ಕಾರ್ಮಿಕರ ಸೌಲಭ್ಯಗಳ ಅರಿವು ಪ್ರಚಾರಕ್ಕೆ ಜಿಲ್ಲಾ ನ್ಯಾಯಾಧೀಶರಿಂದ ಚಾಲನೆ

ಚಾಮರಾಜನಗರ: ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿಂದು ಕಾರ್ಮಿಕ ಇಲಾಖೆಯ ಯೋಜನೆಗಳ ಕುರಿತ ಪ್ರಚಾರ ವಾಹನಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಜಿಲ್ಲಾ ನ್ಯಾಯಾಧೀಶರು ಕಾರ್ಮಿಕ ಇಲಾಖೆ ವತಿಯಿಂದ ನೀಡಲಾಗುವ ಸೌಲಭ್ಯಗಳಿಗೆ ನೊಂದಣಿಯಾಗಬೇಕು. ಅಸಂಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ನೀಡಲಾಗುವ ವಿವಿಧ ಸೌಲಭ್ಯಗಳನ್ನು ಪಡೆಯಲು ನಿಗದಿಪಡಿಸಿರುವ ಕಾರ್ಡ್‍ಗಳನ್ನು ಪಡೆಯಬೇಕು. ಇದಕ್ಕಾಗಿ ನಾವು ಸಹ ಸಾಧ್ಯವಿರುವ ಎಲ್ಲಾ ಕಡೆ ಪ್ರಚಾರ ಮಾಡಲಿದ್ದೇವೆ ಎಂದರು. 

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ಅವರು ಮಾತನಾಡಿ 23 ಅಸಂಘಟಿತ ವಲಯಗಳ ಕಾರ್ಮಿಕರು ನೊಂದಣಿಯಿಂದ ಪ್ರಯೋಜನ ಪಡೆಯಬಹುದಾಗಿದೆ. ಪಿಂಚಣಿ, ವೈದ್ಯಕೀಯ, ಶೈಕ್ಷಣಿಕ, ಆರೋಗ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಪಡೆಯಬಹುದು. ಸರ್ಕಾರದ ಯೋಜನೆಗಳನ್ನು ಕಾಮಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ. ಎಂ.ಸವಿತಾ ಅವರು ಮಾತನಾಡಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಡಾ. ಬಿ.ಆರ್. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಯಡಿ 23 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ ಎಂದರು.

ಯೋಜನೆಯಡಿ ಅಪಘಾತ ಪರಿಹಾರ ಸೌಲಭ್ಯ ದೊರೆಯಲಿದೆ. ಅಪಘಾತದಿಂದ ಮರಣ ಹೊಂದಿದ್ದಲ್ಲಿ ನಾಮನಿರ್ದೇಶಿತರಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಅಪಘಾತದಿಂದ ದುರ್ಬಲತೆ ಹೊಂದಿದ್ದಲ್ಲಿ ಪರಿಹಾರ ನೀಡಲಾಗುತ್ತದೆ. 50 ಸಾವಿರ ರೂ.ವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ಮಾಡಲಾಗುತ್ತದೆ. ಇತರೆ ಕಾರ್ಮಿಕರಿಗೂ ವಿವಿಧ ಸೌಲಭ್ಯಗಳ ಪ್ರಯೋಜನ ಪಡೆಯಬಹುದಾಗಿದೆ. ಈ ಎಲ್ಲ ಮಾಹಿತಿ ಪ್ರಚಾರಕ್ಕಾಗಿ ವಾಹನ ಸಂಚರಿಸಲಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ. ಎಂ. ಸವಿತಾ ಅವರು ತಿಳಿಸಿದರು.  

ವಕೀಲರ ಸಂಘದ ಅಧ್ಯಕ್ಷರಾದ ನಂಜಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಆರ್. ರಂಗಸ್ವಾಮಿ, ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕರಾದ ಮಹೇಶ್, ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *