ಚಾಮರಾಜನಗರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೆಂಗಳೂರಿನ ಬೃಹತ್ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಿಲ್ಲೆಯಿಂದ ಬೈಕ್ ರ್ಯಾಲಿ ಮೂಲಕ ತೆರಳಿದ್ದ 10 ಮಂದಿಯ ತಂಡಕ್ಕೆ ಜಿಲ್ಲಾಡಳಿತದ ವತಿಯಿಂದ ಸ್ಮರಣಿಕೆ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಬೈಕ್ ರ್ಯಾಲಿ ತಂಡದ ಸದಸ್ಯರಿಗೆ ಶಾಲು, ಹೂ ಹಾರ, ತುರಾಯಿ ಹಾಕಿ ಸಾಂಕೇತಿಕವಾಗಿ ಸನ್ಮಾನಿಸಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್. ಬಿಂದ್ಯಾ, ಸಿ.ಪಿ.ಒ ದೀಪಾ, ಗುಂಡ್ಲುಪೇಟೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಮೋಹನ್, ರೋಟರಿ ಸಿಲ್ಕ್ ಸಿಟಿಯ ದೊಡ್ಡರಾಯಪೇಟೆ ಗಿರೀಶ್, ಇತರರು ಇದೇ ವೇಳೆ ಇದ್ದರು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ‘ನನ್ನ ಮತ-ನನ್ನ ಹಕ್ಕು’ ಎಂಬ ಮಹತ್ವದ ಸಂದೇಶ ಸಾರುವ ಉದ್ದೇಶದೊಂದಿಗೆ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ಕ್ರ್ ಅಕ್ಷಯ್ ಅಶೋಕ್ ನೇತೃತ್ವದ ಬೈಕ್ ರ್ಯಾಲಿ ತಂಡ ಬೆಂಗಳೂರಿಗೆ ತೆರಳಿ ಅಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿತ್ತು. ಪೊಲೀಸ್ ಇಲಾಖೆ ಹಾಗೂ ರೋಟರಿ ಸಿಲ್ಕ್ ಸಿಟಿ ಪದಾಧಿಕಾರಿಗಳು ಬೈಕ್ ರ್ಯಾಲಿಯಲ್ಲಿ ತೆರಳಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ