ಚಾಮರಾಜನಗರ: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಭಾಗವಾಗಿ ಜಿಲ್ಲೆಯಲ್ಲೂ ಅಕ್ಟೋಬರ್ 7 ರಿಂದ 9ರವರೆಗೆ ಚಾಮರಾಜನಗರ ದಸರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ದತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಚಾಮರಾಜನಗರ ದಸರಾ ಮಹೋತ್ಸವ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ದೀಪಾಲಂಕಾರವನ್ನು ಹೆಚ್ಚು ಜನರನ್ನು ಸೆಳೆಯುವ ರೀತಿಯಲ್ಲಿ ಕೈಗೊಳ್ಳಬೇಕು. ಪ್ರಮುಖ ವೃತ್ತಗಳಲ್ಲಿ ವಿಶೇಷವಾಗಿ ದೀಪಾಲಂಕಾರ ವ್ಯವಸ್ಥೆಯಾಗಬೇಕಿದ್ದು, ಇದಕ್ಕಾಗಿ ಹೆಚ್ಚಿನ ಅನುದಾನ ನಿಗದಿಮಾಡಿಕೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ವಿಶೇಷ ಗಮನ ನೀಡುವಂತೆ ಸಚಿವರು ತಿಳಿಸಿದರು.
ಎಂಎಸ್ಐಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ವಿದ್ಯುತ್ ದೀಪಾಲಂಕಾರ ಎಲ್ಲಾ ಕಡೆಯಲ್ಲೂ ಇರಬೇಕು. ದೀಪಾಲಂಕಾರ ಹೆಚ್ಚು ಜನರ ಗಮನ ಸೆಳೆಯಲಿದೆ. ದಸರಾ ಹಬ್ಬದಲ್ಲಿ ವ್ಯಾಪಕವಾಗಿ ಎಲ್ಲಾ ಭಾಗಗಳಲ್ಲಿಯೂ ದೀಪಾಲಂಕಾರ ಇರುವಂತೆ ನೋಡಿಕೊಳ್ಳಬೇಕು ಎಂದರು.
ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಮಾತನಾಡಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಸಾಧನೆ ಬಗ್ಗೆ ದಸರಾ ಕಾರ್ಯಕ್ರಮಗಳಲ್ಲಿ ತಿಳಿಸಬೇಕು. ಸರ್ಕಾರದ ಕಾರ್ಯಕ್ರಮಗಳು ಹೆಚ್ಚು ಜನರಿಗೆ ತಲುಪುತ್ತಿರುವ ಬಗ್ಗೆ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಪ್ರಸ್ತುತ ಪಡಿಸಬೇಕು. ಇದಕ್ಕಾಗಿ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.
ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ ಅವರು ಮಾತನಾಡಿ ಚಾಮರಾಜನಗರ ಜಿಲ್ಲಾ ಕೇಂದ್ರದ ಸಂಪರ್ಕಿಸುವ ಪ್ರಮುಖ ದ್ವಾರಗಳಲ್ಲಿ ವಿಶೇಷವಾಗಿ ದೀಪಾಲಂಕಾರ ಮಾಡಬೇಕು. ಈ ಮೂಲಕ ಎಲ್ಲೆಡೆ ಹಬ್ಬದ ವಾತಾವರಣ ಇರಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಮಾತನಾಡಿ ಮೂರು ದಿನಗಳ ದಸರಾದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ಮೂಡಿಬರಬೇಕು. ಸಾಂಸ್ಕøತಿಕ ಕಾರ್ಯಕ್ರಮಗಳು, ಫಲಪುಷ್ಪ ಪ್ರದರ್ಶನ, ಮಹಿಳಾ ದಸರಾ, ರೈತ ದಸರಾ, ಯುವ ಸಂಭ್ರಮ, ಗ್ರಾಮೀಣ ಕ್ರೀಡಾಕೂಟ, ಮ್ಯಾರಾಥಾನ್, ಪಾರಂಪರಿಕ ನಡಿಗೆ ಹೀಗೆ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಆಯೋಜಿತವಾಗಬೇಕು. ಇದಕ್ಕಾಗಿ ನಿಯೋಜಿತರಾಗಿರುವ ವಿವಿಧ ಸಮಿತಿಗಳಲ್ಲಿರುವ ಅಧಿಕಾರಿಗಳು ಪರಿಪೂರ್ಣ ಸಿದ್ದತೆ ಮಾಡಬೇಕೆಂದು ನಿರ್ದೇಶನ ನೀಡಿದರು.
ಕಲಾ ತಂಡಗಳ ಮೆರವಣಿಗೆಯನ್ನು ಹೆಚ್ಚು ಆಕರ್ಷಕಗೊಳಿಸಿ. ಆನೆ ಕರೆಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ವಿಸೃತವಾಗಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಿ. ಈಗಾಗಲೇ ಪ್ರಸ್ತಾಪವಾಗಿರುವ ಜನನ ಮಂಟಪದಲ್ಲಿ ಸಾಂಪ್ರದಾಯಿಕ ದರ್ಬಾರ್ ಆಚರಣೆಗೂ ಅಗತ್ಯ ಸಲಹೆ ಅಭಿಪ್ರಾಯಗಳನ್ನು ಪಡೆದು ಸೂಕ್ತ ತೀರ್ಮಾನ ಕೈಗೊಳ್ಳಿ. ಜನರ ಅಭಿಲಾಷೆಯಂತೆ ದಸರಾ ಅತ್ಯಂತ ವ್ಯವಸ್ಥಿತವಾಗಿ ಆಯೋಜನೆ ಮಾಡಿ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ವೇದಿಕೆ ನಿರ್ಮಾಣವೂ ಆಕರ್ಷಕವಾಗಿರಲಿ. ಸ್ವಚ್ಚತೆ, ಕುಡಿಯುವ ನೀರು, ಇನ್ನಿತರ ವ್ಯವಸ್ಥೆಗಳು ಸಮರ್ಪಕವಾಗಿ ಇರಲಿ. ಕಾರ್ಯಕ್ರಮ ನೀಡುವ ಕಲಾವಿದರಿಗೆ ಅಗತ್ಯವಾದ ಎಲ್ಲಾ ಸೌಕರ್ಯಗಳನ್ನು ಒದಗಿಸಿ. ಈ ಬಾರಿ ದಸರಾವನ್ನು ಯಶಸ್ವಿ ಹಾಗೂ ಜನಾಕರ್ಷಕಗೊಳಿಸಲು ಸಿದ್ದತೆಗಳನ್ನು ಬೇಗನೆ ಪೂರ್ಣಗೊಳಿಸಿ. ಎಲ್ಲಿಯೂ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆ ನೀಡಲಾಗಿದೆ. ಯುವ ಸಂಭ್ರಮ, ದಸರಾ ಕ್ರಿಕೆಟ್ ಕಪ್, ಗ್ರಾಮೀಣ ಕ್ರೀಡಾಕೂಟದಂತಹ ವಿಶೇಷ ಕಾರ್ಯಕ್ರಮಗಳನ್ನು ಈ ಬಾರಿ ನಡೆಸಲಾಗುತ್ತಿದೆ. ವೈವಿಧ್ಯಮಯ ಕಾರ್ಯಕ್ರಮನಗಳನ್ನು ಪ್ರಸುತ್ತ ಪಡಿಸಲು ರೂಪುರೇಷೆ ತಯಾರಿಸಿದ್ದು ಸಮಿತಿಗಳು ಕಾರ್ಯೋನ್ಮುಖವಾಗಿವೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ಮಾತನಾಡಿ ದಸರಾ ಹಿನ್ನೆಲೆಯಲ್ಲಿ ವಾಹನಗಳು ಮತ್ತು ಜನರÀ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಮೆರವಣಿಗೆ ಸಾಗುವ ಮಾರ್ಗಗಳು, ದೀಪಾಲಂಕಾರಗಳ ಮಾರ್ಗಗಳಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದರು.
ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್, ಸಿ.ಎನ್. ಮಂಜೇಗೌಡ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಎಸ್. ಜಯಣ್ಣ, ನಗರಸಭೆ ಅಧ್ಯಕ್ಷರಾದ ಎಸ್. ಸುರೇಶ್, ಉಪಾಧ್ಯಕ್ಷರಾದ ಮಮತಾ ಬಾಲಸುಬ್ರಹ್ಮಣ್ಯಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಬಿ.ಆರ್.ಟಿ ಅರಣ್ಯ ಸಂರಕ್ಷಿತ ಪ್ರದೇಶದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರತಾತ್ ಅಕ್ಷಯ್ ಅಶೋಕ್, ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.