್ಲೇ ಈ ಕನ್ನಡಕ ವಿತರಣೆ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಳ್ಳುವಂತೆ ಆರೋಗ್ಯ ಸಚಿವರು ತಿಳಿಸಿದರು.
ಗುತ್ತಿಗೆ ಪದ್ದತಿ ಆಧಾರದಲ್ಲಿ ತಜ್ಞ ವೈದ್ಯರನ್ನು ನೇಮಿಸಲು ಈಗಾಗಲೇ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕ್ರಮವಹಿಸಬೇಕು. ಆಸ್ಪತ್ರೆಗಳಲ್ಲಿ ಹೊರಗೆ ಔಷದಿ ತರಲು ಚೀಟಿ ಬರೆಯಬಾರದು. ಆಸ್ಪತ್ರೆಗಳಲ್ಲಿಯೇ ಎಲ್ಲಾ ಔಷಧಗಳು ನೀಡಬೇಕು. ಈ ನಿಟ್ಟಿನಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳಿಗೆ ಇಲಾಖೆ ಮುಂದಾಗಿದೆ ಎಂದರು.

ಹೊಸ 42 ತಾಲ್ಲೂಕುಗಳಲ್ಲಿ ಡಯಾಲಿಸಿಸ್ ಘಟಕ ತೆರೆಯಲು ಆದೇಶಿಸಲಾಗಿದೆ. ಅದರಲ್ಲಿ ಹನೂರು ತಾಲ್ಲೂಕಿನ ರಾಮಾಪುರವು ಸೇರಿದೆ. ತಾಲೂಕು ಆಸ್ಪತ್ರೆಗಳ ಅಭಿವೃದ್ದಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.

ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಿ ಮಾತನಾಡಿದ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಪಟ್ಟಣದಲ್ಲಿ ಆಯೋಜಿಸಿರುವ ಬೃಹತ್ ಆರೋಗ್ಯ ಮೇಳವು ಮಹತ್ವದ ಕಾರ್ಯಕ್ರಮವಾಗಿದ್ದು ಅವಶ್ಯಕವಿರುವ ಕಡೆಗಳಲ್ಲಿ ಇಂತಹ ಮೇಳಗಳನ್ನು ಹಮ್ಮಿಕೊಳ್ಳುವುದು ಒಳ್ಳೆಯದು ಎಂದರು.

ಜನರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲಿ ಎಂಬ ಉದ್ದೇಶದಿಂದ ಎಲ್ಲ ವಿಭಾಗಗಳ ತಜ್ಞ ವೈದ್ಯರನ್ನು ಕರೆತರಲಾಗಿದೆ. ಬಡವರು, ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗದವರು ಹೆಚ್ಚಾಗಿರುವ ಜಿಲ್ಲೆಯಲ್ಲಿ ಇಂತಹ ಮೇಳವನ್ನು ನಡೆಸಿದ್ದು ಸೂಕ್ತವಾಗಿದೆ ಎಂದು ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಮಾತನಾಡಿ ಯಳಂದೂರು ಪಟ್ಟಣದಲ್ಲಿ 100 ಹಾಸಿಗೆಗಳ ಆಸ್ಪತ್ರೆ ಮಂಜೂರಾಗಿದೆ. ಆದರೆ, ಕಾರ್ಯರೂಪಕ್ಕೆ ಬಂದಿಲ್ಲ. ಹನೂರು ಪಟ್ಟಣದಲ್ಲೂ ತಾಲ್ಲೂಕು ಆಸ್ಪತ್ರೆಯಾಗಬೇಕು. ರಾಮಾಪುರದಲ್ಲಿ ಡಯಾಲಿಸಿಸ್ ಘಟಕ ತೆರೆಯಬೇಕು. ತಾಂತ್ರಿಕ ದೋಷದಿಂದ ಹನೂರಿನಲ್ಲಿ ಡಯಾಲಿಸಿಸ್ ಘಟಕಗಳು ಕೆಲಸ ಮಾಡುತ್ತಿಲ್ಲ. ಕೊಳ್ಳೇಗಾಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೆಡಿಯಾಲಾಜಿಸ್ಟ್ ಇಲ್ಲದೆ ತೊಂದರೆಯಾಗಿದೆ. ಕೊಳ್ಳೇಗಾಲದಲ್ಲಿ ಒಂದು ರಕ್ತ ನಿಧಿ ಕೇಂದ್ರ ತೆರೆಯಬೇಕು ಎಂದು ಕೃಷ್ಣಮೂರ್ತಿ ಅವರು ಸಚಿವರಲ್ಲಿ ಮನವಿ ಮಾಡಿದರು.

ಶಾಸಕರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು, ರೆಡಿಯಾಲಾಜಿಸ್ಟ್ ನೇಮಿಸಲು ಮತ್ತು ರಕ್ತ ನಿಧಿ ಕೇಂದ್ರ ತೆರೆಯಲು ಕ್ರಮ ವಹಿಸಲಾಗುವುದು. ರಾಜ್ಯದ 8 ಹಳೆಯ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಆರೋಗ್ಯ ಕಾರ್ಡ್, ದಂತ ಪಂಕ್ತಿ ವಿತರಣೆ ಮಾಡಲಾಯಿತು.

ಶಾಸಕರಾದ ಎಂ.ಆರ್. ಮಂಜುನಾಥ್, ಎಚ್.ಎಂ. ಗಣೇಶಪ್ರಸಾದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾದ ಡಿ. ರಣದೀಪ್, ಎನ್‍ಆರ್‍ಎಚ್‍ಎಂ ನಿರ್ದೇಶಕರಾದ ಡಾ. ನವೀನ್ ಭಟ್, ಆರೋಗ್ಯ ಇಲಾಖೆಯ ನಿರ್ದೇಶಕರಾದ ಡಾ. ಬಿ.ಎಸ್. ಪುಷ್ಪಲತಾ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್‍ಪ್ರಕಾಶ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *