ಚಾಮರಾಜನಗರ: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ ಮಾಡಲು ಹಾಗೂ ಆರೋಗ್ಯ ಸೇವೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ ಮತ್ತು ಪೋಸ್ಟರ್ಗಳನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ಬಿಡುಗಡೆ ಮಾಡಿದರು.
ಜಿಲ್ಲಾಡಳಿತ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ, ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಇವರ ಸಹಭಾಗಿತ್ವದಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ತಮ್ಮ ಸಮೀಪದಲ್ಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಪೋಸ್ಟರ್ ಹಾಗೂ ಆರೋಗ್ಯ ಕೇಂದ್ರಗಳ ನಾಮಫಲಕವನ್ನು ಬಿಡುಗಡೆ ಮಾಡಲಾಯಿತು.
ಪ್ರಾರಂಭಿಕ ಹಂತದಲ್ಲಿ ಸುಮಾರು 50 ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ನಾಮಫಲಕ ಹಾಗೂ ಪೋಸ್ಟರ್ ಗಳನ್ನು ಅಳವಡಿಸಲಾಗುವುದು. ನಂತರ ಇನ್ನುಳಿದ ಕೇಂದ್ರಗಳಿಗೆ ಅಳವಡಿಕೆ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತದೆ. ಆರೋಗ್ಯ ಸೇವೆಗಳನ್ನ ಜನರಿಗೆ ಇನ್ನಷ್ಟು ಹತ್ತಿರವಾಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಮಹತ್ವದ್ದಾಗಿದೆ.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜೇಶ್ ಕುಮಾರ್, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ರವಿಕುಮಾರ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಸುಂದರೇಶ್, ಐಪಿಹೆಚ್ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ಕೌಶಿಕ್, ಸಮುದಾಯ ಆರೋಗ್ಯ ಅಧಿಕಾರಿ ರಾಧಿಕ, ಇತರರು ಈ ಸಂದರ್ಭದಲ್ಲಿ ಇದ್ದರು.
Related