ಚಾಮರಾಜನಗರ: ಮಳೆಗಾಲ ಆರಂಭವಾಗಿರುವುದರಿಂ ದ ಸಾರ್ವಜನಿಕ ಆರೋಗ್ಯ ಸುರಕ್ಷತೆಗೆ ಸಂಬಂಧಿಸಿದಂತೆ ಅವಶ್ಯವಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಅನುಷ್ಠಾನ ಕುರಿತು ನಡೆದ ಅಂತರ ಇಲಾಖಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ನೀರಿನ ಮೂಲಗಳು ಕಲುಷಿತವಾಗದಂತೆ ಪರಿಶೀಲನೆ ನಡೆಸಬೇಕು. ನೀರಿನ ಶುದ್ಧತೆ ಕುರಿತು ವಾರಕ್ಕೆರಡು ಬಾರಿ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಡೆಂಗ್ಯೂ ರೋಗಗಳು ಉಲ್ಭಣವಾಗದಂತೆ ಎಚ್ಚರ ವಹಿಸಿ ಸೊಳ್ಳೆಗಳ ನಿಯಂತ್ರಣಕ್ಕೆ ಮುಂದಾಗಬೇಕು. ಸಾಂಕ್ರಾಮಿಕ ರೋಗಗಳ ತಡೆಗಾಗಿ ಚರಂಡಿಗಳಲ್ಲಿ ಕೊಳಚೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಜಿಲ್ಲೆಯಲ್ಲಿ ನಾಯಿಕಡಿತ ಹಾಗೂ ಹಾವುಕಡಿತಕ್ಕೊಳಗಾದವರಿಗೆ ನೀಡುವ ಔಷಧಿಗಳ ದಾಸ್ತಾನು ಇಟ್ಟುಕೊಳ್ಳಬೇಕು. ನಾಯಿಕಡಿತ ಹಾಗೂ ಹಾವುಕಡಿತ ಪ್ರಕರಣಗಳಲ್ಲಿ ತ್ವರಿತವಾಗಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುವ ಬಗ್ಗೆ ಜಾಗೃತಿ ಮೂಡಿಸಬೇಕು. ಬೀದಿಬದಿಯಲ್ಲಿ ಮಕ್ಕಳನ್ನು ಬಿಟ್ಟು ಕೂಲಿಕೆಲಸ ಮಾಡುವ ವಲಸೆ ಕಾರ್ಮಿಕರ ಮಕ್ಕಳನ್ನು ತಾತ್ಕಾಲಿಕವಾಗಿ ಹತ್ತಿರದ ಅಂಗನವಾಡಿಗಳಲ್ಲಿ ಬಿಡುವ ವ್ಯವಸ್ಥೆ ಮಾಡಬೇಕು ಎಂದರು.
ಮಲೇರಿಯಾ, ತಂಬಾಕು ನಿಯಂತ್ರಣ ಮತ್ತು ತಾಯಿ ಶಿಶು ಮರಣ ಸಂಭವಿಸದಂತೆ ವಹಿಸಬೇಕಿರುವ ಮುನ್ನೆಚ್ಚರಿಕೆ ಹಾಗೂ ಇತರೆ ಆರೋಗ್ಯ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ವಿವರವಾಗಿ ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಆರೋಗ್ಯ ಇಲಾಖೆ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಇತರೆ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.