ಕಾಗಲವಾಡಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಭೇಟಿ : ಸ್ತ್ರೀ ಸೌಖ್ಯ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಕ್ಯಾನ್ಸರ್ ತಪಾಸಣಾ ಶಿಬಿರ ವೀಕ್ಷಣೆ

ಚಾಮರಾಜನಗರ: ಸ್ತ್ರೀ ಸೌಖ್ಯ ಕಾರ್ಯಕ್ರಮದಡಿ ಮಹಿಳೆಯರಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿ ಆರಂಭದಲ್ಲಿಯೇ ರೋಗ ಪತ್ತೆಹಚ್ಚಿ ಚಿಕಿತ್ಸೆ ನೀಡುವ ಸಲುವಾಗಿ ನಡೆಸಲಾಗುತ್ತಿರುವ ಕ್ಯಾನ್ಸರ್ ತಪಾಸಣಾ ಶಿಬಿರಕ್ಕೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಇಂದು ಭೇಟಿ ನೀಡಿ ವೀಕ್ಷಿಸಿದರು. 

ಚಾಮರಾಜನಗರ ತಾಲೂಕಿನ ಕಾಗಲವಾಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕ್ಯಾನ್ಸರ್ ತಪಾಸಣಾ ಶಿಬಿರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಬೆಳಿಗ್ಗೆಯೇ ಭೇಟಿ ನೀಡಿ ವೀಕ್ಷಣೆ ಮಾಡಿದರು. 

ಇದುವರೆಗೆ ಎಷ್ಟು ಕಡೆ ಇಂತಹ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಎಷ್ಟು ಮಂದಿ ನೊಂದಾಯಿಸಿಕೊಳ್ಳುತ್ತಿದ್ದಾರೆ. ತಪಾಸಣೆ, ಚಿಕಿತ್ಸೆಗೆ ಒಳಗಾಗಿರುವವರ ಸಂಖ್ಯೆ ಎಷ್ಟು ಎಂಬುದನ್ನು ಜಿಲ್ಲಾ ಉಸ್ತುವಾರಿ ಸಚಿವರು ಪ್ರಶ್ನಿಸಿ ಮಾಹಿತಿ ಪಡೆದುಕೊಂಡರು. 

ಜಿಲ್ಲಾಧಿಕಾರಿ ಶ್ರೀರೂಪ ಅವರು ವಿವರಿಸಿ ಗರ್ಭಕಂಠ ಕ್ಯಾನ್ಸರ್, ಸ್ತನ ಕ್ಯಾನ್ಸರ್ ತಪಾಸಣೆಯನ್ನು ಮಹಿಳೆಯರಿಗೆ ನಡೆಸಲಾಗುತ್ತಿದೆ. ಪುರುಷರಿಗೆ ಬಾಯಿ ಕ್ಯಾನ್ಸರ್ ತಪಾಸಣೆಯನ್ನೂ ಸಹ ಮಾಡಲಾಗುತ್ತಿದೆ. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಮೊಬೈಲ್ ಕ್ಯಾನ್ಸರ್ ತಪಾಸಣಾ ಘಟಕ (ಪಿಂಕ್ ಬಸ್) ದೊಂದಿಗೆ ವೈದ್ಯರು ಸಿಬ್ಬಂದಿ ಸ್ಥಳಕ್ಕೆ ಬಂದು ತಪಾಸಣೆ ಮಾಡುತ್ತಿದ್ದಾರೆ. ಈ ಘಟಕದಲ್ಲಿಯೇ ಎಲ್ಲಾ  ವೈದ್ಯಕೀಯ ಪರೀಕ್ಷೆಗಳ ವ್ಯವಸ್ಥೆಗಳು ಇವೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಅವರು ಮಾತನಾಡಿ ಇದುವರೆಗೆ ಏರ್ಪಡಿಸಲಾಗಿರುವ ತಪಾಸಣಾ ಶಿಬಿರ, ದೊರಕುತ್ತಿರುವ ವೈದ್ಯಕೀಯ ಪರೀಕ್ಷೆ, ಔಷದ ಚಿಕಿತ್ಸೆಗಳ ಕುರಿತು ಸಚಿವರಿಗೆ ಮಾಹಿತಿ ನೀಡಿದರು. 

ಕ್ಯಾನ್ಸರ್ ತಪಾಸಣೆಗಾಗಿ ಚಾಮರಾಜನಗರ ಜಿಲ್ಲೆಯು ವಿಶೇಷವಾಗಿ ರೂಪಿಸಿರುವ ಸ್ತ್ರೀ ಸೌಖ್ಯ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ. ಜಿಲ್ಲೆಯ ಜನರಿಗೆ ಅನುಕೂಲವಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. 

ಬಳಿಕ ಕಾಗಲವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಅಲ್ಲಿ ಜನರಿಗೆ ಒದಗಿಸಲಾಗುತ್ತಿರುವ ವೈದ್ಯಕೀಯ ಚಿಕಿತ್ಸೆ, ಸೇವೆ ಕುರಿತು ಮಾಹಿತಿ ಪಡೆದರು. ಅಲ್ಲಿನ ವೈದ್ಯರು, ಇನ್ನಿತರ ಸಿಬ್ಬಂದಿಯೊಂದಿಗೆ ಮಾತನಾಡಿ ಪ್ರತಿನಿತ್ಯ ಎಷ್ಟು ಮಂದಿ ಆರೋಗ್ಯ ಸೇವೆಗಾಗಿ ಭೇಟಿ ನೀಡುತ್ತಿದ್ದಾರೆ. ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಉತ್ತಮವಾಗಿದೆಯೇ, ಔಷಧೋಪಾಚಾರ ಚೆನ್ನಾಗಿ ನೀಡಲಾಗುತ್ತಿದೆಯೇ ಎಂದು ಪ್ರಶ್ನಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದಿದ್ದ ಸಾರ್ವಜನಿಕರೊಂದಿಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಮಾತನಾಡಿ ಅಲ್ಲಿನ ಸೇವೆಯ ಬಗ್ಗೆ ತಿಳಿದುಕೊಂಡರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ತಹಶೀಲ್ದಾರ್ ಗಿರಿಜಾ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿವಾರಣಾಧಿಕಾರಿ ಡಾ. ಪಿ. ಚಂದ್ರಶೇಖರ್, ಜಿಲ್ಲಾ ಕಾರ್ಯಕ್ರಮ ಅಭಿವೃದ್ದಿ ಅಧಿಕಾರಿ ಡಾ. ರಾಜೇಶ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜನಾರ್ಧನ್, ಇತರರು ಇದ್ದರು.

Leave a Reply

Your email address will not be published. Required fields are marked *