ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ ಏಪ್ರಿಲ್ 24ರಂದು ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಶಾಸಕರಾದ ಎಂ.ಆರ್. ಮಂಜುನಾಥ್, ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಪೂರ್ವ ಸಿದ್ದತೆಗಳನ್ನು ಪರಿಶೀಲಿಸಿದರು.
ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು, ಸಚಿವರು ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ ವ್ಯಾಪಕವಾಗಿ ವಿವಿಧ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಿದ್ದತೆಗಳ ಸಂಬಂಧ ಪರಿಶೀಲನೆ ನಡೆಸಿದರು.
ಶಾಶ್ವತ ಹೆಲಿಪ್ಯಾಡ್ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿ ಕೈಗೊಳ್ಳಬೇಕಾದ ಪೂರ್ವ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು. ಪಾರ್ಕಿಂಗ್ ಗೆ ನಿಗದಿಪಡಿಸಿರುವ ಜಾಗದಲ್ಲಿ ನಿರ್ವಹಿಸಬೇಕಿರುವ ಕೆಲಸ ಕಾರ್ಯಗಳ ಬಗ್ಗೆ ನಿರ್ದೇಶನ ನೀಡಿದರು. ಹೆಚ್ಚುವರಿ ಹೆಲಿಪ್ಯಾಡ್ ನಿಮಾಣ ಮಾಡುವ ಸಂಬಂಧ ಸ್ಥಳ ಪರಿಶೀಲಿಸಿದರು.
ಮುಖ್ಯಮಂತ್ರಿಗಳು, ಸಚಿವರು, ಗಣ್ಯರು, ಹಿರಿಯ ಅಧಿಕಾರಿಗಳ ವಾಸ್ತವ್ಯಕ್ಕಾಗಿ ನಿಗಧಿಯಾಗಿರುವ ವಸತಿಗೃಹಗಳಿಗೆ ಭೇಟಿಕೊಟ್ಟು ಕೈಗೊಳ್ಳಲಾಗಿರುವ ಸ್ವಚ್ಚತೆ, ಸಿದ್ದತೆ, ಇನ್ನಿತರೆ ವ್ಯವಸ್ಥೆಗಳನ್ನು ವೀಕ್ಷಿಸಿದರು. ವಸತಿಗೃಹ ಬಳಿ ವಾಹನಗಳ ನಿಲುಗಡೆಗೆ ಇರುವ ಸ್ಥಳವನ್ನು ಸಹ ವೀಕ್ಷಿಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.
ಸಚಿವ ಸಂಪುಟ ಸಭೆ ನಿಗದಿಯಾಗಿರುವ ದೀಪದಗಿರಿ ಒಡ್ಡುವಿನ ಸ್ಥಳಕ್ಕೆ ಭೇಟಿ ನೀಡಿ ಪೂರ್ವ ತಯಾರಿ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಸಭೆ ನಡೆಯುವ ಸ್ಥಳದಲ್ಲಿ ಯಾವ ಯಾವ ಸಿದ್ದತೆಗಳು ಇರಬೇಕು ಹಾಗೂ ವ್ಯವಸ್ಥೆಗಳು ಕೈಗೊಳ್ಳುತ್ತಿರುವ ಬಗ್ಗೆ ವಿವರವಾಗಿ ವೀಕ್ಷಿಸಿ ಸಲಹೆ ಸೂಚನೆಗಳನ್ನು ಸಂಬಂಧಪಟ್ಟವರಿಗೆ ನೀಡಿದರು.
ಶಿಷ್ಠಾಚಾರ, ಸ್ವಾಗತ, ಭದ್ರತೆ ಹಾಗೂ ಸಚಿವ ಸಂಪುಟ ಸಭೆ ಸ್ಥಳದಲ್ಲಿ ಯಾವುದೇ ಕೊರತೆಯಾಗದಂತೆ ಎಲ್ಲಾ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು, ಶಾಸಕರು ತಿಳಿಸಿದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯುವ ಅವಕಾಶ ದೊರೆತಿದೆ. ಇದು ನಮ್ಮ ವಿಭಾಗಕ್ಕೆ ಮುಖ್ಯವಾಗಿದೆ. ಅತ್ಯಂತ ಪ್ರಮುಖವಾಗಿರುವ ಸಚಿವ ಸಂಪುಟ ಸಭೆಯ ಪೂರ್ವಭಾವಿ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಉತ್ಸಾಹದಿಂದ ನಿರ್ವಹಿಸುತ್ತಿದ್ದು, ಇದರ ಯಶಸ್ಸಿಗೆ ಒಂದು ತಂಡವಾಗಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಮಾತನಾಡಿ ಸಚಿವರ ಸಂಪುಟ ಸಭೆ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ನಡೆಯುತ್ತಿರುವುದು ಸಂತಸದ ವಿಷಯವಾಗಿದೆ. ಕ್ಷೇತ್ರ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ದಿಯ ಉದ್ದೇಶದ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ ಎಂದು ತಿಳಿಸಿದರು.
ಬಳಿಕ ನಾಗಮಲೆ ಭವನದಲ್ಲಿ ಸಚಿವ ಸಂಪುಟ ಸಭೆ ನಿರ್ವಹಣೆಗಾಗಿ ರಚಿಸಲಾಗಿರುವ ಅಧಿಕಾರಿಗಳನ್ನೊಳಗೊಂಡ ಸಮಿತಿಯೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು. ನಿಯೋಜಿತ ಸಮಿತಿಗಳು ನಿಗದಿಪಡಿಸಲಾಗಿರುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶವಾಗಬಾರದು. ಸಾಕಷ್ಟು ಮುಂಚಿತವಾಗಿಯೇ ಎಲ್ಲಾ ಕೆಲಸಗಳು ಪೂರ್ಣಗೊಂಡಿರಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಶಾಸಕರಾದ ಎಂ.ಆರ್. ಮಂಜುನಾಥ್ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು, ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ಡಿವೈಎಸ್ಪಿ ಧರ್ಮೇಂದ್ರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಮಹೇಶ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.
ದೀಪದಗಿರಿ ಒಡ್ಡುವಿನಲ್ಲಿ ಸ್ಥಳ ಪರಿಶೀಲನೆ ವೇಳೆ ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಹಾಡಿಗಳಲ್ಲಿ ಜನರಿಗೆ ತುರ್ತು ಸಂದರ್ಭಗಳಲ್ಲಿ ನೆರವಾಗಲು ಪ್ರಾಧಿಕಾರದಿಂದ ನಿಯೋಜಿಸಲಾಗಿರುವ ನೂತನ ಅಂಬುಲೆನ್ಸ್ ವ್ಯವಸ್ಥೆಗೆ ಚಾಲನೆ ನೀಡಿದರು.