ಬಾಲ್ಯವಿವಾಹ ತಡೆಗೆ ಪರಿಣಾಮಕಾರಿ ಚಟುವಟಿಕೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಘೋಷಿಸುವ ಸಂಬಂಧ ಜನಸಾಮಾನ್ಯರಿಗೆ ಅರಿವು ಮೂಡಿಸುವ ಪರಿಣಾಮಕಾರಿ ಚಟುವಟಿಕೆಗಳನ್ನು ಪ್ರತಿ ಗ್ರಾಮಪಂಚಾಯಿತಿ, ಹೋಬಳಿ, ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಹಮ್ಮಿಕೊಳ್ಳಲು ಅವಶ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರ ಸಮ್ಮುಖದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಬಾಲ್ಯವಿವಾಹ ನಿಷೇದಾಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಕಾರಾಗೃಹದಲ್ಲಿ ಶೇ. 50ರಷ್ಟು ಫೋಕ್ಸೋ ಪ್ರಕರಣಗಳಲ್ಲಿ ಯುವಕರು ಜೈಲುವಾಸ ಅನುಭವಿಸುತ್ತಿದ್ದಾರೆ. ಇದು ದುರದೃಷ್ಟಕರ ಸಂಗತಿಯಾಗಿದೆ. ಬಾಲ್ಯವಿವಾಹ ನಡೆಯುವ ಮೊದಲೇ ಸೂಕ್ಷ್ಮ ನಿಗಾವಹಿಸಿ ಪ್ರಕರಣಗಳು ಜರುಗದಂತೆ ತಡೆಯುವುದೇ ಉತ್ತಮ ಕೆಲಸವಾಗಿದೆ. ಬಾಲ್ಯವಿವಾಹ ನಿರ್ಮೂಲನೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲ್ಯವಿವಾಹ ಕಂಡುಬಂದರೆ ತಕ್ಷಣವೇ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಬಾಲ್ಯವಿವಾಹ ನಿಷೇದಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮಾರ್ಚ್ 1ರಿಂದ ನವೆಂಬರ್ 14ರವರೆಗೆ ಜಿಲ್ಲೆಯ 130 ಗ್ರಾಮಪಂಚಾಯಿತಿ ಹಾಗೂ ತಾಲೂಕುಗಳನ್ನು ಬಾಲ್ಯ ವಿವಾಹದಿಂದ ಮುಕ್ತಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ನಿರಂತರ ಕಾರ್ಯಾಚರಣೆಗೆ ಮುಂದಾಗಬೇಕು. ಈ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಗ್ರಾಮಪಂಚಾಯಿತಿ ಹಾಗೂ ತಾಲೂಕುಮಟ್ಟದ ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸಿ ನವೆಂಬರ್ 14ರ ಮಕ್ಕಳ ದಿನಾಚರಣೆಯಂದು ಬಹುಮಾನ, ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಿದರು. 

ಬಾಲ್ಯವಿವಾಹ ಜರುಗಿದ ಸಂದರ್ಭದಲ್ಲಿ ತಡೆಯಾಜ್ಞೆ ತರುವ ಕೆಲಸ ಬಾಲ್ಯವಿವಾಹ ನಿಷೇದಾಧಿಕಾರಿಗಳಿಂದ ಆಗಬೇಕು. ಎಲ್ಲಾ ತಾಲೂಕುಗಳಲ್ಲಿ ತಹಶೀಲ್ದಾರ್ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಮನ್ವಯ ಸಾಧಿಸಿ ಬಾಲ್ಯವಿವಾಹ ದುಷ್ಪರಿಣಾಮಗಳ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಜಾಗೃತಿ ಮೂಡಿಸಬೇಕು. ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳ ಮೂಲಕ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಸಾಮಾನ್ಯ ಜನರಿಗೆ ಅರ್ಥವಾಗುವ ಆಡುಭಾಷೆಯಲ್ಲಿ ಅರಿವು ಮೂಡಿಸಬೇಕು. ಮನೆಮನೆ ಕಸ ಸಂಗ್ರಹಿಸುವ ಸ್ವಚ್ಚಭಾರತ್ ವಾಹನಗಳಲ್ಲಿ ಜಿಂಗಲ್ಸ್‍ಗಳನ್ನು ಪ್ಲೇ ಮಾಡಿಸುವ ಕಾರ್ಯ 1 ವಾರದೊಳಗೆ ಆಗಬೇಕು ಎಂದು ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಬಾಲ್ಯವಿವಾಹ ತಡೆಯಲು ಸಹಕರಿಸುವಂತೆ ಮೊಬೈಲ್‍ಗಳಲ್ಲಿ ಕಾಲರ್ ಟೋನ್ ಅಳವಡಿಸಬೇಕು. ಐ.ಇ.ಸಿ ಕಾರ್ಯಕ್ರಮದಡಿ ಜಿಲ್ಲಾವ್ಯಾಪ್ತಿಯ ಎಲ್ಲೆಡೆ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಘೋಷಣೆ ಕುರಿತ ಹೋರ್ಡಿಂಗ್ಸ್, ಪ್ಲೆಕ್ಸ್‍ಬೋರ್ಡ್ ಪ್ರದರ್ಶಿಸಬೇಕು. ಪೊಲೀಸ್ ಬ್ಯಾರಿಕೇಡ್‍ನಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಸ್ಟಿಕ್ಕರ್ ಅಳವಡಿಸಬೇಕು. ಪೊಲೀಸ್ ಇಲಾಖೆಯಿಂದ ಎಲ್ಲಾ ಶಾಲೆಗಳಲ್ಲಿ ಅಳವಡಿಸಿರುವ ಆಪ್ತಗೆಳತಿ ದೂರುಪೆಟ್ಟಿಗೆಯ ಸದುಪಯೋಗವಾಗಬೇಕು. ದೇವಸ್ಥಾನ, ಚರ್ಚ್, ಕಲ್ಯಾಣಮಂಟಪಗಳು ಹಾಗೂ ಮುದ್ರಣಾಲಯಗಳಿಗೆ ಮದುವೆಯಾಗುವ ಹುಡುಗ, ಹುಡುಗಿಯ ವಯಸ್ಸನ್ನು ಪರಿಶೀಲಿಸುವಂತೆ ಸಾರ್ವಜನಿಕ ಸುತ್ತೋಲೆಯನ್ನು ಆದಷ್ಟು ಶೀಘ್ರವಾಗಿ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ಮಾತನಾಡಿ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಲುವಾಗಿ ಚೈಲ್ಡ್ ಮ್ಯಾರೇಜ್ ಪ್ರಿವೆನ್ಸನ್ ಪ್ರೊಟೆಕ್ಷನ್ ಕಮಿಟಿ ಕ್ರಿಯಾ ಶೀಲವಾಗಬೇಕು. ಬಾಲ್ಯವಿವಾಹ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಗ್ರಾಮಸಭೆಗಳು, ಎಲ್ಲಾ ಶಾಲೆಗಳ ಶಾಲಾ ಅಭಿವೃದ್ಧಿ ಸಮಿತಿ, ಬಾಲವಿಕಾಸ ಸಮಿತಿ, ಮಕ್ಕಳ ಕಲ್ಯಾಣ ಸಮಿತಿಗಳು ನಿಗದಿತ ಕಾಲಮಿತಿಯಲ್ಲಿ ಸಭೆಗಳನ್ನು ನಡೆಸಿ ಕಾರ್ಯ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು ಎಂದರು. 

ಪ್ರತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗುವ ಮದುವೆಗಳ ಬಗ್ಗೆ ಆಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮಾಹಿತಿ ನೀಡಬೇಕು. ಎಲ್ಲಾ ಗ್ರಾಮಪಂಚಾಯಿತಿ ಅಧಿಕಾರಿಗಳು ಜನರಿಗೆ ಬಾಲ್ಯವಿವಾಹಕ್ಕೆ ಮುಂದಾಗದಂತೆ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಬೇಕು. ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತಿ 15ದಿನಗಳಿಗೆ ಪ್ರಗತಿ ಪರಿಶೀಲನಾ ಸಭೆಗಳನ್ನು ಏರ್ಪಡಿಸಬೇಕು. ಬಾಲ್ಯವಿವಾಹ ನಿರ್ಮೂಲನೆಗಾಗಿ ಆಕಾಶವಾಣಿ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಬೇಕು. ಜಿಲ್ಲಾಮಟ್ಟದಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ಡಿವೈಎಸ್‍ಪಿ ಲಕ್ಷ್ಮಯ್ಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚಲುವರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *