ಸಚಿವ ಸಂಪುಟ, ಫಲಾನುಭವಿಗಳ ಸಮಾವೇಶ ಹಿನ್ನೆಲೆ : ಅಗತ್ಯ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸೂಚನೆ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಹಾಗೂ ಚಾಮರಾಜನಗರ ಪಟ್ಟಣದಲ್ಲಿ ನಿಗದಿಯಾಗಿರುವ ಫಲಾನುಭವಿಗಳ ಸಮಾವೇಶ ಹಿನ್ನೆಲೆಯಲ್ಲಿ ಅಗತ್ಯ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಇಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಪೂರ್ಣವಾಗಿರುವ ಅಭಿವೃದ್ಧಿ ಕಾಮಗಾರಿ, ಕಟ್ಟಡ ವಿವರ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು ಫಲಾನುಭವಿಗಳ ಸಮಾವೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಅವಶ್ಯವಿರುವ ಎಲ್ಲಾ ಸಿದ್ದತೆಗಳನ್ನು ತ್ವರಿತವಾಗಿ ಮಾಡಿಕೊಳ್ಳುವಂತೆ ತಿಳಿಸಿದರು.

ಇಲಾಖೆಗಳು, ನಿಗಮ, ಮಂಡಳಿಗಳು, ನಗರ ಸ್ಥಳೀಯ ಸಂಸ್ಥೆಗಳು ಫಲಾನುಭವಿಗಳಿಗೆ ನೀಡುವ ವಿವಿಧ ಸವಲತ್ತುಗಳನ್ನು ಸಮಾವೇಶದಲ್ಲಿ ವಿತರಿಸಲು ಪೂರಕವಾಗಿರುವ ಎಲ್ಲಾ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕು. ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿಗಳು ಬಾಕಿ ಇರುವ ಎಲ್ಲಾ ಸಿದ್ದತಾ ಕಾರ್ಯಗಳನ್ನು ಅಚ್ಚುಕಟ್ಟಾಗಿ ಪೂರ್ಣಗೊಳಿಸಬೇಕು ಎಂದರು.

ಇಲಾಖೆಗಳು ವಿತರಿಸಲಿರುವ ಸವಲತ್ತುಗಳು, ಪರಿಕರಗಳು, ಇತರೆ ಯಾವುದೇ ಸಲಕರಣೆಗಳನ್ನು ಮುಂಚಿತವಾಗಿಯೇ ದಾಸ್ತಾನು ಮಾಡಿ ವ್ಯವಸ್ಥಿತವಾಗಿ ಕಾರ್ಯುಕ್ರಮದಲ್ಲಿ ವಿತರಣೆ ಮಾಡಬೇಕಿದೆ. ಫಲಾನುಭವಿಗಳಿಗೆ ಮಾಹಿತಿ ನೀಡಿ ಸಮಾವೇಶಕ್ಕೆ ಕರೆತಂದು ವಿತರಿಸುವ ಕಾರ್ಯವನ್ನು ಅತ್ಯಂತ ಹೊಣೆಗಾರಿಕೆಯಿಂದ ನಿರ್ವಹಿಸಬೇಕೆಂದು ಸಚಿವರು ತಿಳಿಸಿದರು.

ಫಲಾನುಭವಿಗಳ ಸಮಾವೇಶದಲ್ಲಿ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಮೂಲಕ ಇಲಾಖೆಗಳು ಜನರಿಗೆ ನೆರವಾಗಬೇಕಿದೆ. ಇದಕ್ಕಾಗಿ ಪ್ರತಿ ಇಲಾಖೆಗಳು ವಿವರವಾದ ಪಟ್ಟಿ ಮಾಡಬೇಕು. ಸಾಕಷ್ಟು ಸಿದ್ದತೆಯೊಂದಿಗೆ ಫಲಾನುಭವಿಗಳ ಸಮಾವೇಶ ಆಯೋಜಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಲೋಕಸಭಾ ಸದಸ್ಯರಾದ ಸುನೀಲ್ ಬೋಸ್, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ನಗರಸಭೆ ಅಧ್ಯಕ್ಷರಾದ ಎಸ್. ಸುರೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮದ್ ಅಸ್ಗರ್, ನಗರಸಭೆ ಉಪಾಧ್ಯಕ್ಷರಾದ ಮಮತ, ಜಿಲ್ಲಾಧಿಕಾರಿ ಶಿಲ್ಪಾ ನಾಗ್. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಬಿ.ಆರ್. ಮಹೇಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *