ಚಾಮರಾಜನಗರ: ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಾದ ವಿ. ಅನ್ಬುಕುಮಾರ್ ಅವರು ಜಿಲ್ಲೆಗೆ ಇಂದು ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಗಳ ಪ್ರಗತಿ ಪರಿಶೀಲಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಮುಖ್ಯ ಚುನಾವಣಾಧಿಕಾರಿಗಳು ಎಸ್.ಐ.ಆರ್ ಎನ್ಯುಮರೇಷನ್ ಫಾರಂಗಳನ್ನು (ಗಣತಿ ನಮೂನೆ) ವಿತರಿಸುವಲ್ಲಿ ಚಾಮರಾಜನಗರ ಜಿಲ್ಲೆಯು ಮುಂಚೂಣಿಯಲ್ಲಿದ್ದು, ಸ್ವೀಕರಿಸಲಾದ ಫಾರಂಗಳನ್ನು ಡಿಜಿಟಲೀಕರಣಗೊಳಿಸುವಲ್ಲಿ ಶೇ. 68.4ರಷ್ಟು ಸಾಧನೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕತೆಯಿಂದ ನಿರ್ವಹಿಸಬೇಕು. ಮತದಾರರ ನೋಂದಣಾಧಿಕಾರಿಗಳು ಅತ್ಯಂತ ಹೊಣೆಗಾರಿಕೆಯಿಂದ ತಮ್ಮ ಜವಾಬ್ದಾರಿಯನ್ನು ಪೂರೈಸಬೇಕು. ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಪ್ರಕ್ರಿಯೆಯನ್ನು ಪರಿಶೀಲಿಸಬೇಕು. ಎಸ್.ಐ.ಆರ್ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿಗಳು ಸೂಚನೆ ನೀಡಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಪ್ರತಿನಿತ್ಯದ ಪ್ರಗತಿಯನ್ನು ನೋಂದಾಯಿತ ಎಲ್ಲಾ ರಾಜಕೀಯ ಪಕ್ಷಗಳ ಪದಾಧಿಕಾರಿಗಳಿಗೆ ಕಡ್ಡಾಯವಾಗಿ ಲಿಖಿತ ರೂಪದಲ್ಲಿ ತಿಳಿಸಬೇಕು. ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ ಮಾಹಿತಿ ನೀಡಿದರಷ್ಟೇ ಸಾಲದು. ಅಧಿಕೃತವಾಗಿ ಲಿಖಿತ ರೂಪದಲ್ಲಿಯೇ ಪ್ರಗತಿಯ ವಿವರವನ್ನು ದಿನಿನಿತ್ಯ ತಪ್ಪದೇ ಸಲ್ಲಿಸಿ ದಾಖಲೆ ಇಟ್ಟುಕೊಳ್ಳಬೇಕು. ಅಲ್ಲದೇ ಎಸ್.ಐ.ಆರ್ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯುವವರೆಗೂ ಪ್ರತಿವಾರ ರಾಜಕೀಯ ಪಕ್ಷಗಳ ಸಭೆ ಕರೆದು ಮಾಹಿತಿ ನೀಡಬೇಕು ಎಂದರು.
ದೋಷರಹಿತ ಹಾಗೂ ಗುಣಮಟ್ಟದ ಮತದಾರರ ಪಟ್ಟಿಯನ್ನು ಸಿದ್ದಪಡಿಸುವ ನಿಟ್ಟಿನಲ್ಲಿ ವಿವರಗಳನ್ನು ಅತ್ಯಂತ ಎಚ್ಚರಿಕೆಯಿಂದ ಪರಿಶೀಲಿಸಬೇಕು. ಯಾವ ಮತಗಟ್ಟೆಗಳಲ್ಲಿ ಕಡಿಮೆ ಪ್ರಗತಿ ಆಗಿದೆಯೋ ಅಂತಹ ಪ್ರದೇಶಗಳ ಕಡೆ ಹೆಚ್ಚಿನ ಗಮನಹರಿಸಿ ಸೂಕ್ತ ಮಾರ್ಗದರ್ಶನ ನೀಡಿ ಪ್ರಗತಿ ವೇಗವಾಗಿ ಆಗುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿಗಳು ತಿಳಿಸಿದರು.
ಈಗಾಗಲೇ ವಿತರಿಸಲಾಗಿರುವ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಗಳನ್ನು ಭರ್ತಿ ಮಾಡಿ ವಾಪಸ್ಸು ಪಡೆಯಲು ಜಾಗೃತಿ ಮೂಡಿಸಬೇಕು. ಫಾರಂಗಳನ್ನು ಸ್ವೀಕರಿಸುವ ಹಂತದಲ್ಲಿ ಯಾವುದೇ ಸಮಸ್ಯೆಗಳು ಕಂಡು ಬಂದಲ್ಲಿ ಮತದಾರರಿಗೆ ಮಾರ್ಗದರ್ಶನ, ನೆರವು ನೀಡಬೇಕು. ಮತದಾರರ ಭಾವಚಿತ್ರ, ಸಹಿ ಹಾಗೂ ಇತರೆ ದಾಖಲೆಗಳನ್ನು ಸ್ಕ್ಯಾನ್ ಮಾಡುವಾಗ ಅಥವಾ ಸೆರೆ ಹಿಡಿಯುವಾಗ ಸ್ಪಷ್ಟತೆ ಇರಬೇಕು. ಗುಣಮಟ್ಟದ ದಾಖಲೀಕರಣವಾಗಬೇಕು ಎಂದರು.
ಜಿಲ್ಲೆಯಲ್ಲಿ ನಡೆದಿರುವ ಎಸ್.ಐ.ಆರ್ ಕಾರ್ಯ ಪ್ರಕ್ರಿಯೆಯನ್ನು ನಿರ್ವಹಿಸುತ್ತಿರುವ ಬಗ್ಗೆ ಶ್ಲಾಘಿಸಿದ ಮುಖ್ಯ ಚುನಾವಣಾಧಿಕಾರಿಗಳಾದ ವಿ. ಅನ್ಬುಕುಮಾರ್ ಅವರು ಇದೇ ರೀತಿ ವೇಗ ಹಾಗೂ ಗುಣಮಟ್ಟದಿಂದ ಕಾರ್ಯನಿರ್ವಹಿಸಿ ಪ್ರಗತಿ ಸಾಧಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಶ್ರೀರೂಪ ಅವರು ವಿವರ ನೀಡಿ ಜಿಲ್ಲೆಯಲ್ಲಿ ಗಣತಿ ನಮೂನೆಗಳ ವಿತರಣೆಯಾಗಿದ್ದು, ಸ್ವೀಕರಿಸಲಾದ ನಮೂನೆಗಳ ಡಿಜಿಟಲೀಕರಣವನ್ನು ಸಮರ್ಪಕವಾಗಿ ಪ್ರತಿನಿತ್ಯ ಮಾಡಲಾಗುತ್ತಿದೆ. ಪರಿಷ್ಕರಣೆ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳಿಗೆ ಸಭೆ ನಡೆಸಿ ಸೂಕ್ತ ಮಾರ್ಗದರ್ಶನ ಮಾಡಲಾಗುತ್ತಿದೆ. ಪರಿಷ್ಕರಣೆ ಕಾರ್ಯವನ್ನು ಖುದ್ದು ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ ಎಂದರು.
ಸಹಾಯಕ ಮುಖ್ಯ ಚುನಾವಣಾಧಿಕಾರಿಗಳಾದ ಎ.ಹೆಚ್. ಮಹೇಂದ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಾಧಿಕಾರಿ ಹಗೂ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಹನೂರು ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಎನ್. ಮುನಿರಾಜು, ಚಾಮರಾಜನಗರ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಾಧಿಕಾರಿ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಡಾ. ಆರ್. ವಸುಂಧರ ಹೆಗಡೆ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್. ವಿಶ್ವನಾಥ್, ಸಹಾಯಕ ನೋಂದಣಾಧಿಕಾರಿಗಳು ಹಾಗೂ ತಹಶೀಲ್ದಾರರಾದ ಐ.ಇ. ಬಸವರಾಜು, ಕೆ.ಎನ್. ಚೈತ್ರ, ಎಸ್.ಎಲ್. ನಯನ, ಬಿ. ಗಿರಿಜಾ, ಎಂ.ಎಸ್. ತನ್ವಯ್, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ಬಳಿಕ ಮುಖ್ಯ ಚುನಾವಣಾಧಿಕಾರಿಗಳಾದ ವಿ. ಅನ್ಬುಕುಮಾರ್ ಅವರು ಜಿಲ್ಲಾಡಳಿತ ಭವನದ ಆವರಣದಲ್ಲಿ ರಂಗೋಲಿ ಪ್ರದರ್ಶನದ ಮೂಲಕ ಎಸ್.ಐ.ಆರ್ ಕುರಿತು ಆಯೋಜಿಸಿದ್ದ ಸ್ವೀಪ್ ಜಾಗೃತಿ ಕಾರ್ಯಕ್ರಮವನ್ನು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಮುಖ್ಯ ಚುನಾವಣಾಧಿಕಾರಿಗಳು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದ ಬಳಿಯಿರುವ ಕೆ.ಹೆಚ್.ಬಿ. ಕಾಲೋನಿಗೆ ಭೇಟಿ ನೀಡಿ ಎಸ್.ಐ.ಆರ್ ಕಾರ್ಯವನ್ನು ಪರಿಶೀಲಿಸಿದರು. ಮರಿಯಾಲ ಗ್ರಾಮಕ್ಕೂ ಭೇಟಿ ಕೊಟ್ಟು ಅಲ್ಲಿಯೂ ಪ್ರತಿಕ್ರಿಯೆಯನ್ನು ವೀಕ್ಷಿಸಿದರು.
ಜಿಲ್ಲಾಧಿಕಾರಿ ಶ್ರೀರೂಪ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಮತದಾರರ ನೊಂದಣಾಧಿಕಾರಿಗಳು, ಸಹಾಯಕ ಮತದಾರರ ನೊಂದಣಾಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.
Like this:
Like Loading...
Related