ಚಾಮರಾಜನಗರ: ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಬೈಕ್ ರ್ಯಾಲಿ ಗಮನ ಸೆಳೆಯಿತು.
ನಗರದ ಜಿಲ್ಲಾಡಳಿತ ಭವನದ ಆವರಣದಿಂದ ಹೊರಟ ಬೈಕ್ ರ್ಯಾಲಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದಿಂದ ಆರಂಭಗೊಂಡ ಬೈಕ್ ರ್ಯಾಲಿಯು ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ರಾಮಸಮುದ್ರಕ್ಕೆ ತೆರಳಿ ಅಲ್ಲಿಂದ ನ್ಯಾಯಾಲಯ ರಸ್ತೆ, ಡಾ. ಬಿ.ಆರ್. ಅಂಬೇಡ್ಕರ್ ಭವನ, ಸತ್ತಿ ರಸ್ತೆ, ಜಿಟಿಸಿ ರೆಸಿಡೆನ್ಸಿ, ಸೋಮವಾರ ಪೇಟೆ, ಗುಂಡ್ಲುಪೇಟೆ ವೃತ್ತ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಭುವನೇಶ್ವರಿ ವೃತ್ತ (ಪಚ್ಚಪ್ಪ ವೃತ್ತ) ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನದಲ್ಲಿ ಮುಕ್ತಾಯವಾಯಿತು.
ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಕೈಗೊಳ್ಳಲು ಅಧಿಸೂಚನೆ ಹೊರಡಿಸಿ ವೇಳಾಪಟ್ಟಿ ಪ್ರಕಟಿಸಿದೆ. ಈ ಸಂಬಂಧ ಸ್ವೀಪ್ ಜಾಗೃತಿ ಅಭಿಯಾನ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದು, ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮಪಂಚಾಯತಿ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್ಐಆರ್ ಪ್ರಕ್ರಿಯೆಯು ಎಲ್ಲಾ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸರ್ಪಡೆಗೊಳಿಸುವುದಾಗಿದೆ. ಈ ವಿಶೇಷ ಸಮಗ್ರ ಪರಿಷ್ಕರಣೆಯ ಅವಧಿಯಲ್ಲಿ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವ ಮೂಲಕ ಬಿಎಲ್ಒ ಗಳಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಜಿ.ಪಂ. ಸಿಇಒ ಮೋನಾ ರೋತ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರೂಪ, ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.