ಚಾಮರಾಜನಗರ,: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ 24 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ 66/11 ಕೆವಿ ವಿದ್ಯುತ್ ಉಪಕೇಂದ್ರಗಳ ನೂತನ ಕಟ್ಟಡಗಳನ್ನು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಇಂದು ಉದ್ಘಾಟಿಸಿದರು.
ಚಾಮರಾಜನಗರ ತಾಲೂಕಿನ ವೀರನಪುರ ಗ್ರಾಮದಲ್ಲಿಂದು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ 66/11 ಕೆವಿ ನೂತನ ವಿದ್ಯುತ್ ಉಪಕೇಂದ್ರದ ಕಾರ್ಯಾರಂಭಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಅಲ್ಲಿಯೇ ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ (ಅರೇಪುರ) ಗ್ರಾಮದಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ವಿದ್ಯುತ್ ಉಪಕೇಂದ್ರದ ಶಿಲಾಫಲಕ ಅನಾರಣಗೊಳಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ವೀರನಪುರ ಹಾಗೂ ಹೊರೆಯಾಲ (ಅರೇಪುರ) ಗ್ರಾಮದ ನೂತನ ವಿದ್ಯುತ್ ಉಪಕೇಂದ್ರ ಯೋಜನೆಗಳಿಗೆ ಚಾಲನೆ ದೊರೆತಿದ್ದು, ಇದರಿಂದ ಆಯಾ ಗ್ರಾಮಗಳ ಸುತ್ತಮುತ್ತಲಿನ ರೈತಾಪಿ ಜನರಿಗೆ ಸಮರ್ಪಕ ವಿದ್ಯುತ್ ಸರಬರಾಜಿಗೆ ಅನುಕೂಲವಾಗಲಿದೆ. ವಿದ್ಯುತ್ ಸಮಸ್ಯೆಗಳಿಗೆ ಸುಧಾರಣೆ ತರುವ ನಿಟ್ಟಿನಲ್ಲಿ ಉಪಕೇಂದ್ರಗಳು ಕಾರ್ಯಾರಂಭ ಮಾಡಲಿವೆ ಎಂದರು.
ರಾಜ್ಯಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಒತ್ತು ನೀಡಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡವರು ಹಾಗೂ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಸಮಾಜದ ಎಲ್ಲಾ ವರ್ಗಗಳ ಜನರ ಅರ್ಥಿಕ ಸ್ಥಿರತೆಗೂ ಕಾರಣವಾಗಿದೆ ಎಂದು ಸಚಿವರು ಕಾಡಂಚಿನ ಜನರಿಗೆ ಸತತ 7 ಗಂಟೆಗಳ ಕಾಲ ವಿದ್ಯುತ್ ಪೂರೈಸಿ ಸಾರ್ವಜನಿಕರಿಂದ ಯಾವುದೇ ದೂರುಗಳು ಬರದಂತೆ ಗಮನ ಹರಿಸುವಂತೆ ಸ್ಥಳದಲ್ಲಿಯೇ ಇದ್ದ ವಿದ್ಯುತ್ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಎಂ.ಎಸ್.ಐ.ಎಲ್ ಅಧ್ಯಕ್ಷರಾದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಯಾವುದೇ ನದಿಮೂಲಗಳಿಂದ ನೀರಿನ ವ್ಯವಸ್ಥೆ ಇಲ್ಲದ ಹಾಗೂ ಮಳೆ ಆಶ್ರಿತ ಚಾಮರಾಜನಗರ ತಾಲೂಕಿನ ಅಭಿವೃದ್ಧಿಗಾಗಿ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ತಾಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸಲು ಕ್ರಮ ವಹಿಸಲಾಗುತ್ತಿದೆ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಉಪಕೇಂದ್ರಗಳನ್ನು ತಾಲೂಕಿನಲ್ಲಿ ಸ್ಥಾಪಿಸಲಾಗುತ್ತಿದೆ. ಈ ಪೈಕಿ ವೀರನಪುರ ವಿದ್ಯುತ್ ಉಪಕೇಂದ್ರವು ಒಂದಾಗಿದೆ. ಉಪಕೇಂದ್ರ ಸ್ಥಾಪನೆಯಿಂದ 1.20 ಲಕ್ಷ ಮೆಗಾವ್ಯಾಟ್ ವಿದ್ಯುತ್ ಉಳಿತಾಯವಾಗಲಿದ್ದು, ಈ ಭಾಗದ ಜನರಿಗೆ ಸಾಕಷ್ಟು ಉಪಯೋಗವಾಗಲಿದೆ ಎಂದರು.
ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚುಡಾ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ನಂಜದೇವನೊಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೇಕರಪ್ಪ, ಉಪಾಧ್ಯಕ್ಷರಾದ ಗುರುಮಲ್ಲಪ್ಪ, ಸದಸ್ಯರಾದ ಮಂಜುಳ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಅಧೀಕ್ಷರ ಎಂಜಿನಿಯರ್ ರಮೇಶ್, ಕಾರ್ಯನಿರ್ವಾಹಕ ಎಂಜಿನಿಯರ್ ಪ್ರೀತಮ್, ನಿಗಮದ ಹಿರಿಯ ಅಧಿಕಾರಿಗಳು, ಯೋಜನಾ ವ್ಯವಸ್ಥಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.