150ನೇ ದಿನಕ್ಕೆ ಕಾಲಿಟ್ಟ ಕಾವೇರಿ ಹೋರಾಟ

ಕರ್ಪೂರ ಹಚ್ಚಿ, ಬೂದುಗುಂಬಳ ಒಡೆದು ಕರ್ನಾಟಕ ಸೇನಾ ಪಡೆ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ
ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು 150ನೇ ದಿನವಾದ ಇಂದು ವಿನೂತನವಾಗಿ ಪ್ರತಿಭಟನೆ ನಡೆಸಿದರು.

149ದಿನಗಳಿಂದಲೂ ನಿರಂತರವಾಗಿ ಪ್ರತಿಭಟಿಸುತ್ತಿರುವ ಕಾರ್ಯಕರ್ತರು, ಇಂದು ಕೂಡಾ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ನಗರದ ಭುವನೇಶ್ವರಿ ವೃತ್ತದಲ್ಲಿ ಹೆದ್ದಾರಿ ಸಂಚಾರವನ್ನು ತಡೆದು, ಕರ್ಪೂರ ಹಚ್ಚಿ, ಬೂದುಗುಂಬಳ ಹೊಡೆಯುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.

ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಜನತೆ ಹಾಗೂ ರೈತರ ಪರವಾಗಿರಬೇಕು. ಆದರೆ ಜನರ ಹಿತಾಸಕ್ತಿಯನ್ನು ಮರೆತು ತಮಿಳುನಾಡಿಗೆ ನೀರನ್ನು ಹರಿಸುತ್ತಿರುವುದು ಖಂಡನೀಯ ಎಂದರು.

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಜಲಾಶಯಗಳು ಬತ್ತುತ್ತಿವೆ. ಮುಂದಿನ ದಿನಗಳಲ್ಲಿ ಕುಡಿಯಲು ನೀರಿಲ್ಲದಂತಹ ಪರಿಸ್ಥಿತಿಗೆ ಸಿಲುಕಬೇಕಾಗುತ್ತದೆ. ತಮಿಳುನಾಡಿಗೆ ನೀರನ್ನು ಬಿಡುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ತಮಿಳುನಾಡಿಗೆ ನೀರನ್ನು ಬಿಡುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಕೇಂದ್ರ ಸರ್ಕಾರ ಒಕ್ಕೂಟದ ವ್ಯವಸ್ಥೆಯ ಮೇಲೆ ಗೌರವ ಇದ್ದರೆ, ಎರಡು ರಾಜ್ಯಗಳನ್ನು ಕರೆದು ಮಾತನಾಡುವ ಮೂಲಕ ಮಧ್ಯ ಪ್ರವೇಶ ಮಾಡಿ ರಾಜ್ಯದ ಜನತೆಗೆ ನ್ಯಾಯ ಒದಗಿಸುವಂತಹ ಕೆಲಸವನ್ನು ಮಾಡಬೇಕು. ಎಂದು ಒತ್ತಾಯಿಸಿದರು.

ಎಲ್ಲಿಯವರೆಗೆ ನೀವು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವುದಿಲ್ಲವೋ ಅಲ್ಲಿಯವರೆಗೂ ಉಗ್ರವಾದ ಹೋರಾಟವನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಗು.ಪುರುಷೋತ್ತಮ್, ಚಾ.ವೆಂ.ರಾಜ್‍ಗೋಪಾಲ್, ಗಡಿನಾಡು ಕನ್ನಡ ರಕ್ಷಣ ಹೋರಾಟ ವೇದಿಕೆ ಅಧ್ಯಕ್ಷ ಚಾ.ರಂ.ಕುಮಾರ್, ಪಣ್ಯದಹುಂಡಿ ರಾಜು, ನಿಜಧ್ವನಿ ಗೋವಿಂದರಾಜು, ಚಾ.ಹಾ.ರಾಮು, ತಾಂಡವಮೂರ್ತಿ, ವೀರಭದ್ರ, ಸೋಮವಾರಪೇಟೆ ಮಂಜು, ರಾಚಪ್ಪ, ಲಿಂಗರಾಜು, ಸಾಗರ್‍ರಾವತ್, ಮಾದಲವಾಡಿ ಪಟೇಲ್, ಆಟೋ ನಾಗೇಶ್, ಫಯಾಜ್, ಚಿಕ್ಕಮೋಳೆ ಸಿದ್ದಶೆಟ್ಟಿ ಮತ್ತಿತರರಿದ್ದರು.

Leave a Reply

Your email address will not be published. Required fields are marked *