ಚಾಮರಾಜನಗರ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮೈಸೂರು ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್ ಅವರು ಪುಣಜನೂರಿನಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಚಾಮರಾಜನಗರ ತಾಲೂಕಿನ ಪುಣಜನೂರಿನ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿಂದು ನಮ್ಮ ನಡಿಗೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಡೆಗೆ ಕಾರ್ಯಕ್ರಮದಡಿ ಆಯೋಜಿಸಲಾಗಿದ್ದ ತಾಲೂಕುಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್ ಅವರು ಗ್ಯಾರಂಟಿ ಯೋಜನೆಗಳನ್ನು ಪರಿಶೀಲಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್ ಅವರು ಕರ್ನಾಟಕ ಸರ್ಕಾರವು ಬಡವರು, ಮಧ್ಯಮ ವರ್ಗದವರ ಆರ್ಥಿಕ ಸ್ವಾವಲಂಬನೆಗಾಗಿ ಇಡೀ ದೇಶದಲ್ಲಿಯೇ ಮೊದಲಬಾರಿಗೆ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಜಾರಿಗೊಳಿಸಿ ಇತರೆ ರಾಜ್ಯಗಳಿಗೂ ಮಾದರಿಯಾಗಿದೆ. ಅದರಲ್ಲೂ ಚಾಮರಾಜನಗರ ಜಿಲ್ಲೆ ಯೋಜನೆಗಳ ಅನುಷ್ಠಾನದಲ್ಲಿ ಉತ್ತಮ ಪ್ರಗತಿ ಸಾಧಿಸಿ ಮುಂಚೂಣಿಯಲ್ಲಿರುವುದು ಅಭಿನಂದನೀಯವಾಗಿದೆ ಎಂದರು.
ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಹಿಳೆಯರು ಹಾಗೂ ದುರ್ಬಲ ವರ್ಗದವರ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಂಡಿವೆ. ಗೃಹಲಕ್ಷ್ಮಿ ಯೋಜನೆಯಡಿ 2,76,226 ಮಂದಿ ನೊಂದಣಿ ಮೂಲಕ ರಾಜ್ಯದಲ್ಲಿಯೇ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, ಇತರೆ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ. ಪ್ರತಿ ತಿಂಗಳು ಅಧಿಕಾರಿಗಳ ಸಭೆ ನಡೆಸಿ ಯೋಜನೆಗಳ ಪರಿಣಾಮಕಾರಿ ಪ್ರಗತಿಗೆ ಶ್ರಮಿಸಲಾಗುತ್ತಿದೆ. ಕಾಡಂಚಿನ ಜನರಿಗೂ ಗ್ಯಾರಂಟಿ ಯೋಜನೆಗಳು ತಲುಪುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಬಳಿಕ ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್ ಅವರು ಕುಂದುಕೊರತೆಗಳನ್ನು ಆಲಿಸಿದರು.
ಗೃಹಲಕ್ಷ್ಮೀ ಯೋಜನೆಯಡಿ 2 ಸಾವಿರ ರೂ. ಪ್ರತಿತಿಂಗಳು ಖಾತೆಗೆ ಜಮೆಯಾಗಬೇಕು. ಶಕ್ತಿ ಯೋಜನೆಯಡಿ ಮಹಿಳೆಯರ ಪ್ರಯಾಣಕ್ಕೆ ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿನ ಬಸ್ ವ್ಯವಸ್ಥೆ ಮಾಡಬೇಕು. ತಾಲೂಕಿನ ಕಾಡಂಚಿನಲ್ಲಿರುವ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ಇದೆ. ನಿರಂತರವಾಗಿ ಲೋಡ್ ಶೆಡ್ಡಿಂಗ್ ಆಗುತ್ತಿದೆ. ಕನಿಷ್ಠ 4 ಗಂಟೆಯಾದರೂ ವಿದ್ಯುತ್ ನೀಡಬೇಕು. ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಬುಡಕಟ್ಟು ಜನರು, ರೈತಾಪಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಜನರಿಗೆ ಮನೆಗಳಿಲ್ಲ. ನ್ಯಾಯಬೆಲೆ ಅಂಗಡಿಗಳನ್ನು ಪ್ರತಿದಿನವು ತೆರೆದು ಆಹಾರ ಪದಾರ್ಥ ವಿತರಿಸುವಂತೆ ಗ್ರಾಮಸ್ಥರೊಬ್ಬರು ಅಹವಾಲು ಸಲ್ಲಿಸಿದರು.
ಸಮಸ್ಯೆ ಸಂಬಂಧ ಪ್ರತಿಕ್ರಿಯಿಸಿದ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್ ಅವರು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ 2 ತಿಂಗಳ ಹಣ ಸದ್ಯದಲ್ಲಿಯೇ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಶಕ್ತಿ ಯೋಜನೆಯಡಿ ಪಂಚಾಯಿತಿ ವ್ಯಾಪ್ತಿಗೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗುವುದು. ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ನೀಡುವ ಬಗ್ಗೆ ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಲಾಗುವುದು. ಜಿಲ್ಲೆಯಲ್ಲಿ ಮನೆ ಇಲ್ಲದವರಿಗೆ ಸರ್ಕಾರವು 39 ಮನೆಗಳನ್ನು ಮಂಜೂರು ಮಾಡಿದೆ. ಗ್ಯಾರೆಂಟಿ ಯೋಜನೆಗಳ ಹೆಚ್ಚಿನ ನೊಂದಣಿಗಾಗಿ ದಾಖಲಾತಿಗಳು ಅವಶ್ಯವಾಗಿರುವ ಜನರಿಗೆ ಪಂಚಾಯಿತಿಮಟ್ಟದಲ್ಲಿ ಶಿಬಿರ ನಡೆಸಿ ದಾಖಲೆಗಳನ್ನು ಅಪ್ ಡೇಟ್ ಮಾಡಬೇಕು. ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಮುಂದಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಮೋನಾ ರೋತ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಸದಸ್ಯರಾದ ರವಿ, ಎನ್. ಸಿದ್ದರಾಜು, ಉಮಾಪತಿ, ರಾಜಶೇಖರ್, ಅಫ್ತರ್ ಪಾಷ, ದೇವರಾಜು, ರಾಚಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್ಕುಮಾರ್, ಇತರರು ಇದೇ ಸಂದರ್ಭದಲ್ಲಿ ಇದ್ದರು.
ಪುಣಜನೂರಿನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಗೂ ಮೊದಲು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್ ಹಾಗೂ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು ಅವರು ಪಂಚಾಯಿತಿ ವ್ಯಾಪ್ತಿಯ ಬೂದಿಪಡಗ ಗ್ರಾಮದಲ್ಲಿ ಬುಡಕಟ್ಟು ಜನಾಂಗದ ನಾಯಕರಾದ ಬಿರ್ಸಾ ಮುಂಡ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಜನರೊಂದಿಗೆ ಸಮಾಲೋಚನೆ, ಸಂವಾದ ನಡೆಸಿದರು.