ಸಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಭೇಟಿ : ಸಂತ್ರಸ್ತರಿಗೆ ಸಾಂತ್ವನ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿ ನಗರದ ವೈದ್ಯಕೀಯ ಕಾಲೇಜು (ಸಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಗ್ರಾಮವೊಂದರ ಸಂತ್ರಸ್ತರನ್ನು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.

ಚಾಮರಾಜನಗರದ ಹೊರವಲಯದ ಯಡಪುರ ಬಳಿ ಇರುವ ವೈದ್ಯಕೀಯ ಕಾಲೇಜಿನ ಬೋಧನ ಆಸ್ಪತ್ರೆಯಲ್ಲಿ ಸಂತ್ರಸ್ತರು ಪಡೆಯುತ್ತಿರುವ ಚಿಕಿತ್ಸೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಾದ ವೆಂಕಟೇಶ್ ಅವರ ಜೊತೆಗೆ ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಮಹದೇವಪ್ಪ ಅವರು ಸಹ  ಭೇಟಿ ಮಾಡಿ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.  

ಸಂತ್ರಸ್ತರ ಆರೋಗ್ಯ ಕ್ಷೇಮವನ್ನು ವಿಚಾರಿಸಿದ ಸಚಿವರುಗಳು ಸಂತ್ರಸ್ತರು ಅದಷ್ಟು ಬೇಗನೇ ಚೇತರಿಸಿಕೊಳ್ಳಲು ಸೂಕ್ತ ಚಿಕಿತ್ಸೆ ನೀಡುವಂತೆ ಸ್ಥಳದಲ್ಲಿಯೇ ಇದ್ದ ವೈದ್ಯರಿಗೆ ಸೂಚಿಸಿದರು. ಸಂತ್ರಸ್ತರು ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಆರೋಗ್ಯ ಪರಿಸ್ಥಿತಿ ಹೇಗಿತ್ತು ?, ಈಗ ಹೇಗಿದೆ ಎಂಬುದರ ಸವಿವರ ಮಾಹಿತಿ ಪಡೆದ ಸಚಿವರುಗಳು ಬಳಿಕ ಸಂತ್ರಸ್ತರಿಗೆ ನಿಮಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು, ಧೈರ್ಯವಾಗಿರುವಂತೆ ಭರವಸೆ ತುಂಬಿದರು. 

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಕಾಡಾ ಅಧ್ಯಕ್ಷರಾದ ಮರಿಸ್ವಾಮಿ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ, ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪದ್ಮಿನಿ ಸಾಹು, ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಉಪ  ಸಂರಕ್ಷಣಾಧಿಕಾರಿ ದೀಪಾ ಜೆ. ಕಂಟ್ರಾಕ್ಟರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ವೈದ್ಯಕೀಯ ಕಾಲೇಜಿನ ಸ್ಥಾನಿಕ ವೈದ್ಯಾಧಿಕಾರಿ ಡಾ. ಕೃಷ್ಣಪ್ರಸಾದ್, ಇತರರು ಇದ್ದರು.

Leave a Reply

Your email address will not be published. Required fields are marked *